Tuesday, July 28, 2026

BDA Apartments

Home Front Page ಪ್ರಸಕ್ತ ವರ್ಷದಲ್ಲಿ 6 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸುವ ಗುರಿ: ಸಚಿವ ಕೆ.ಹೆಚ್. ಮುನಿಯಪ್ಪ

ಪ್ರಸಕ್ತ ವರ್ಷದಲ್ಲಿ 6 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸುವ ಗುರಿ: ಸಚಿವ ಕೆ.ಹೆಚ್. ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಫೆಬ್ರವರಿ, 12,2026 (www.justkannada.in):  ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಅಂದಾಜು 6 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸುವ ಗುರಿಯನ್ನು ಹೊಂದಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ದೇವನಹಳ್ಳಿ ಟೌನ್ ನ ಕುರುಬರದೊಡ್ಡಿ ರಸ್ತೆಯಲ್ಲಿರುವ ಅಕ್ಷರ ದಾಸೋಹ ಕೇಂದ್ರದಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ವತಿಯಿಂದ 2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿಯನ್ನು ಖರೀದಿಸುವ ಕಾರ್ಯಕ್ಕೆ ಚಾಲನೆ ನೀಡಿ ಸಚಿವ ಕೆ.ಎಚ್ ಮುನಿಯಪ್ಪ ಅವರು ಮಾತನಾಡಿದರು.

ಪ್ರಸಕ್ತ ವರ್ಷ ಒಳ್ಳೆಯ ಬೆಲೆಯನ್ನು ಸರ್ಕಾರ ನಿಗದಿ ಪಡಿಸಿ ರಾಗಿ ಖರೀದಿಸುತ್ತಿದೆ. ರೈತರಿಂದ ನೇರವಾಗಿ ಖರೀದಿಸಿ ಅದರ ಹಣವನ್ನು ಯಾವುದೇ ಮಧ್ಯವರ್ತಿಗೆ ಆಸ್ಪದ ನೀಡದೇ ರೈತರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ನೇರವಾಗಿ ಸಂದಾಯ ಮಾಡಲಾಗುತ್ತದೆ. ಗುಣಮಟ್ಟದ ರಾಗಿ ಪೂರೈಕೆ ಆದಲ್ಲಿ ಮುಂದಿನ ವರ್ಷದಲ್ಲಿ 8 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸುವ ಗುರಿ ಇಟ್ಟುಕೊಂಡಿದೆ ಎಂದರು.

ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿದ್ದು ಮುಂದಿನ ದಿನಗಳಲ್ಲಿ ಹೊರ ರಾಜ್ಯಗಳಿಗೂ ರಾಗಿ ಪೂರೈಕೆ ಮಾಡುವ ಗುರಿ ಹೊಂದಲಾಗಿದೆ. ಬೇಡಿಕೆಯ ಆಧಾರದ ಮೇಲೆ ಬೇರೆ ಬೇರೆ ರಾಜ್ಯಗಳಿಗೆ ರಾಗಿ ಸರಬರಾಜು ಮಾಡಲಾಗುವುದು. ಗುಣಮಟ್ಟದ ರಾಗಿಯಿಂದ ಬೇಡಿಕೆ ಹೆಚ್ಚಾಗಲಿದೆ, ಇದರಿಂದ ರೈತರ ಬಳಿ ರಾಗಿ ಖರೀದಿಸುವ ಪ್ರಮಾಣ ಕೂಡ ಹೆಚ್ಚಾಗಲಿದೆ. ಹಾಗಾಗಿ ರೈತರು ಗುಣಮಟ್ಟದ ರಾಗಿ ನೀಡಬೇಕು ಎಂದರು.

ಪ್ರತಿ ಕ್ವಿಂಟಾಲ್ ರಾಗಿಗೆ ರೂ. 4886/- ನಿಗದಿ

2025-26 ನೇ ಸಾಲಿನ ಕನಿಷ್ಠ ಬೆಂಬಲ ಯೋಜನೆಯಡಿ ಪ್ರತಿ ಕ್ವಿಂಟಾಲ್ ರಾಗಿಗೆ ರೂ.4886/- ನಿಗದಿ ಪಡಿಸಲಾಗಿದೆ. ಪ್ರತಿ ರೈತರಿಂದ ಒಂದು ಎಕರೆಗೆ 10 ಕ್ವಿಂಟಾಲ್ ನಂತೆ ಗರಿಷ್ಟ 50 ಕ್ವಿಂಟಾಲ್ ಗಳನ್ನು ಮೀರದಂತೆ ಉತ್ತಮ ಗುಣಮಟ್ಟದ ರಾಗಿ ಖರೀದಿಸಲಾಗುವುದು. ಪ್ರಸಕ್ತ ಸಾಲಿನ ರಾಗಿ ಖರೀದಿ ಪ್ರಕ್ರಿಯೆಯಲ್ಲಿ ಎರಡು ಬಾರಿ ಬಯೋಮೆಟ್ರಿಕ್ ಬಳಕೆಯಾಗುತ್ತದೆ. ಒಂದು ಬಾರಿ ನೊಂದಣಿ ಸಂದರ್ಭದಲ್ಲಿ ಇನ್ನೊಂದು ರಾಗಿ ಖರೀದಿ ವೇಳೆಯಲ್ಲಿ ಹಾಗಾಗಿ ನೋಂದಾಯಿತ ರೈತರೇ ರಾಗಿ ಖರೀದಿ ಕೇಂದ್ರಗಳಿಗೆ ರಾಗಿ ತರುವುದು ಕಡ್ಡಾಯವಾಗಿರುತ್ತದೆ ಎಂದರು.

ತಾಲ್ಲೂಕುವಾರು ರೈತರ ನೋಂದಣಿ ವಿವರ:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು- 3678, ದೊಡ್ಡಬಳ್ಳಾಪುರ ತಾಲ್ಲೂಕು- 12687, ಹೊಸಕೋಟೆ ತಾಲೂಕು-1240,  ನೆಲಮಂಗಲ ತಾಲೂಕು- 5619 ಸೇರಿ ಒಟ್ಟು 23224 ರೈತರು ರಾಗಿ ಪೂರೈಕೆಗೆ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಗದೀಶ್ ಅವರು ಮಾತನಾಡಿ, ರಾಗಿ ಬೆಳೆ ರೈತರ ಪಾಲಿನ ಸಂಜೀವಿನಿ ಇದ್ದಂತೆ, ರಾಗಿ ಬೆಳೆ ಕಡಿಮೆ ನೀರಿನಲ್ಲೂ ಉತ್ತಮವಾಗಿ ಬೆಳೆಯಬಹುದು. ರೈತರು ರಾಗಿ ಖರೀದಿ ಕೇಂದ್ರಕ್ಕೆ ಗುಣಮಟ್ಟದ ರಾಗಿಯನ್ನು ಸರಬರಾಜು ಮಾಡಲು ಆದ್ಯತೆ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ  ಚಂದ್ರಕಾಂತ್, ತಹಶೀಲ್ದಾರ್ ಅನಿಲ್, ತಾ.ಪಂ ಇಒ ಶ್ರೀನಾಥ್ ಗೌಡ, ಗ್ಯಾರಂಟಿ ಪ್ರಾಧಿಕಾರದ ತಾಲ್ಲೂಕು ಅಧ್ಯಕ್ಷರಾದ ಜಗನ್ನಾಥ,  ಮುಖಂಡರಾದ ಮಂಜಣ್ಣ, ಪ್ರಸನ್ನ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

Key words: purchase, 6 lakh metric tones, millet, Minister, K.H. Muniyappa