ಬೆಂಗಳೂರು, ಆಗಸ್ಟ್,24,2026 (www.justkannada.in): ಉರ್ದು ಭಾಷೆ ಸೇರಿದಂತೆ ಈಗ ನಡೆಯುತ್ತಿರುವ 15 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆಯಲ್ಲಿ ಬಿಟ್ಟುಹೋಗಿರುವ ವಿಷಯಗಳ ಶಿಕ್ಷಕರ ನೇಮಕಾತಿಗೆ ಶೀಘ್ರದಲ್ಲೇ ಇನ್ನೊಂದು ಅಧಿಸೂಚನೆ ಹೊರಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಪ್ರಕಟಿಸಿದ್ದಾರೆ.
ಉರ್ದು ಸೇರಿದಂತೆ, ಇನ್ನೂ ನೇಮಕವಾಗಬೇಕಾಗಿರುವ ವಿಷಯಗಳ ಶಿಕ್ಷಕರ ನೇಮಕಾತಿಗೆ ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ. ಇದಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯ ಅನುಮತಿಗಾಗಿ ಕಳುಹಿಸಲಾಗಿದ್ದು, ಆರ್ಥಿಕ ಇಲಾಖೆಯ ಅನುಮತಿ ದೊರೆತ ಕೂಡಲೇ, ಸಚಿವ ಸಂಪುಟದ ಒಪ್ಪಿಗೆ ಪಡೆದು ಅಧಿಸೂಚನೆ ಹೊರಡಿಸಲಾಗುವುದು,” ಎಂದು ಅವರು ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ.
ಈಗ ನಡೆಯುತ್ತಿರುವ 15 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆಯಲ್ಲಿ ಉರ್ದು ಮಾಧ್ಯಮದ ಭಾಷಾ ಸೇರಿದಂತೆ ಬಿಟ್ಟು ಹೋದ ಬೇರೆ ಬೇರೆ ವಿಷಯಗಳ ಶಿಕ್ಷಕರನ್ನು ಹೊರತುಪಡಿಸಿರುವ ಕುರಿತು ವಿಧಾನ ಪರಿಷತ್ ಸದಸ್ಯರಾದ ಬಲ್ಕೀಷ್ ಬಾನು, ಎಂ. ನಾಗರಾಜು, ಶಿವಕುಮಾರ್ ಕೆ. ಹಾಗೂ ಡಿ.ಟಿ. ಶ್ರೀನಿವಾಸಗೌಡ ಅವರು ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, ಈ ಎಲ್ಲಾ ಶಿಕ್ಷಕರ ನೇಮಕಾತಿಗೆ ಇಲಾಖೆ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ವಿವರಿಸಿದರು.
“ಈ ವಿಚಾರಕ್ಕೆ ಸಂಬಂಧಿಸಿದಂತೆ ಸಭಾಪತಿ ಸಲೀಂ ಅಹಮದ್ ಅವರ ನೇತೃತ್ವದಲ್ಲಿ ಈಗಾಗಲೇ ಸಭೆ ನಡೆಸಿದ್ದೇವೆ. ಉರ್ದು ಹಾಗೂ ಬಿಟ್ಟುಹೋಗಿರುವ ಇತರೆ ವಿಷಯಗಳ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಬದ್ಧವಾಗಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ,” ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.
ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಕಳುಹಿಸಲಾಗಿದೆ. ಈ ಕುರಿತು ಸಚಿವ ಸಂಪುಟದಲ್ಲಿಯೂ ಚರ್ಚೆ ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉರ್ದು ಸೇರಿದಂತೆ ಬಿಟ್ಟುಹೋಗಿರುವ ವಿಷಯಗಳ ಶಿಕ್ಷಕರ ನೇಮಕಾತಿಗೆ ಮೌಖಿಕವಾಗಿ ಸಮ್ಮತಿ ಸೂಚಿಸಿದ್ದಾರೆ ಎಂದು ಸಚಿವರು ತಿಳಿಸಿದರು.
ಸಚಿವರ ಉತ್ತರಕ್ಕೆ ಸಂತಸ ವ್ಯಕ್ತಪಡಿಸಿದ ವಿಧಾನ ಪರಿಷತ್ ಸದಸ್ಯೆ ಬಲ್ಕೀಷ್ ಬಾನು, ಉರ್ದು ಸೇರಿದಂತೆ ಬಿಟ್ಟುಹೋಗಿರುವ ವಿಷಯಗಳ ಶಿಕ್ಷಕರ ನೇಮಕಾತಿಗೆ ಸ್ಪಂದಿಸಿ ಸ್ಪಷ್ಟ ಭರವಸೆ ನೀಡಿದ ಸಚಿವ ಮಧು ಬಂಗಾರಪ್ಪ ಅವರಿಗೆ ಸದನದಲ್ಲಿ ಕೃತಜ್ಞತೆ ಸಲ್ಲಿಸಿದರು.
Key words: Appointment, teachers, other subjects, Urdu, soon – Minister, Madhu Bangarappa







