ಈ ವರ್ಷ ಇನ್ನೂ 10 ಸಾವಿರ ಶಿಕ್ಷಕರ ಭರ್ತಿಗೆ ಚಿಂತನೆ- ಸಚಿವ ಮಧು ಬಂಗಾರಪ್ಪ.

ಕಲಬುರಗಿ,ಮಾರ್ಚ್,8,2024(www.justkannada.in):  ರಾಜ್ಯದ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಹಿನ್ನೆಲೆ, ಈ ವರ್ಷ ಇನ್ನೂ 10 ಸಾವಿರ ಶಿಕ್ಷಕರ ಭರ್ತಿಗೆ ಚಿಂತನೆ ನಡೆಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ  ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಚುರುಕುಗೊಳಿಸಿ 14 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದೆ, ಇದರಲ್ಲಿ 12 ಸಾವಿರ ಜನರು ಈಗಾಗಲೆ ಶಾಲೆಗೆ ಹಾಜರಾಗಿದ್ದಾರೆ.. 800ರಿಂದ 900 ಜನ ವಿವಿಧ ಕಾರಣದಿಂದ ಕೋರ್ಟ್ ಮೊರೆ ಹೋಗಿದ್ದು, ಆ ಸಮಸ್ಯೆ ಸಹ ಶೀಘ್ರ ಬಗೆಹರಿಯಲಿದೆ.  12 ಸಾವಿರ ಪೈಕಿ 3,900 ಶಿಕ್ಷಕರನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ನಿಯೋಜಿಸಲಾಗಿದೆ. 43 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

ನಿವೃತ್ತಿಯಿಂದಾಗಿ ಶಿಕ್ಷಕರ ಕೊರತೆ ಹೆಚ್ಚಿರುವುದರಿಂದ, ಈ ವರ್ಷ ಇನ್ನು 10 ಸಾವಿರ ಶಿಕ್ಷಕರ ಭರ್ತಿಗೆ ಚಿಂತನೆ ನಡೆದಿದೆ. ಒಟ್ಟಾರೆಯಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಸಮಾನತೆ ಕಲ್ಪಿಸಲು ಆದ್ಯತೆ ನೀಡುವುದಾಗಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

Key words: Minister- Madhu Bangarappa – thinking -filling 10 thousand – teachers- this year.