ಬೆಂಗಳೂರು,ಆಗಸ್ಟ್,1,2025 (www.justkannada.in): ಕರ್ನಾಟಕವು ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು ಈಗಿರುವ 519.60 ಮೀಟರ್ನಿಂದ 524.256 ಮೀ.ಗೆ ಎತ್ತರಿಸುವುದರಿಂದ ಸಾಂಗ್ಲಿ ಮತ್ತು ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗುತ್ತದೆ ಎನ್ನುವ ಮಹಾರಾಷ್ಟ್ರದ ತಕರಾರಿಗೆ ಅರ್ಥವಿಲ್ಲ. ಅದರ ಇಂಥ ವಾದ ಈಗಾಗಲೇ ನ್ಯಾಯಾಧಿಕರಣ, ಸುಪ್ರೀಂಕೋರ್ಟ್ ಮತ್ತು ಲೋಕಸಭೆಗಳಲ್ಲಿ ತಿರಸ್ಕೃತವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್ ಅವರು, ʻಆಲಮಟ್ಟಿ ಅಣೆಕಟ್ಟೆಯನ್ನು ನಾವು ಕಟ್ಟುವುದಕ್ಕೂ ಮೊದಲೇ ಸಾಂಗ್ಲಿಯಲ್ಲಿ 1964, 1976, 1994 ಮತ್ತು 1997ರಲ್ಲಿ ಭೀಕರ ಪ್ರವಾಹ ಸೃಷ್ಟಿಯಾಗಿತ್ತು. ಸುಪ್ರೀಂಕೋರ್ಟ್ ಕೂಡ ಅಣೆಕಟ್ಟೆಯ ಎತ್ತರವನ್ನು 524.256 ಮೀ.ಗೆ ನಾವು ಏರಿಸಬಹುದು ಎಂದು 2000ನೇ ಇಸವಿಯಲ್ಲೇ ಹೇಳಿದೆ. ಇದಾದ ಮೇಲೂ ಮಹಾರಾಷ್ಟ್ರವು ನಮಗೆ ವಿರುದ್ಧವಾಗಿ 2005ರಲ್ಲಿ ನ್ಯಾಯಾಧಿಕರಣಕ್ಕೆ ಹೋಯಿತು. ಆದರೆ ಅದರ ಮಧ್ಯಾಂತರ ಮನವಿಯು ಅಲ್ಲೂ ತಿರಸ್ಕೃತಗೊಂಡಿದೆʼ ಎಂದಿದ್ದಾರೆ.
ಆಲಮಟ್ಟಿ ಅಣೆಕಟ್ಟೆಯ ಕಾರಣದಿಂದಾಗಿಯೇ ಮಹಾರಾಷ್ಟ್ರದ ಸಾಂಗ್ಲಿ ಮತ್ತು ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗುತ್ತದೆ ಎಂಬ ವಾದವನ್ನು ನ್ಯಾಯಮಂಡಳಿಯು ಪುರಸ್ಕರಿಸಿಲ್ಲ. ಈ ಸಂಬಂಧವಾಗಿ ನ್ಯಾಯಾಧೀಕರಣವು 2010 ಮತ್ತು 2013ರಲ್ಲಿ ಕೂಡ ವಿಸ್ತೃತ ವರದಿ ನೀಡಿದೆ. ಈ ವಿಚಾರದಲ್ಲಿ ಅದು ಹಿಪ್ಪರಗಿ ಜಲಾಶಯವನ್ನೂ ಪರಿಗಣಿಸಿದೆ. ಜತೆಗೆ, ಕೃಷ್ಣಾ ನೀರು ಹಂಚಿಕೆ ಸಂಬಂಧ ರಚಿಸಲಾದ ಎರಡನೆಯ ನ್ಯಾಯಾಧಿಕರಣವು ನೀಡಿರುವ ತೀರ್ಪನ್ನು ಇದುವರೆಗೂ ಯಾವ ರಾಜ್ಯಗಳೂ ಪ್ರಶ್ನಿಸಿಲ್ಲ. ಹೀಗಿರುವಾಗ, ಈಗ ಇದ್ದಕ್ಕಿದ್ದಂತೆ ತಕರಾರು ತೆಗೆಯುವುದರ ಹಿಂದಿನ ಉದ್ದೇಶ ಯಾರಿಗಾದರೂ ಅರ್ಥವಾಗುತ್ತದೆ ಎಂದು ಟೀಕಿಸಿದರು.
ಆಲಮಟ್ಟಿ ಅಣೆಕಟ್ಟೆಯ ಎತ್ತರ ಹೆಚ್ಚಿಸಿದರೆ ತನಗೆ ನೀರು ಬರುವುದಿಲ್ಲ ಎಂದು ಆಂಧ್ರಪ್ರದೇಶ ಕೂಡ (ವಿಭಜನೆಗೂ ಮುನ್ನ) ಆಕ್ಷೇಪಣೆ ತೆಗೆದಿತ್ತು. ಆದರೆ, ಅದರ ವಾದ ಕೂಡ ಬಿದ್ದು ಹೋಗಿದೆ. ಮಹಾರಾಷ್ಟ್ರವು ಈಗ ನಾವು ಅಣೆಕಟ್ಟೆಯ ಎತ್ತರಕ್ಕೆ ಮುಂದಾಗಿರುವುದನ್ನು ಮರುಪರಿಶೀಲಿಸಲು ಆಗ್ರಹಿಸಿರುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ. ಐದು ವರ್ಷಗಳ ಕಾಲ ನೀರಾವರಿ ಸಚಿವನಾಗಿದ್ದ ನನಗೆ ಇದರ ಬಗ್ಗೆ ಸ್ಪಷ್ಟ ತಿಳಿವಳಿಕೆ ಇದೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು ಹೇಳಿದ್ದಾರೆ.
ಸಾಂಗ್ಲಿ ಜಿಲ್ಲೆಯಲ್ಲಿ ಜಲಾನಯನ ಪ್ರದೇಶಗಳು ವಿಪರೀತ ಒತ್ತುವರಿಯಾಗಿವೆ. ಇದಕ್ಕೆ ಸಂಬಂಧಿಸಿದ ವರದಿ ನನ್ನ ಬಳಿ ಇದೆ. ಅಲ್ಲಿನ ಸರಕಾರ ಈ ಸಮಸ್ಯೆಯನ್ನು ಬಗೆಹರಿಸುವ ಕಡೆಗೆ ಗಮನ ಕೊಡಬೇಕು. ಅದನ್ನು ಬಿಟ್ಟು ನಮಗೆ ಅಡ್ಡಗಾಲು ಹಾಕಬಾರದು. ನನ್ನಲ್ಲಿರುವ ದಾಖಲೆಗಳನ್ನು ನಾನು ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರಿಗೂ ಕೊಡುತ್ತೇನೆ. ನಾವು ಇದಕ್ಕೆ ವಿವರವಾಗಿ ತಕ್ಕ ಉತ್ತರ ಕೊಡುತ್ತೇವೆ ಎಂದು ಪಾಟೀಲ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
Key words: increasing, height, Alamatti Dam, Flooding, minister, MB Patil