ಬೆಂಗಳೂರು,ಜೂನ್,9,2025 (www.justkannada.in): ಆಗಸ್ಟ್ 15ರಿಂದ ರಾಜ್ಯದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಸುವಂತಿಲ್ಲ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಯಂತ್ರಣ ಏರುವ ಕ್ರಮ ಕೈಗೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ದೇವಾಲಯಗಳಲ್ಲಿ ಆಗಸ್ಟ್ 15ರ ಬಳಿಕ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗುತ್ತಿದೆ ಎಂದು ತಿಳಿಸಿದರು.
ಹಾಗೆಯೇ ಕಳೆದ ಮೂರು ತಿಂಗಳಲ್ಲಿ 1,253 ದೇವಾಲಯಗಳನ್ನು ಗುರುತಿಸಲಾಗಿದೆ. 11,322 ಆಸ್ತಿ ಗುರುತಿಸಿ ನಮೂದಿಸಲಾಗಿದೆ. ಹೊರರಾಜ್ಯಗಳಲ್ಲಿ ವಸತಿ ಗೃಹಗಳನ್ನು ನಿರ್ಮಿಸಲು ಯೋಜಿಸಲಾಗಿದ್ದು. ತಿರುಪತಿಯ ಗಾಂಧಿ ರಸ್ತೆಯಲ್ಲಿರುವ ಜಾಗದಲ್ಲಿ ವಸತಿಗೃಹ ನಿರ್ಮಿಸಲಾಗುತ್ತಿದೆ. ವಸತಿಗೃಹ ಸಂಕೀರ್ಣ ನಿರ್ಮಾಣ ಮಾಡಲು ಸೂಚಿಸಲಾಗಿದೆ ಎಂದರು.
ದೇವಾಲಯದ ಅರ್ಚಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ಸೌಲಭ್ಯ ಕಲ್ಪಿಸಲಾಗಿದೆ. ಅರ್ಚಕರ 249 ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ. ಮರಣ ಹೊಂದಿದ 7 ಅರ್ಚಕರ ಕುಟುಂಬಕ್ಕೆ ಪರಿಹಾರ ನೀಡಿದ್ದೇವೆ. ಮರಣೋತ್ತರ ಪರಿಹಾರವಾಗಿ 14 ಲಕ್ಷ ರೂಪಾಯಿ ನೀಡಲಾಗಿದೆ ಎಂದು ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.
Key words: Plastic, ban, temples, August 15, Minister, Ramalinga Reddy