Friday, August 7, 2026

BDA Apartments

Home Front Page ಮಳೆಯಿಂದ ಹಾನಿಗೊಳಗಾದ ಬೆಳೆಗಳ ವೀಕ್ಷಣೆ ಮಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ

ಮಳೆಯಿಂದ ಹಾನಿಗೊಳಗಾದ ಬೆಳೆಗಳ ವೀಕ್ಷಣೆ ಮಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು ,ಆಗಸ್ಟ್,7,2026 (www.justkannada.in): ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಳೆ ಕೊರತೆಯಿಂದ ಹಾನಿಗೊಳಗಾದ ಕೃಷಿ ಭೂಮಿಗೆ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಈ ಬಾರಿ ಕ್ಷೇತ್ರದಲ್ಲಿ ಅಧಿಕಾರಿಗಳ ಮಾಹಿತಿ ಪ್ರಕಾರ ಹುಣಸೂರು ತಾಲ್ಲೂಕೊಂದರಲ್ಲೇ ಸುಮಾರು 21 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಳೆ ಕೊರತೆಯಿಂದ ಹೊಗೆಸೊಪ್ಪು ಬೆಳೆ ಇಳುವರಿ ಕಡಿಮೆಯಾಗಿದೆ. ಅವರೆ ಹಲಸಂದೆ ಎಲ್ಲ ಬೆಳೆಗಳು ಹಾಳಾಗಿದ್ದು ಈ ಕುರಿತು ಸರ್ಕಾರದ ಗಮನ ಸೆಳೆದು ರೈತರಿಗೆ ತುರ್ತು ನೆರವು ತಲುಪಿಸಲು ಕ್ರಮ ವಹಿಸಲಾಗುವುದು ಎಂದರು.

ಈ ಭಾಗದ ಪ್ರಮುಖ ಬೆಳೆಯಾದ ಮುಸುಕಿನ ಜೋಳಕ್ಕೆ (ಮೆಕ್ಕೆಜೋಳ) ತೀವ್ರ ರೋಗಬಾಧೆ ಆವರಿಸಿದೆ. ರೈತರು ಒಂದೇ ಬೆಳೆಯನ್ನು ನೆಚ್ಚಿಕೊಳ್ಳದೆ ಬೆಳೆ ಪರಿವರ್ತನೆ (Crop Rotation) ಪದ್ಧತಿ ಅಳವಡಿಸಿಕೊಳ್ಳುವಂತೆ ತಿಳಿಸಿದರು.

ಸಾಕಷ್ಟು ಮಟ್ಟದಲ್ಲಿ ಬೆಳೆಗಳು ಹಾಳಾಗಿದ್ದು ಪ್ರಸ್ತುತ ಪರಿಸ್ಥಿತಿ ಗಂಭೀರವಾಗಿರುವುದರಿಂದ ರೋಗಬಾಧೆಯಿಂದ ನಷ್ಟ ಅನುಭವಿಸಿದ ರೈತರಿಗೆ ವಿಶೇಷ ಪರಿಹಾರ ಘೋಷಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು ಎಂದರು.

ರೈತರಿಂದ ಖರೀದಿಸಲಾದ ರಾಗಿಯ ಪಾವತಿ ಕಳೆದ  ಬಾಕಿ ಉಳಿದಿರುವ ಬಗ್ಗೆ ಮನವಿಗಳು ಬಂದಿವೆ. ಈ ವಿಚಾರವಾಗಿ ಸಂಬಂಧಪಟ್ಟ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಚರ್ಚಿಸಿ, ಬಾಕಿ ಹಣವನ್ನು ಶೀಘ್ರದಲ್ಲೇ ರೈತರ ಖಾತೆಗಳಿಗೆ ಜಮೆ ಮಾಡಲು ಸೂಚನೆ ನೀಡಲಾಗುವುದು ಎಂದರು.

ಅಧಿಕಾರಿಗಳು ತ್ವರಿತವಾಗಿ ಸಮೀಕ್ಷೆ ಪೂರ್ಣಗೊಳಿಸಿ ವಾಸ್ತವ ವರದಿ ಸಲ್ಲಿಸಬೇಕು, ರೈತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಜಿ. ಡಿ.ಹರೀಶ್ ಗೌಡ, ಮಾಜಿ ಶಾಸಕ ಹೆಚ್.ಪಿ. ಮಂಜುನಾಥ್ ಹಾಗೂ ಕೃಷಿ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Minister, Yathindra Siddaramaiah, inspects, crops, rain