Saturday, August 1, 2026

BDA Apartments

Home Front Page ಪಬ್ ಅಗ್ನಿ ಅವಘಡ: ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು-ಸಚಿವ ಯತೀಂದ್ರ ಸಿದ್ದರಾಮಯ್ಯ

ಪಬ್ ಅಗ್ನಿ ಅವಘಡ: ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು-ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಜೂನ್,16,2026 (www.justkannada.in): ನಿನ್ನೆ ಮೈಸೂರಿನ ದಟ್ಟಗಳ್ಳಿ ಬಳಿಯ ಪಬ್ ವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ  ಇಬ್ಬರು ಸಾವನ್ನಪ್ಪಿದ ಪ್ರಕರಣ ಸಂಬಂಧ ಅಬಕಾರಿ ಡಿಸಿ ನಾಗರಾಜಪ್ಪ ಅಮಾನತಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಅಬಕಾರಿ ಡಿಸಿ ನಾಗರಾಜಪ್ಪ  ಅಮಾನತಿಗೆ ಶಿಫಾರಸ್ಸು ಮಾಡಲಾಗಿದ್ದು, ಪಬ್ ಮಾಲೀಕನ ವಿರುದ್ಧ ದೂರು ದಾಖಲು ಮಾಡಲಾಗಿದೆ. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಯಾವುದೇ ಲೈಸನ್ಸ್ ಇಲ್ಲದೆ ಪಬ್ ನಡೆಯುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದ್ದು,  ಮೈಸೂರಿನಲ್ಲಿ ಅನೇಕ ಪಬ್ ಬಾರ್ ಅಂಡ್ ರೆಸ್ಟೋರೆಂಟ್ ಗಳು ಲೈಸನ್ಸ್ ಪಡೆಯದೆ ನಡೆಸುತ್ತಿರುವ ವಿಚಾರ ಗೊತ್ತಾಗಿದೆ. ಹೀಗಾಗಿ ಅಬಕಾರಿ ಡಿಸಿಗೆ ಸೂಚನೆ ಕೊಟ್ಟಿದ್ದೇನೆ. ಎಲ್ಲೆಲ್ಲಿ ಅಕ್ರಮ ಹಾಗೂ ಲೈಸನ್ಸ್ ಇಲ್ಲದೆ ಬಾರ್ ರೆಸ್ಟೋರೆಂಟ್ ನಡೆಯುತ್ತಿದೆ ಅಂತವುಗಳ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ಕೊಟ್ಟಿದ್ದೇನೆ. ಲೈಸನ್ಸ್ ಇಲ್ಲದೆ ಬಾರ್ ನಡೆಸುತ್ತಿದ್ದರೂ ಅಬಕಾರಿ ಡಿಸಿ ಕಣ್ಮುಚ್ಚಿ ಕುಳಿತಿದ್ದಾರೆ. ಅದ್ದರಿಂದ ಅಧಿಕಾರಿಗಳ ಮೇಲೂ ಕ್ರಮಕ್ಕೆ ಒತ್ತಾಯ ಕೇಳಿ ಬಂದಿದೆ. ಹೀಗಾಗಿಅಬಕಾರಿ ಡಿಸಿ ಅಮಾನತು ಮಾಡುವಂತೆ ಶಿಫಾರಸ್ಸು ಮಾಡುತ್ತೇನೆ. ಎಲ್ಲ ಕಡೆ ಪರಿಶೀಲನೆ ನಡೆಸಿ ಎಂದು ಪೊಲೀಸರಿಗೂ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಮೈಸೂರಿನ ಎಲ್ಲ ಕಮರ್ಷಿಯಲ್ ಕಟ್ಟಡಗಳಲ್ಲಿ ಫೈರ್ ಬಗ್ಗೆ ಮುಂಜಾಗ್ರತೆ ಕ್ರಮ ತೆಗೆದುಕೊಂಡಿದ್ದಾರಾಯೇ ಎಂಬ ಬಗ್ಗೆ ಪರಿಶೀಲನೆ ನಡೆಸಲು ಹೇಳಿದ್ದೇನೆ. ಇಂತಹ ಘಟನೆ ಮರುಕಳಿಸದಂತೆ ಕ್ರಮ ವಹಿಸಲು ಹೇಳಿದ್ದೇನೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಅಗ್ನಿಶಾಮಕ ಇಲಾಖೆ ಅನುಮೋದನೆ ಮತ್ತು ಅಗತ್ಯ ಸುರಕ್ಷತಾ ಪ್ರಮಾಣಪತ್ರಗಳನ್ನು ಪಡೆಯದೇ ಕೆಲವು ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿರುವುದು ಗಮನಕ್ಕೆ ಬಂದಿದೆ. ಅಗ್ನಿ ನಿರೋಧಕ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಸಂಬಂಧಿತ ಅಧಿಕಾರಿಗಳು ಈ ಕುರಿತು ನಿರಂತರ ನಿಗಾ ವಹಿಸಬೇಕು. ಮದ್ಯ ಮಾರಾಟ ಹಾಗೂ ಸೇವನೆಗೆ ಸಂಬಂಧಿಸಿದಂತೆ, ಪರವಾನಗಿ ಇಲ್ಲದ ಸ್ಥಳಗಳಲ್ಲಿ ಮದ್ಯ ಸೇವನೆ ಅಥವಾ ಪೂರೈಕೆ ಕಾನೂನು ಬಾಹಿರವಾಗಿದೆ.

ಎಲ್ಲಾ ನಿಯಮಗಳನ್ನು ಪಾಲಿಸಿ, ಅಗತ್ಯ ಅನುಮತಿಗಳನ್ನು ಪಡೆದ ಸಂಸ್ಥೆಗಳಿಗೆ ಮಾತ್ರ ಪರವಾನಗಿ ನೀಡಬೇಕು. ನಿಯಮ ಉಲ್ಲಂಘಿಸುವ ರೆಸ್ಟೋರೆಂಟ್‌ ಗಳು ಮತ್ತು ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾವುದೇ ದೂರುಗಳು ಬಂದಲ್ಲಿ ಅವುಗಳನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ದುರಂತಗಳು ಸಂಭವಿಸಿದ ನಂತರ ಕ್ರಮ ಕೈಗೊಳ್ಳುವ ಬದಲು, ಅವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಬಲಪಡಿಸುವುದು ಅಗತ್ಯವಾಗಿದೆ ಎಂದರು.

ಮೃತರ ಕುಟುಂಬಕ್ಕೆ ಪರಿಹಾರದ ಬಗ್ಗೆ ಸಿಎಂ ಗಮನಕ್ಕೆ

ನಗರಗಳ ವೇಗವಾದ ಜನಸಂಖ್ಯೆ ವೃದ್ಧಿ ಮತ್ತು ನಗರೀಕರಣದ ಹಿನ್ನೆಲೆಯಲ್ಲಿ, ಸಾರ್ವಜನಿಕ ಸುರಕ್ಷತೆ ಹಾಗೂ ನಿಯಂತ್ರಣ ವ್ಯವಸ್ಥೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕಾಗಿದೆ. ಮೃತ ವ್ಯಕ್ತಿಗಳ ಕುಟುಂಬಕ್ಕೆ ಪರಿಹಾರ ನೀಡುವ ಸಂಬಂಧ ಸಿಎಂ ಡಿಕೆ ಶಿವಕುಮಾರ್ ಗಮನಕ್ಕೆ ತರಲಾಗುವುದು ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಎಂ.ಎಲ್ ಸಿ ಚುನಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ,  ನಾವು 5 ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ. ಇಂದು ಸಿ.ಎಲ್ ಪಿ ನಡೆಯುತ್ತೆ. ಅದರಲ್ಲಿ ನಾನು ಕೂಡ ಭಾಗಿಯಾಗುತ್ತೇನೆ. ಚುನಾವಣೆ ಸಂಧರ್ಭದಲ್ಲಿ ಇದು ಸಾಮಾನ್ಯ ಪ್ರಕ್ರಿಯೆ. ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಡದಿ ಟೌನ್ ಶಿಪ್ ಜಟಾಪಟಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಟೌನ್ ಶಿಪ್ ಮಾಡುವುದು ಅತ್ಯವಶ್ಯಕ  80% ರೈತರು ಜಮೀನು ಕೊಡಲು ಒಪ್ಪಿದ್ದಾರೆ. ಹೆಚ್ಚಿನ ಮಟ್ಟದ ಪರಿಹಾರಕ್ಕೆ ಒಪ್ಪಿದ್ದಾರೆ. ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಜೆಡಿಎಸ್ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದರು.

Key words: Pub, fire, tragedy, suspension, Excise DC, Minister, Yathindra Siddaramaiah