Thursday, August 13, 2026

BDA Apartments

Home Front Page ಆಷಾಢ ಶುಕ್ರವಾರ: ಈ ಬಾರಿ ಮೊಬೈಲ್ ಆ್ಯಪ್ ಮೂಲಕವೂ ಟಿಕೆಟ್ ಖರೀದಿಗೆ ಅವಕಾಶ- ಸಚಿವ ಯತೀಂದ್ರ...

ಆಷಾಢ ಶುಕ್ರವಾರ: ಈ ಬಾರಿ ಮೊಬೈಲ್ ಆ್ಯಪ್ ಮೂಲಕವೂ ಟಿಕೆಟ್ ಖರೀದಿಗೆ ಅವಕಾಶ- ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಜುಲೈ,1,2026 (www.justkannada.in): ಆಷಾಢ ಶುಕ್ರವಾರದಲ್ಲಿ ಸುಗಮ ದರ್ಶನಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಗಿದ್ದು, ಈ ಬಾರಿ ಮೊಬೈಲ್ ಆ್ಯಪ್ ಮೂಲಕವೂ ಟಿಕೆಟ್ ಖರೀದಿಗೆ ಅವಕಾಶ ನೀಡಲಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಚರಿಸಲಾಗುವ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಪೂರ್ವಸಿದ್ಧತೆಗಳ ಕುರಿತು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು  ಸಭೆ ಬಳಿಕ ಚಾಮುಂಡೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಆಷಾಢ ಮಾಸದ ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಖಾಸಗಿ ವಾಹನಗಳ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ, ವಿಶೇಷ ಟಿಕೆಟ್ ಹಾಗೂ ಪ್ರತ್ಯೇಕ ಬಸ್ ಸೌಲಭ್ಯ ಕಲ್ಪಿಸಲಾಗಿದ್ದು. ವಿಶೇಷ ಟಿಕೆಟ್ ಪಡೆದ ಭಕ್ತಾದಿಗಳಿಗೆ ಬೆಟ್ಟಕ್ಕೆ ಹೋಗಲು ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ಮೊಬೈಲ್ ಆಪ್ (App) ಮೂಲಕವೂ ಆನ್‌ಲೈನ್‌ನಲ್ಲಿ 2,000 ರೂ.ನ ಟಿಕೆಟ್ ಖರೀದಿಸಲು ಮುಕ್ತ ಅವಕಾಶ ನೀಡಲಾಗಿದೆ. ಚಾಮುಂಡಿ ಬೆಟ್ಟದ ಮೆಟ್ಟಿಲುಗಳ ಮೂಲಕ ನಡೆದುಕೊಂಡು ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ದಾರಿಯುದ್ದಕ್ಕೂ ಉಚಿತ ಮಜ್ಜಿಗೆ ಮತ್ತು ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗುತ್ತದೆ.

ಜಿಲ್ಲೆಯ ಜಲಾಶಯಗಳಲ್ಲಿ ಕುಡಿಯುವ ನೀರನ್ನು ಕಡ್ಡಾಯವಾಗಿ ಶೇಖರಿಸಿಟ್ಟುಕೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಯಾವುದೇ ಕುಡಿಯುವ ನೀರಿನ ತೀವ್ರ ಸಮಸ್ಯೆ ಉಂಟಾಗಿಲ್ಲ.  ಮುಂದಿನ ದಿನಗಳಲ್ಲಿ ಜನರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಅನಧಿಕೃತ ಬಾರ್ ಅಂಡ್ ರೆಸ್ಟೋರೆಂಟ್‌ ಗಳು ಪಬ್‌ ಗಳ ಮೇಲೆ ಕಠಿಣ ಕಾನೂನು ಕ್ರಮ

ನಗರದಲ್ಲಿ ಕಾನೂನುಬಾಹಿರವಾಗಿ ನಡೆಯುತ್ತಿರುವ ಅನಧಿಕೃತ ಬಾರ್ ಅಂಡ್ ರೆಸ್ಟೋರೆಂಟ್‌ ಗಳು ಹಾಗೂ ಪಬ್‌ಗಳ ಮೇಲೆ ತಕ್ಷಣವೇ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಪೊಲೀಸ್ ಇಲಾಖೆ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಈಗಾಗಲೇ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮೈಸೂರು ನಗರ ಪೊಲೀಸ್‌ ಆಯುಕ್ತ   ಸೀಮಾ ಲಾಟ್ಕರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಶೇಕ್ ತಸ್ವೀ‌ರ್ ಆಸಿಫ್, ಚಾಮುಂಡಿ ಬೆಟ್ಟದ ಅಭಿವೃದ್ಧಿ ಪ್ರಾದಿಕಾರದ ಕಾರ್ಯದರ್ಶಿ ರೂಪ ಅವರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Ashada Friday, tickets, mobile apps, Minister, Yathindra Siddaramaiah