ದಾವಣಗೆರೆ, ಜುಲೈ, 4,2026 (www.justkannada.in): ನಗರಾಭಿವೃದ್ಧಿಗೆ ಸಂಬಂಧಿಸಿದ ಎಲ್ಲ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ನಗರಾಭಿವೃದ್ದಿ ಇಲಾಖೆ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಸೂಚಿಸಿದರು.
ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ದಾವಣಗೆರೆ ಮಹಾನಗರಪಾಲಿಕೆ ಹಾಗೂ ದಾವಣಗೆರೆ–ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಪರಿಶೀಲಿಸಿದರು.
ಸಭೆಯಲ್ಲಿ ಮಹಾನಗರಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕೈಗೊಂಡಿರುವ ಸಿವಿಲ್ ಕಾಮಗಾರಿಗಳ ಪ್ರಗತಿ, ಉದ್ದೇಶಿತ ಅಭಿವೃದ್ಧಿ ಕಾಮಗಾರಿಗಳು, ಕೆರೆಗಳ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳು, ನಗರದಲ್ಲಿ ಕುಡಿಯುವ ನೀರಿನ ಲಭ್ಯತೆ ಹಾಗೂ ಭವಿಷ್ಯದ ನೀರು ಸರಬರಾಜು ಯೋಜನೆಗಳ ಕುರಿತು ಸಚಿವ ಯತೀಂದ್ರ ಸಿದ್ದರಾಮಯ್ಯ ಸಮಗ್ರವಾಗಿ ಪರಿಶೀಲಿಸಿದರು.
ಅಲ್ಲದೆ, ಈಗಾಗಲೇ ಅನುಷ್ಠಾನಗೊಳಿಸಲಾಗಿರುವ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ವಿವಿಧ ವಸತಿ ಯೋಜನೆಗಳ ಪ್ರಗತಿ, ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಹಾಗೂ ಅನುಷ್ಠಾನದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಸೂಚನೆಗಳನ್ನು ನೀಡಿದರು.
ನಗರಾಭಿವೃದ್ಧಿಗೆ ಸಂಬಂಧಿಸಿದ ಎಲ್ಲ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದು, ಸಾರ್ವಜನಿಕರಿಗೆ ಮೂಲಸೌಕರ್ಯ ಮತ್ತು ನಾಗರಿಕ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವುದು ಹಾಗೂ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬವಾಗದಂತೆ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವ ಯತೀಂದ್ರ ಸಿದ್ದರಾಮಯ್ಯ ನಿರ್ದೇಶನ ನೀಡಿದರು.
ಇದೇ ವೇಳೆ, ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಿ, ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವ ಉದ್ದೇಶದಿಂದ ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ನಿಯಮಿತವಾಗಿ ಹಾಗೂ ಕಟ್ಟುನಿಟ್ಟಾಗಿ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸುವಂತೆ ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ ನೀಡಿದರು.
ಸಭೆಯಲ್ಲಿ ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್. ಎಸ್. ಮಲ್ಲಿಕಾರ್ಜುನ್, ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾದ ಸಮರ್ಥ್ ಶಾಮನೂರು, ದಾವಣಗೆರೆ–ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಮಹಾನಗರಪಾಲಿಕೆ ಆಯುಕ್ತ ಡಾ. ಮಹಾಂತೇಶ್ ಹಾಗೂ ಸಂಬಂಧಿತ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Key words: Complete works, , urban development, Minister, Yathindra Siddaramaiah






