ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಿ –MLC ಕೆ.ಶಿವಕುಮಾರ್ ಆಗ್ರಹ

ಬೆಂಗಳೂರು,ಮಾರ್ಚ್,24,2026 (www.justkannada.in):  ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ವಿಧಾನ ಪರಿಷರಿತ್ ಸದಸ್ಯ ಕೆ.ಶಿವಕುಮಾರ್ ಅವರು ಒತ್ತಾಯಿಸಿದರು.

ವಿಧಾನ ಪರಿಷತ್ ಅಧಿವೇಶನದಲ್ಲಿ ಚುಕ್ಕೆ ಗುರತಿನ ಪ್ರಶ್ನೆಗೆ ಉತ್ತರ ಪಡೆದು ಮಾತನಾಡಿದ ಕೆ.ಶಿವಕುಮಾರ್ ಅವರು, ಮೈಸೂರು ನಗರದಲ್ಲಿ 200ಕ್ಕೂ ಹೆಚ್ಚು ಪಾರಂಪರಿಕ ಕಟ್ಟಡಗಳಿದ್ದವು. ಪ್ರಸ್ತುತ ನೂರಕ್ಕೆ ಇಳಿಕೆ ಕಂಡಿವೆ. ಎಲ್ಲಾ ಕಟ್ಟಡಗಳನ್ನು ಕೆಡುವಲಾಗಿದೆ.  ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ ಎಂದು ಹೇಳಿದರು.

ಮಹಾರಾಜರ ಕಾಲದಲ್ಲಿ ದಸರಾ ವೇಳೆ ಎಲ್ಲಾ ಕಟ್ಟಡಗಳಿಗೂ ಸುಣ್ಣ-ಬಣ್ಣ ಬಳಿದು ನಿರ್ವಹಣೆ ಮಾಡುತ್ತಿದ್ದರು. ಇತ್ತೀಚಿನ ವರ್ಷಗಳಲ್ಲಿ ಅನುದಾನದ ಕೊರತೆಯಿಂದ ನಿರ್ವಹಣೆ ಕುಂಠಿತವಾಗಿದೆ. ಎಲ್ಲಾ ಪ್ರವಾಸಿಗರು ವಿದೇಶಕ್ಕೆ ತೆರಳುವುದು ಅಲ್ಲಿನ ಪಾರಂಪರಿಕ ಕಟ್ಟಡಗಳ ವೀಕ್ಷಣೆ ಮುಖ್ಯ ಉದ್ದೇಶವಾಗಿರುತ್ತದೆ ಎಂದು ತಿಳಿಸಿದರು.

ನಮ್ಮ ಪಾರಂಪರಿಕ ಕಟ್ಟಡಗಳನ್ನು ರಕ್ಷಣೆ ಮಾಡದಿದ್ದರೆ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಇತಿಹಾಸವನ್ನು ಮುಂದಿನ ಪೀಳಿಗೆಗೆ ತಿಳಿಸಲು ಸಾಧ್ಯವಾಗುವುದಿಲ್ಲ. ಜಿಲ್ಲಾಡಳಿತದ ಬಳಿ ಇರುವ ಅನುದಾನ ಸಾಲದು. ಆಸ್ತಿ ತೆರಿಗೆಯಲ್ಲಾದರು ಅನುದಾನ ಒದಗಿಸಲು ಮಂತ್ರಿಗಳ ಅವಕಾಶ ಕಲ್ಪಿಸಬೇಕು ಎಂದು ಕೋರಿದರು.

ಪಾರಂಪರಿಕ ಕಟ್ಟಡಗಳ 100 ಮೀ. ವ್ಯಾಪ್ತಿಯಲ್ಲಿ ಬ್ರಿಗೇಡ್ ಸಂಸ್ಥೆಯವರು 14 ಹಂತಸ್ತಿನ ಕಟ್ಟಡ ನಿರ್ಮಾಣ ಮಾಡಿದ್ದಾರೆ. ಇದಕ್ಕೆ ಅನುಮತಿ ನೀಡಿದವರ ವಿರುದ್ಧ ತನಿಖೆ ಮಾಡಿಸಿ, ನಿಯಮ ಉಲ್ಲಂಘಿಸದಂತೆ ಕ್ರಮವಹಿಸಬೇಕು ಎಂದು ಕೆ.ಶಿವಕುಮಾರ್ ಒತ್ತಾಯಿಸಿದರು.

ಈ ಕುರಿತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ಮಾತನಾಡಿ, ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಅಲ್ಲದೆ, ಪಾರಂಪರಿಕ ಕಟ್ಟಡ ಸಂರಕ್ಷಣಾ ಸಮಿತಿಯನ್ನು ರಚಿಸಲಾಗಿದೆ. ಶಿಥಿಲಾವಸ್ಥೆಯಲ್ಲಿರುವ ಪಾರಂಪರಿಕ ಕಟ್ಟಡಗಳನ್ನು ಗುರುತಿಸಿ ರಕ್ಷಣೆ ಮಾಡಲಾಗುತ್ತಿದೆ ಎಂದರು.

ಜಿಲ್ಲಾಡಳಿತ ಹಾಗೂ ಸ್ಥಳೀಯ ಸಂಸ್ಥೆಯಲ್ಲಿ ಅನುದಾನ ಲಭ್ಯವಿದೆ. ಪಾರಂಪರಿಕ ಕಟ್ಟಡದ 100 ಮೀ. ಬಳಿ ಕಾಮಗಾರಿ ನಿಷೇಧಿಸಲಾಗಿದೆ. ಈ ನಿಯಮ ಉಲ್ಲಂಘಿಸದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಲ್ಯಾನ್ಸ್ ಡೌನ್ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ಮುಂದಾಗಿತ್ತು, ಪ್ರಸ್ತುತ ನ್ಯಾಯಾಲಯದಲ್ಲಿ ಪ್ರಕರಣವಿದ್ದು, ಬಗೆಹರಿದ ಕೂಡಲೇ ನೂತನ ಕಟ್ಟಡ ನಿರ್ಮಾಣ ಮಾಡಲಾಗವುದು ಎಂದು ತಿಳಿಸಿದರು.

Key words: more funds, conservation, heritage buildings, MLC, K. Shivakumar