ಮೈಸೂರು, ಜುಲೈ, 24,2025 (www.justkannada.in): ರಾಜ್ಯ ರಾಜಧಾನಿ ಹಾಗೂ ಸಾಂಸ್ಕೃತಿಕ ರಾಜಧಾನಿಗೆ ಪ್ರಮುಖ ಸಂಪರ್ಕ ಕಲ್ಪಿಸುವ ಎಕ್ಸ್ ಪ್ರೆಸ್ ವೇ ನಲ್ಲಿ ಹಲವಾರು ಸುಧಾರಣೆ ಕ್ರಮಗಳನ್ನು ಕೈಗೊಳ್ಳಲು ನಮ್ಮ ಕೇಂದ್ರ ಬಿಜೆಪಿ ಸರ್ಕಾರ 712 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಂಸದ ಯದುವೀರ್ ಒಡೆಯರ್, ಈ ಅನುದಾನದಿಂದ ಹಲವಾರು ಜನೋಪಯೋಗಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದಿದ್ದಾರೆ.
ದಶಪಥದಲ್ಲಿ ಹೊಸದಾಗಿ ಎಂಟ್ರಿ-ಎಕ್ಸಿಟ್, ರೈಲ್ವೆ ಸೇತುವೆ, ಅಂಡರ್ ಪಾಸ್, ಓವರ್ ಪಾಸ್, ಸರ್ವೀಸ್ ರಸ್ತೆ ಹಾಗೂ ಪ್ರಯಾಣಿಕರಿಗೆ ಅನುಕೂಲವಾಗುವ ಅನೇಕ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ದಶಪಥ ಕೊನೆಗೊಳ್ಳುವ ಮಣಿಪಾಲ್ ಆಸ್ಪತ್ರೆ ಜಂಕ್ಷನ್ ನಲ್ಲಿ ಸಂಚಾರ ದಟ್ಟಣೆ ನಿವಾರಿಸಲು ಫ್ಲೈ ಓವರ್ ನಿರ್ಮಾಣ ಮಾಡಲಾಗುವುದು. ಈ ಬಗ್ಗೆ ಸಾರ್ವಜನಿಕರು ಹಲವಾರು ಬಾರಿ ದೂರು ಸಲ್ಲಿಸಿದ್ದರು. ಅದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸದ ಯದುವೀರ್ ಮಾಹಿತಿ ನೀಡಿದ್ದಾರೆ.
ಈ ದಶಪಥವು ಜನರಿಗೆ ಇನ್ನಷ್ಟು ಉಪಯುಕ್ತವಾಗಬೇಕು ಎಂಬುದನ್ನು ಮನಗಂಡು ಕೇಂದ್ರ ಸರ್ಕಾರ ಸುಧಾರಣೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಸಂಸದ ಯದುವೀರ್ ವಿವರಿಸಿದ್ದಾರೆ.
ಎಕ್ಸ್ ಪ್ರೆಸ್ ವೇನಲ್ಲಿ ಯೋಜನೆಗಳನ್ನು ಕೈಗೊಳ್ಳಲು ಅನುದಾನ ಬಿಡುಗಡೆ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಸಮಸ್ತ ಜನರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿಯೂ ನಮ್ಮ ಬಿಜೆಪಿ ಸರ್ಕಾರ ಜನಪರ ಕಾಳಜಿ ಯೋಜನೆಗಳನ್ನ ಜಾರಿಗೆ ತರಲಿದೆ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.
Key words: Rs 712 crore, grant Bengaluru-Mysore, Expressway, MP, Yaduveer