Saturday, September 12, 2026

BDA Apartments

Home Front Page ಬೆಂಗಳೂರಿನಲ್ಲಿ ಮೈಸೂರಿನ ‘ಮೈಲಾರಿ’ ಘಮ; ಹೋಟೆಲ್ ಉದ್ಘಾಟಿಸಿ, ದೋಸೆ ಸವಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ಮೈಸೂರಿನ ‘ಮೈಲಾರಿ’ ಘಮ; ಹೋಟೆಲ್ ಉದ್ಘಾಟಿಸಿ, ದೋಸೆ ಸವಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜನವರಿ,23,2026 (www.justkannada.in): ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ‘ಒರಿಜಿನಲ್ ವಿನಾಯಕ ಮೈಲಾರಿ-1938’ (Old Original Vinayaka Mylari) ಹೋಟೆಲ್‌ ನ ಬೆಂಗಳೂರು ಶಾಖೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಇಂದಿರಾನಗರದ 80 ಅಡಿ ರಸ್ತೆಯಲ್ಲಿ ನಡೆದ ಸಮಾರಂಭದಲ್ಲಿ ಹೋಟೆಲ್ ಉದ್ಘಾಟಿಸಿದ ಬಳಿಕ, ಸಿಎಂ ಸಿದ್ದರಾಮಯ್ಯ ಅವರು ಖುದ್ದಾಗಿ ಕುಳಿತು ಪ್ರಸಿದ್ಧ ಬೆಣ್ಣೆ ಖಾಲಿ ದೋಸೆ ಮತ್ತು ಕಾಶಿ ಹಲ್ವಾವನ್ನು ಸವಿದರು. ದೋಸೆಯ ರುಚಿಗೆ ತಲೆದೂಗಿದ ಅವರು, “ನಾನು ಮೈಸೂರಿನಲ್ಲಿ ಅನೇಕ ಬಾರಿ ಈ ದೋಸೆ ಸವಿದಿದ್ದೇನೆ. ಈಗ ಬೆಂಗಳೂರಿನಲ್ಲೂ ಅದೇ ಅಪ್ಪಟ ರುಚಿ ಸಿಗುತ್ತಿದೆ. ಆಹಾರ ಪ್ರಿಯರು ಇನ್ನು ಮುಂದೆ ಮೈಲಾರಿ ದೋಸೆಗಾಗಿ ಮೈಸೂರಿಗೆ ಹೋಗುವ ಅಗತ್ಯವಿಲ್ಲ, ಅದು ಈಗ ನಮ್ಮ ಇಂದಿರಾನಗರದಲ್ಲೇ ಸಿಗುತ್ತಿದೆ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗಣ್ಯಾತಿಗಣ್ಯರ ಸಾಕ್ಷಿ:

ಕಾರ್ಯಕ್ರಮದಲ್ಲಿ  ರಾಜಕೀಯ ಮತ್ತು ಸಿನಿಮಾ ರಂಗದ ಹಲವು ಗಣ್ಯರು ಉಪಸ್ಥಿತರಿದ್ದು, 87 ವರ್ಷಗಳ ಇತಿಹಾಸವಿರುವ ಮೈಲಾರಿ ಪರಂಪರೆ ಬೆಂಗಳೂರಿಗೆ ಕಾಲಿಟ್ಟಿರುವುದಕ್ಕೆ ಶುಭ ಹಾರೈಸಿದರು. ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಮತ್ತು ಗೌರಿಗದ್ದೆಯ ಅವಧೂತ ಶ್ರೀ ವಿನಯ್ ಗುರೂಜಿ ಅವರು ಸಾನ್ನಿಧ್ಯ ವಹಿಸಿದ್ದರು.

ನಾಲ್ಕನೇ ತಲೆಮಾರಿನ ಸಾರಥ್ಯ:

1938ರಲ್ಲಿ ಗೌರಮ್ಮನವರು ಮೈಸೂರಿನ ನಜರ್‌ ಬಾದ್‌ನಲ್ಲಿ ಆರಂಭಿಸಿದ್ದ ಈ ರುಚಿಯ ಪರಂಪರೆಯನ್ನು, ಇದೀಗ ನಾಲ್ಕನೇ ತಲೆಮಾರಿನ ಸಚಿನ್ ಮತ್ತು ಸಿಂಧು ದಂಪತಿ ಬೆಂಗಳೂರಿಗೆ ವಿಸ್ತರಿಸಿದ್ದಾರೆ. ಬಾಳೆ ಎಲೆ ಊಟ ಮತ್ತು ಹಳ್ಳಿ ಸೊಗಡಿನ ದೇಸಿ ರುಚಿಯನ್ನು ಉಳಿಸಿಕೊಂಡು ಹೋಗುವುದು ತಮ್ಮ ಗುರಿ ಎಂದು ಹೋಟೆಲ್ ಮಾಲೀಕರು ತಿಳಿಸಿದರು.

ಡಾ. ರಾಜ್‌ಕುಮಾರ್‌ ರಿಂದ ಹಿಡಿದು ಸಚಿನ್ ತೆಂಡೂಲ್ಕರ್‌ ವರೆಗೆ ಮತ್ತು ಬಿಬಿಸಿ (BBC) ಪಟ್ಟಿಯಲ್ಲೂ ಸ್ಥಾನ ಪಡೆದಿದ್ದ ಈ ಹೋಟೆಲ್, ಇಂದಿನಿಂದ ಅಧಿಕೃತವಾಗಿ ಬೆಂಗಳೂರಿಗರ ಸೇವೆಗೆ ಲಭ್ಯವಾಗಿದೆ.

Key words: Mylari Hotel, Bengaluru, CM Siddaramaiah, tastes, dosa