ಮೈಸೂರು,ಏಪ್ರಿಲ್,23,2026 (www.justkannada.in): ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿ ಡಾ. ಪಿ .ಶಿವರಾಜು ಅವರ ಅಧ್ಯಕ್ಷತೆಯಲ್ಲಿ ಮೈಸೂರು ಜಿಲ್ಲಾ ಮಟ್ಟದ ಕೆರೆ ಸಂರಕ್ಷಣಾ ಪಡೆಯ ಸಭೆ ನಡೆಯಿತು. ಜಿಲ್ಲೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳೊಂದಿಗೆ ಕೆರೆ ಸಂರಕ್ಷಣೆಯ ಬಗ್ಗೆ ಚರ್ಚೆ ನಡೆಸಿ ಅಗತ್ಯ ಮಾರ್ಗದರ್ಶನ ನೀಡಿದರು.
ಮೈಸೂರು ಜಿಲ್ಲೆಯಲ್ಲಿರುವ ಎಲ್ಲಾ ಕೆರೆಗಳನ್ನು ಸರ್ವೆ ಮಾಡಿಸಿ ಒತ್ತುವರಿಯಿಂದ ತೆರವುಗೊಳಿಸುವ ಬಗ್ಗೆ ಅವುಗಳ ಸರ್ವೆ ಅಳತೆ ಕಾರ್ಯವನ್ನು ಒಂದು ವಾರದೊಳಗೆ ಮುಗಿಸುವಂತೆ ನಿರ್ದೇಶನ ನೀಡಿದರು. ಅಲ್ಲದೆ ಎಲ್ಲಾ ಕೆರೆಗಳನ್ನು ಉತ್ತಮ ಸ್ಥಿತಿಯಲ್ಲಿ ಕಾಪಾಡಿಕೊಳ್ಳುವಂತೆ ಸಂಬಂಧಿಸಿದ ಇಲಾಖೆಗಳಿಗೆ ಸೂಚನೆ ನೀಡಿದರು.
ಎಲ್ಲಾ ಕೆರೆಗಳಿಗೆ ಭೇಟಿ ನೀಡಿ ಕೆರೆ ನೀರಿನ ಶುದ್ಧತೆಯ ಬಗ್ಗೆ ಮತ್ತು ಅಲ್ಲಿನ ನೈರ್ಮಲ್ಯ ಕಾಪಾಡಿಕೊಳ್ಳುವ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಪರಿಸರ ಸಂರಕ್ಷಣೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಮೈಸೂರು ನಗರದ ಎಲ್ಲಾ ಕೆರೆಗಳು ಶುದ್ಧೀಕರಣಗೊಳ್ಳಲು ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು. ಅಲ್ಲದೆ ಕಾರ್ಖಾನೆಗಳಿಂದ ಹಾಗೂ ಇನ್ನಿತರ ಮೂಲಗಳಿಂದ ಅಶುದ್ಧ ನೀರು ಸೇರುತ್ತಿದ್ದಲ್ಲಿ ಅದನ್ನು ತಪ್ಪಿಸಲು ಕೂಡಲೇ ಕ್ರಮ ವಹಿಸಬೇಕು ಎಂದರು.
ಸಭೆಯಲ್ಲಿ ಡಿ.ಡಿ.ಎಲ್ .ಆರ್., ತಹಶೀಲ್ದಾರ್ ಗಳು , ಪರಿಸರ ಇಲಾಖೆಯ ಅಧಿಕಾರಿಗಳು, ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು &ಅಧಿಕಾರೇತರ ಸದಸ್ಯರು ಹಾಜರಿದ್ದರು .
Key words: Mysore, ADC, instructs, survey, all lakes, clear encroachments







