Thursday, August 27, 2026

BDA Apartments

Home Front Page ಮೈಸೂರು ದಸರಾದಲ್ಲಿ ಕಂಬಳ: ಕೇಂದ್ರ ಸಚಿವ HDK  ಆಕ್ಷೇಪ

ಮೈಸೂರು ದಸರಾದಲ್ಲಿ ಕಂಬಳ: ಕೇಂದ್ರ ಸಚಿವ HDK  ಆಕ್ಷೇಪ

ಬೆಂಗಳೂರು,ಜುಲೈ,11,2026 (www.justkannada.in): ಕರಾವಳಿ ಭಾಗದ ಕ್ರೀಡೆ ಕಂಬಳವನ್ನು ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಆಯೋಜಿಸುವುದಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸಹ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಹೆಚ್ ಡಿಕೆ, ‘ಪರಂಪರಾಗತವಾಗಿ ತನ್ನದೇ ಆದ ವೈಶಿಷ್ಟ್ಯದಿಂದ ಕಂಗೊಳಿಸುತ್ತಿರುವ ಮೈಸೂರು ದಸರಾ ಉತ್ಸವದಲ್ಲಿ ಕಂಬಳವನ್ನು ಸೇರಿಸುವ ಅಗತ್ಯವಿಲ್ಲ. ಈವರೆಗೂ ನಡೆದುಕೊಂಡು ಬಂದಿರುವ ದಸರಾಕ್ಕೆ ಧಕ್ಕೆ ತರುವ ಪ್ರಯತ್ನ ಖಂಡಿತ ಬೇಡ’ ಎಂದಿದ್ದಾರೆ.

ಕಂಬಳವು ಕರಾವಳಿ  ಭಾಗದ ಸಾಂಸ್ಕೃತಿಕ ಶ್ರೇಷ್ಠತೆ ಮತ್ತು ನಂಬಿಕೆಗಳ ಸಂಕೇತವಾಗಿದೆ. ಕಂಬಳ ಭೌಗೋಳಿಕವಾಗಿ ಆ ಭಾಗಕ್ಕೆ ಮಾತ್ರ ಸರಿಹೊಂದುವ ಆಚರಣೆಯೂ ಹೌದು. ಅದನ್ನು ಮೈಸೂರಿಗೆ ತಂದು ದೈವಿಕ ಹಿನ್ನೆಲೆಯ ಆ ಪರಂಪರೆ, ಪಾವಿತ್ರ್ಯತೆಗೆ ಧಕ್ಕೆ ತರುವುದನ್ನು ಒಪ್ಪಲಾಗದು ಎಂದು ಕಿಡಿಕಾರಿದ್ದಾರೆ.

‘ಕರಾವಳಿ ಪ್ರದೇಶ ಹಸಿರು ಮತ್ತು ನೀರಿನ ಸಂಗಮ. ಇಂಥ ಪ್ರಾಕೃತಿಕ ಹಿನ್ನೆಲೆಯಲ್ಲಿ ಕಂಬಳವನ್ನು ಕಣ್ತುಂಬಿಕೊಳ್ಳುವುದೇ ಧನ್ಯತೆಯ ಅನುಭವ ಎನ್ನುವುದು ನನ್ನ ಭಾವನೆ. ಹೀಗಾಗಿ ಮೈಸೂರು ಮತ್ತು ಕರಾವಳಿ ಜನರ ಭಾವನೆಗಳಿಗೆ ನೋವುಂಟು ಮಾಡುವುದು ಬೇಕಿಲ್ಲ ಎಂದು  ಹೆಚ್ ಡಿಕೆ ತಿಳಿಸಿದ್ದಾರೆ.

Key words: Kambala, Mysore Dasara,  Union Minister, HDK, objects