ಮೈಸೂರು,ಜೂನ್,24,2026 (www.justkannada.in): ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವ್ಯಸನ ವಿಮುಕ್ತ ಕೇಂದ್ರಗಳು (De-addiction Centers) ಕಡ್ಡಾಯವಾಗಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ (KPMA) ಅಡಿಯಲ್ಲಿ ನೋಂದಣಿಯಾಗಬೇಕು. ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಅವರು ಹೇಳಿದರು.
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಡಿ.ಸಿ ಲಕ್ಷ್ಮೀಕಾಂತರೆಡ್ಡಿ, ಜಿಲ್ಲೆಯಾದ್ಯಂತ ನೋಂದಣಿಯಾಗದೆ ನಡೆಸುತ್ತಿರುವ ವ್ಯಸನ ವಿಮುಕ್ತಿ ಕೇಂದ್ರಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಕುರಿತು ಸ್ಪಷ್ಟ ನಿರ್ದೇಶನಗಳನ್ನು ನೀಡಿದರು.
ಜಿಲ್ಲೆಯಲ್ಲಿರುವ ಪ್ರತಿಯೊಂದು ವ್ಯಸನ ವಿಮುಕ್ತಿ ಕೇಂದ್ರವು KPMA ಅಡಿಯಲ್ಲಿ ನೋಂದಣಿಯಾಗಿರುವುದು ಕಡ್ಡಾಯ. ಈ ನಿಯಮವನ್ನು ಉಲ್ಲಂಘಿಸಿ ನೋಂದಣಿ ಮಾಡಿಕೊಳ್ಳದೆ ಕಾರ್ಯನಿರ್ವಹಿಸುತ್ತಿರುವ ಕೇಂದ್ರಗಳನ್ನು ತಕ್ಷಣವೇ ಗುರುತಿಸಿ, ಅಂತಹ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವೈದ್ಯರ ಚೀಟಿ ಇಲ್ಲದೆ ಔಷಧಿಗಳನ್ನು ಮಾರಾಟ ಮಾಡುವ ಮೆಡಿಕಲ್ ಶಾಪ್ ಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಬೇಕು. ಮಾದಕ ವ್ಯಸನಗಳಿಗೆ ಕಾರಣವಾಗುವಂತಹ ಔಷಧಿಗಳ ಅನಧಿಕೃತ ಮಾರಾಟವನ್ನು ತಡೆಯಲು ಆರೋಗ್ಯ ಇಲಾಖೆ ಮತ್ತು ಔಷಧ ನಿಯಂತ್ರಣ ಇಲಾಖೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಬೇಕು ಎಂದು ಹೇಳಿದರು.
ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರ ಮಾತನಾಡಿ ಎಚ್ .ಡಿ ಕೋಟೆ ತಾಲೂಕು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡು ಇರುವುದರಿಂದ ಗಾಂಜಾ ಬೆಳೆಯುವ ಸಾಧ್ಯತೆ ಹೆಚ್ಚು. ಈ ಭಾಗದಲ್ಲಿ ಹೆಚ್ಚಿನ ಕಾರ್ಯಾಚರಣೆ ನಡೆಸಲಾಗುತ್ತಿದೆ. ಜೂನ್ 26 ರಂದು ಮಾದಕ ವಸ್ತುಗಳ ನಿರ್ಮೂಲನ ದಿನಾಚರಣೆಯನ್ನು ಆಚರಿಸಲಾಗಿತ್ತಿದೆ ಎಂದು ಹೇಳಿದರು
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕ್ ಅವರು ಮಾತನಾಡಿ ಜಿಲ್ಲೆಯ ತಾಲೂಕು ಕಾರಗೃಹಗಳಲ್ಲಿ ಡ್ರಕ್ಸ್ ಮುಕ್ತ ಮಾಡಲು ಅರಿವು ಕಾರ್ಯಕ್ರಮವನ್ನು ಮಾಡಿಸಲಾಗಿದೆ. ಶಾಲಾ ಕಾಲೇಜುಗಳಲ್ಲಿ ಮಾದಕ ವಸ್ತುಗಳ ಸೇವನೆಯ ಕುರಿತ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಪಿ.ಸಿ ಕುಮಾರಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Key words: Action, de-addiction, KPMA, Mysore DC, Laxmikant Reddy






