ಮಳೆಯಿಂದ ಹಾನಿ ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ –ಜಿಲ್ಲಾಧಿಕಾರಿ ಸೂಚನೆ  

ಮೈಸೂರು, ಮೇ, 20 (www.justkannada.in): ಮಳೆಗಾಲ ಪ್ರಾರಂಭವಾಗಿದ್ದು ಜಿಲ್ಲೆಯಲ್ಲಿ ಹೆಚ್ಚು ಮಳೆ ಆಗುವ ಸಾಧ್ಯತೆ ಇದ್ದು ಮಳೆಯಿಂದ ಆಗುವ ಹಾನಿ ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ  ಜಿ. ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಳೆಗಾಲ ಪ್ರಾರಂಭವಾಗಿದೆ. ಹವಾಮಾನ ಇಲಾಖೆ ಈ ಬಾರಿ ಉತ್ತಮ ಮಳೆಯಾಗುವ ಬಗ್ಗೆ ಮಾಹಿತಿ ನೀಡಿದೆ. ತಹಶೀಲ್ದಾರ್ ಗಳು ತಮ್ಮ ಹಂತದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಳೆಯಿಂದ ಬೆಳೆ ಹಾನಿ ಆದರೆ ಒಂದು ವಾರದಲ್ಲಿ ಬೇಳೆ ಹಾನಿ ಕುರಿತು ವರದಿಯನ್ನು ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ನೀಡಬೇಕು ಎಂದು ಸೂಚನೆ ನೀಡಿದರು.

ಮನೆ ಹಾನಿ ಸಂಬಂಧ ವಾಸ್ತವಾಂಶ ಆಧಾರದ ಮೇಲೆ ಸಮರ್ಪಕವಾಗಿ ವರದಿ ನೀಡಿ ಅದಕ್ಕೆ ಪರಿಹಾರ ನೀಡಲು ಪಿಡಿ ಖಾತೆಯಲ್ಲಿ ಹಣವಿದೆ. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.

ಕಬಿನಿ ವ್ಯಾಪ್ತಿಯ ಗ್ರಾಮಗಳಲ್ಲಿ ಹೆಚ್ಚಿನ ಪ್ರವಾಹ ಬರುವ ಸಾಧ್ಯತೆಗಳು ಹೆಚ್ಚು. ಕಳೆದ ಬಾರಿ ಯಾವ ಯಾವ ಗ್ರಾಮಗಳಲ್ಲಿ ಹೆಚ್ಚಿನ ಹಾನಿ ಆಗಿತ್ತು ಆ ಗ್ರಾಮಗಳ ಬಗ್ಗೆ ಹೆಚ್ಚು ಗಮನ ಹರಿಸಿ. ಟಿ. ನರಸೀಪುರ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಪ್ರವಾಹ ಬರುವ ಸಾಧ್ಯತೆಗಳು ಇರುತ್ತವೆ. ಈ ಗ್ರಾಮಗಳಲ್ಲಿ ಪ್ರವಾಹ ಬಂದರೆ ಜನರ ಸ್ಥಳಾಂತರ, ಗಂಜಿ ಕೇಂದ್ರಗಳ ತೆರೆಯುವ ಕುರಿತು ಪೂರ್ವಸಿದ್ಧತೆ ಮಾಡಿಕೊಳ್ಳಿ ಎಂದು ಸೂಚನೆ ನೀಡಿದರು.

ಮಳೆಗಾಲದಲ್ಲಿ ವಿದ್ಯುತ್ ಕಂಬಗಳು ಬೀಳುವ ಸಾಧ್ಯತೆಗಳು ಹೆಚ್ಚು ಈ ಬಗ್ಗೆ ಚೆಸ್ಕಾಂ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು. ವಿದ್ಯುತ್ ನಲ್ಲಿ ಅಡಚಣೆ ಆದರೆ ತಕ್ಷಣ ರಿಪೇರಿ ಮಾಡಿ ವಿದ್ಯುತ್ ಪೂರೈಕೆ ಮಾಡಬೇಕು.  ಹೆಚ್ ಡಿ ಕೋಟೆ, ಸರಗೂರು ನಂಜನಗೂಡು ಹಾಗೂ ಟಿ ನರಸೀಪುರ ತಾಲ್ಲೂಕುಗಳಲ್ಲಿ ಹೆಚ್ಚು ಹಾನಿ ಆಗುವ ಸಾಧ್ಯತೆ ಇರುತ್ತದೆ ಆದ್ದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ. ಮಳೆಯಿಂದ ಯಾವುದೇ ಪ್ರಾಣ ಹಾನಿ ಆದರೆ ಪರಿಹಾರ 24 ಗಂಟೆಯೊಳಗೆ ಕುಟುಂಬಸ್ಥರಿಗೆ ಪರಿಹಾರ ತಲುಪಬೇಕು ಎಂದು ತಹಶೀಲ್ದಾರ್ ಅವರಿಗೆ ಡಿಸಿ ಲಕ್ಷ್ಮೀಕಾಂತರೆಡ್ಡಿ ಸೂಚನೆ ನೀಡಿದರು.

ಕೋಟೆ ಹಾಗೂ ಸರಗೂರು ಭಾಗದಲ್ಲಿ ಕೆಲವು ಸೇತುವೆಗಳು ಮುಳುಗುವ ಸಾಧ್ಯತೆ ಇದ್ದು ಈ ಸಂದರ್ಭದಲ್ಲಿ ಕಾರ್ಯ ನಿರ್ವಹಿಸಲು ಜೆಸಿಬಿ ವ್ಯವಸ್ಥೆ ಮಾಡಿ ಇಟ್ಟುಕೊಳ್ಳಬೇಕು. ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳು ಬೀಳುವ ಹಂತದಲ್ಲಿ ಇದ್ದರೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಪೋಟೋ ದಾಖಲಾತಿ ಇಟ್ಟುಕೊಂಡು ತೆರವು ಗೊಳಿಸಲು ಅಧಿಕಾರಿಗಳು ಕ್ರಮವಹಿಸಿ. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು, ಡೆಂಗ್ಯೂ ಚಿಕನ್ ಗುನ್ಯಾ ಹರಡುವ ಸಾಧ್ಯತೆ ಇರುತ್ತದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಅರಿವು ಮೂಡಿಸಿ ಮೆನ್ನೆಚ್ಚರಿಕೆ ಕ್ರಮಗಳನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ಕೈಗೊಳ್ಳಿ ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಸ್ ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ  ಶೇಖ್ ತನ್ವೀರ್ ಆಸಿಫ್, ಡಿಸಿಪಿ ಮುತ್ತುರಾಜ್, ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ. ಶಿವರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Key words: necessary, precautionary, prevent rain, damage, Mysore, DC