Tuesday, August 4, 2026

BDA Apartments

Home Front Page SCP-TSP ಯೋಜನೆಯಡಿ ಅನುದಾನ ಶೇ.100ರಷ್ಟು ಬಳಕೆಗೆ ಡಿಸಿ ಲಕ್ಷ್ಮೀಕಾಂತ ರೆಡ್ಡಿ ಸೂಚನೆ

SCP-TSP ಯೋಜನೆಯಡಿ ಅನುದಾನ ಶೇ.100ರಷ್ಟು ಬಳಕೆಗೆ ಡಿಸಿ ಲಕ್ಷ್ಮೀಕಾಂತ ರೆಡ್ಡಿ ಸೂಚನೆ

ಮೈಸೂರು ನವೆಂಬರ್,28,2024 (www.justkannada.in): ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಸಮುದಾಯದ ಕಲ್ಯಾಣಕ್ಕಾಗಿ ವಿವಿಧ ಇಲಾಖೆಗೆ ಎಸ್.ಸಿ.ಪಿ-ಟಿ.ಎಸ್.ಪಿ. ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಶೇ.100ರಷ್ಟು ಬಳಕೆಯಾಗಬೇಕು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಅವರು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಜಿಲ್ಲಾ ಪಂಚಾಯತ್ ದೇವರಾಜ ಅರಸು ಸಭಾಂಗಣದಲ್ಲಿ ಅನುಸೂಚಿತ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ ಕಾರ್ಯಕ್ರಮಗಳ ಅನುಷ್ಠಾನದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಹುತೇಕ ಇಲಾಖೆಗಳು ಬಿಡುಗಡೆಯಾದ ಅನುದಾನಕ್ಕೆ ಆರ್ಥಿಕ ಪ್ರಗತಿ  ಸಾಧಿಸಬೇಕೆಂದರು.

ಭೌತಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸದಿದ್ದರೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಜವಾಬ್ದಾರರಾಗುತ್ತಾರೆ. ಈ ಸಂಬಂಧ ಜಿಲ್ಲಾ ಮಟ್ಟದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ. ಕಾವೇರಿ ನೀರಾವರಿ ನಿಗಮದ ವತಿಯಿಂದ ಫಲಾನುಭವಿಗಳಿಗೆ  ಬೋರ್ವೆಲ್ ಗಳು, ಎಸ್ ಸಿ ಎಸ್ ಟಿ ಕಾಲೋನಿಗಳಲ್ಲಿ ಸಿ ಸಿ ರಸ್ತೆ ಕಾಮಗಾರಿಗಳನ್ನು ಹಮ್ಮಿಕೊಂಡಿದ್ದು ಕಾಮಗಾರಿಗಳ ಗುಣಮಟ್ಟ ಉತ್ತಮವಾಗಿರಬೇಕು ಎಂದು ಸೂಚನೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಯುವ ವಕೀಲರಿಗೆ ನೀಡುವ ಸ್ಟೆ ಫಂಡ್ ಗೆ ಫಲಾನುಭವಿಗಳ ಆಯ್ಕೆಯನ್ನು ಆಯ್ಕೆ ಸಮಿತಿಯಲ್ಲಿ ಮಾಡಿ, ಪಟ್ಟಿ ಪ್ರಕಟಿಸಿ. ಮಾರ್ಚ್ ಅಂತ್ಯದೊಳಗೆ ಎಲ್ಲಾ ಅನುದಾನವನ್ನು ಬಳಕೆ ಮಾಡಬೇಕು ಈ ಸಂಬಂಧ ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಎಂ ಗಾಯತ್ರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್. ಬಸವರಾಜ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಂಗೇಗೌಡ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Mysore, DC, 100%, SCP-TSP scheme, funds