Sunday, August 9, 2026

BDA Apartments

Home Front Page ಮೈಸೂರು ಪ್ರವಾಸಿ ತಾಣಗಳ ಪ್ರವೇಶಕ್ಕೆ ವಿಧಿಸಿದ್ಧ ನಿರ್ಬಂಧ ತೆರವು- ಸಚಿವ ಎಸ್.ಟಿ ಸೋಮಶೇಖರ್…

ಮೈಸೂರು ಪ್ರವಾಸಿ ತಾಣಗಳ ಪ್ರವೇಶಕ್ಕೆ ವಿಧಿಸಿದ್ಧ ನಿರ್ಬಂಧ ತೆರವು- ಸಚಿವ ಎಸ್.ಟಿ ಸೋಮಶೇಖರ್…

ಮೈಸೂರು,ಅಕ್ಟೋಬರ್,17,2020(www.justkannada.in):   ಕೆಆರ್ ಎಸ್, ಮೈಸೂರು ಮೃಗಾಲಯ, ಚಾಮುಂಡಿಬೆಟ್ಟ ಹಾಗೂ ಅರಮನೆಗಳಿಗೆ ಪ್ರವಾಸಿಗರನ್ನು ದಸರಾ ಮುಗಿಯುವವರೆಗೆ ಪ್ರವೇಶ ನಿರ್ಬಂಧ ಹೇರಿರುವ ಕ್ರಮವನ್ನು ಮುಖ್ಯಮಂತ್ರಿಗಳು ಹಿಂಪಡೆಯುವಂತೆ ಸೂಚಿಸಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ  ಸೋಮಶೇಖರ್ ತಿಳಿಸಿದರು.jk-logo-justkannada-logo

ಚಾಮುಂಡಿ ಬೆಟ್ಟದಲ್ಲಿ  ಜಯದೇವ ಆಸ್ಪತ್ರೆ ನಿರ್ದೇಶಕ ಸಿ.ಎನ್ ಮಂಜುನಾಥ್ ದಸರಾ ಉದ್ಘಾಟಿಸಿದ ಬಳಿಕ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಮೈಸೂರು ಹಾಗೂ ಮೈಸೂರು ಸುತ್ತಮುತ್ತಲ ಪ್ರವಾಸಿ ತಾಣಗಳ ಮೇಲೆ ಪ್ರವಾಸಿಗರಿಗೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಮುಖ್ಯಮಂತ್ರಿಗಳು ಶುಕ್ರವಾರ ಸಭೆ ನಡೆಸುವ ವೇಳೆ ಈ ಬಗ್ಗೆ ವಿವರಣೆ ಪಡೆದು, ಈ ಆದೇಶವನ್ನು ಹೊರಡಿಸಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಮಾಸ್ಕ್ ಗಳನ್ನು ಧರಿಸಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಎಲ್ಲರಿಗೂ ಪ್ರವೇಶವನ್ನು ನೀಡಲು ಸೂಚನೆ ನೀಡಿದ್ದಾರೆಂದು ಸಚಿವರಾದ ಸೋಮಶೇಖರ್ ತಿಳಿಸಿದರು.

ಈ ಬಾರಿ ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ, ಸಾಂಪ್ರದಾಯಿಕವಾಗಿ ಆಚರಿಸಬೇಕಾದ ಅನಿವಾರ್ಯತೆ ಬಂದಿದೆ. ಆ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದರು.mysore-tourist-entire-restriction-clearance-minister-st-somashekhar

ರಾಜಪ್ರಭುತ್ವದ ನಂತರ ಈ ಸಂಪ್ರದಾಯವನ್ನು ಕರ್ನಾಟಕ ಸರ್ಕಾರ ಆಚರಿಸಿಕೊಂಡು ಬಂದಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದು. ಕೊರೋನಾ ಇದ್ದರೂ ದಸರಾ ಮಹೋತ್ಸವದ ಸಂಪ್ರದಾಯ ಮತ್ತು ಪರಂಪರೆಯನ್ನು ನಿಲ್ಲಿಸಬಾರದು ಎಂಬ ಉದ್ದೇಶದಿಂದ ಧಾರ್ಮಿಕ ವಿಧಿವಿಧಾನಗಳಿಗೆ ಸೀಮಿತವಾಗಿ ಚಾಮುಂಡಿಬೆಟ್ಟದಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

ಸರಳವಾಗಿ ಹಾಗೂ ಸಾಂಪ್ರದಾಯಿಕವಾಗಿ ನಡೆಯುವ ಈ ಬಾರಿಯ ದಸರಾ ಕಾರ್ಯಕ್ರಮವನ್ನು ವರ್ಚುವಲ್ ಆಗಿ ಪ್ರಸಾರ ಮಾಡಲಾಗುತ್ತಿದ್ದು, ಸಾರ್ವಜನಿಕರು ಟಿ.ವಿ ಹಾಗೂ ಸೋಷಿಯಲ್ ಮೀಡಿಯಾ ಮೂಲಕ ನೇರಪ್ರಸಾರ ವೀಕ್ಷಿಸಲು ಕೋರುತ್ತಿದ್ದೇನೆ ಎಂದು ಸಚಿವರಾದ ಸೋಮಶೇಖರ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಮೈಸುರು ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ದಸರಾಗೆ ಹಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸುವ ಸಾಧ್ಯತೆ ಹಿನ್ನೆಲೆ  ಮೈಸೂರು ಜಿಲ್ಲಾಡಳಿತ ಅಕ್ಟೋಬರ್ 17ರಿಂದ ನವೆಂಬರ್ 1ರವರೆಗೆ ಮೈಸೂರು ಹಾಗೂ ಮೈಸೂರಿನ ಸುತ್ತಮುತ್ತಲ ಪ್ರವಾಸಿ ತಾಣಗಳ ಮೇಲೆ ನಿರ್ಬಂಧವನ್ನು ಹೇರಿತ್ತು.

Key words: Mysore -Tourist – entire-Restriction- clearance Minister -ST Somashekhar