ಮೈಸೂರು ಮೃಗಾಲಯದಲ್ಲಿ ಮರಿ ಸಿಂಹಗಳಿಗೆ ನಾಮಕರಣ ಸಡಗರ !

 ಸಿಂಹದ ಮರಿಗಳಿಗೆ ಕಬಿನಿ ಸೂರ್ಯ ಚಂದ್ರ ಎಂದು ಸಚಿವ ಈಶ್ವರ ಖಂಡ್ರೆ ನಾಮಕರಣ

ಮೈಸೂರು, ಜುಲೈ 16, 2023 (www.justkannada.in): ಶ್ರೀ ಚಾಮರಾಜೇಂದ್ರ ಮೃಗಾಲಯದ ಗಂಡು ಸಿಂಹ ರಾಜು ಮತ್ತು ಹೆಣ್ಣು ಸಿಂಹ ನಿರ್ಭಯಾಳಿಗೆ ಜನಿಸಿದ ಒಂದು ಹೆಣ್ಣು ಹಾಗೂ ಎರಡು ಗಂಡು ಮರಿಗಳಿಗೆ ಕಬಿನಿ ಸೂರ್ಯ ಹಾಗೂ ಚಂದ್ರ ಎಂದು   ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಸಚಿವ ಹಾಗೂ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ಈಶ್ವರ ಖಂಡ್ರೆ ನಾಮಕರಣ ಮಾಡಿದರು.

ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಜನಿಸಿರುವ ಸಿಂಹದ ಮರಿಗಳಿಗೆ ಹೆಸರಿಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೊದಲ ಬಾರಿಗೆ ಮೃಗಾಲಯಕ್ಕೆ ಭೇಟಿನೀಡುತ್ತಿರುವುದು ನನಗೆ ಸಂತಸ ತಂದಿದೆ. ಭೂಮಿಯಮೇಲೆ ಕೀಟಗಳು, ಪಕ್ಷಿಗಳು ಹಾಗೂ ಪ್ರಾಣಿಗಳನ್ನು ಒಳಗೊಂಡಂತೆ ಎಲ್ಲಾ ಜೀವಿಗಳಿಗೂ ಬದುಕುವ ಹಕ್ಕಿದೆ. ಮೃಗಾಲಯದಲ್ಲಿ ಎಲ್ಲಾ ಪ್ರಾಣಿಗಳನ್ನು ಸಿಬ್ಬಂದಿಗಳು ಬಹಳ ಚೆನ್ನಾಗಿ ಪೋಷಿಸುತ್ತಿದ್ದಾರೆ ಎಂದು ಮೃಗಾಲಯದ ಸಿಬ್ಬಂದಿಗಳನ್ನು ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಮಾಧ್ಯಮದವರಿಗೆ ಪ್ರತಿಕ್ರಿಸಿದ ಅವರು, ಮುಂದಿನ ದಿನಗಳಲ್ಲಿ ಈ ಮೃಗಾಲಯವನ್ನು ಅಭಿವೃದ್ಧಿ ಪಡಿಸಲು ಹಾಗೂ ಭಾರತದಲ್ಲಿಯೇ ಉತ್ತಮ ಮೃಗಾಲಯವನ್ನಾಗಿಸಲು ಬೇಕಾದ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲು ಸೂಚಿಸುತ್ತೇನೆ. ಮನುಷ್ಯನ ಜೀವ ಅತ್ಯಮೂಲ್ಯವಾಗಿದ್ದು, ಆನೆ ಹಾಗೂ ಚಿರತೆ ದಾಳಿಯನ್ನು ತಪ್ಪಿಸಲು ಈಗಾಗಲೇ ರಾಜ್ಯ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದ್ದು ಇದಕ್ಕಾಗಿ ರೈಲ್ವೇ ಬ್ರಿಡ್ಜ್ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಮುಖ್ಯಮಂತ್ರಿಗಳು 120 ಕೋಟಿ ರೂ.ಗಳ ಅನುದಾನಕ್ಕೆ ಅನುಮೋದನೆ ನೀಡಿದ್ದು, ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಮುಂಬರುವ ದಸರಾ ಮಹೋತ್ಸವಕ್ಕೆ ಇಲಾಖೆಯಿಂದ ನೀಡಬಹುದಾದ ಸೌಲಭ್ಯಗಳನ್ನು ಸಮರ್ಪಕವಾಗಿ ಪೂರೈಸಲಾಗುವುದು. ಇದಕ್ಕಾಗಿ ಪೂರ್ವಸಿದ್ಧತೆಗಳು ನಡೆಯುತ್ತಿವೆ. ಈ ಕುರಿತು ಅಧಿಕಾರಿಗಳು ಹಾಗೂ ಸಚಿವರೊಟ್ಟಿಗೆ ಸಭೆ ನಡೆಸಿ ಚರ್ಚಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಜಿ.ವಿ ರಂಗರಾವ್, ಬೆಂಗಳೂರು ವನ್ಯಜೀವಿ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ  ಕುಮಾರ್ ಪುಷ್ಕರ್, ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರಾದ ಡಿ ಮಹೇಶ್ ಕುಮಾರ್, ಉಪ ನಿರ್ದೇಶಕರಾದ ಎ.ಜೆ ರೋಷಿಣಿ ಹಾಗೂ ಸಹಾಯಕ ನಿರ್ದೇಶಕರಾದ ಡಾ. ಜೆ ಎಲ್ ಶ್ರೀನಿವಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.