ನಾಳೆಯಿಂದ ಧಾರವಾಡ ವಿವಿಯಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ

ಮೈಸೂರು, ನವೆಂಬರ್ 29, 2019 (www.justkannada.in): ನವೆಂಬರ್ 30 ಹಾಗೂ ಡಿಸೆಂಬರ್ 1ರಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಗೋಲ್ಡನ್ ಜ್ಯುಬಿಲ್ ಹಾಲ್ ನಲ್ಲಿ ರಾಷ್ಟ್ರ ಮಟ್ಟದ  ವಿಚಾರ ಸಂಕಿರಣ ನಡೆಯಲಿದೆ.

ಭಾರತದಲ್ಲಿ ಪರಿಶಿಷ್ಟ ಪಂಗಡ ಬುಡಕಟ್ಟು ಸಮುದಾಯಗಳ ಜೀವನೋಪಾಯ’ ವಿಷಯದ ಕುರಿತು ವಿಷಯ ಮಂಡನೆಯಾಗಲಿದೆ. ಎರಡು ದಿನ ನಡೆಯುವ ವಿಚಾರ ಸಂಕಿರಣದಲ್ಲಿ ನಾನಾ ಗೋಷ್ಠಿಗಳು ನಡೆಯಲಿದ್ದು, ಹಲವು ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಂಡು ವಿಷಯ ಮಂಡಿಸಲಿದ್ದಾರೆ.

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಹಾಗೂ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಜಿ.ಕುಮಾರ್ ನಾಯಕ್, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ನಿರ್ದೇಶಕ ಸಂಗಪ್ಪ, ಧಾರವಾಡ ವಿವಿ ಕುಲಪತಿ ಪ್ರೊ. ಎ.ಎಸ್.ಶಿರಳಾಶೆಟ್ಟಿ, ರಿಜಿಸ್ಟ್ರಾರ್ ಪ್ರೊ.ಹೊನ್ನು ಸಿದ್ಧಾರ್ಥ,  ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ನಿರ್ದೇಶಕ ಪ್ರೊ.ಟಿ.ಟಿ.ಬಸವನಗೌಡ, ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಂಯೋಜಕ ಡಾ.ಸುಭಾಷ್ ಚಂದ್ರ ನಾಟೀಕರ್ ಇತರರು ಪಾಲ್ಗೊಳ್ಳಲಿದ್ದಾರೆ.