ಬಾಕಿ ಕಾಮಗಾರಿಗಳ ಹೆಚ್ಚುವರಿ ಅನುದಾನಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸಿ- ಸಚಿವ ನಾರಾಯಣಗೌಡ

ಚಾಮರಾಜನಗರ, ಸೆಪ್ಟಂಬರ್ ,7,2020(www.justkannada.in): ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಹೆಚ್ಚುವರಿ ಅನುದಾನಕ್ಕಾಗಿ ಅಗತ್ಯ ಪ್ರಸ್ತಾವನೆ ಹಾಗೂ ಅಂದಾಜುಪಟ್ಟಿ ಸಲ್ಲಿಸುವಂತೆ ಪೌರಾಡಳಿತ, ರೇಷ್ಮೆ ಹಾಗೂ ತೋಟಗಾರಿಕೆ ಸಚಿವರಾದ ಡಾ. ನಾರಾಯಣಗೌಡ ಅವರು ಸೂಚನೆ ನೀಡಿದರು.jk-logo-justkannada-logo

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳು ಅನುಷ್ಟಾನಗೊಳಿಸಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಮತ್ತು ರೇಷ್ಮೆ, ತೋಟಗಾರಿಕೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಭೆಯ ಆರಂಭದಲ್ಲಿ ಜಿಲ್ಲೆಯ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ವತಿಯಿಂದ ಅನುಷ್ಟಾನಗೊಳಿಸಿರುವ ನಗರೋತ್ಥಾನ, ಮುಖ್ಯಮಂತ್ರಿಯವರ ವಿಶೇಷ ಅನುದಾನ, ವಿವಿಧ ಸಾಲಿನ ಎಸ್.ಎಫ್.ಸಿ ಅನುದಾನ, ಸ್ವಚ್ಚ ಭಾರತ್ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರಾದ ನಾರಾಯಣಗೌಡ ಅವರು ಯಾವುದೇ ಕಾಮಗಾರಿಯನ್ನು ವಿಳಂಬ ಮಾಡದೇ ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.

ನಗರೋತ್ಥಾನ ಯೋಜನೆಯಡಿ ಚಾಮರಾಜನಗರ ನಗರಸಭೆ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ, ಒಳಚರಂಡಿ, ಕುಡಿಯುವ ನೀರು ಸೇರಿದಂತೆ ಶೇ. 50ರಷ್ಟು ಅರ್ಥಿಕ ಪ್ರಗತಿ ಸಾಧಿಸಲಾಗಿದೆ. ಕೊಳ್ಳೇಗಾಲ ನಗರಸಭಾ ವ್ಯಾಪ್ತಿಯ ಅನೇಕ ಕಾಮಗಾರಿಗಳು ಆರಂಭದ ಹಂತದಲ್ಲಿವೆ. ಗುಂಡ್ಲುಪೇಟೆ ಹಾಗೂ ಯಳಂದೂರಿನಲ್ಲಿ ರಸ್ತೆ ಕಾಮಗಾರಿ ಮುಗಿದಿದ್ದು, ಕುಡಿಯುವ ನೀರಿನ ಕೆಲಸಗಳು ತುರ್ತಾಗಿ ಆಗಬೇಕಾಗಿವೆ. ಅವುಗಳನ್ನು ಆದ್ಯತೆ ಮೇರೆಗೆ ಮುಗಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಸಚಿವರು ನಿರ್ದೇಶನ ನೀಡಿದರು.

ಮುಖ್ಯಮಂತ್ರಿಯವರ ವಿಶೇಷ ಅನುದಾನದಲ್ಲಿ ಚಾಮರಾಜನಗರ ನಗರಸಭೆ ವತಿಯಿಂದ ಜಿಲ್ಲಾ ಕ್ರೀಡಾಂಗಣ, ಖಾಸಗಿ ಬಸ್ ನಿಲ್ದಾಣ, ರಂಗಮಂದಿರದ ಕಾಮಗಾರಿ ಹಾಗೂ ಕೋರ್ಟ್ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಕೋರ್ಟ್ ರಸ್ತೆಯ ಅಗಲೀಕರಣಕ್ಕಾಗಿ 8 ಕೋಟಿ ರೂ. ಗಳನ್ನು ಲೋಕೋಪಯೋಗಿ ಇಲಾಖೆ ನೀಡಲಾಗಿದ್ದು, ರಸ್ತೆಬದಿಯಲ್ಲಿನ ನಿವಾಸಿಗಳಿಗೆ ಈಗಾಗಲೇ 2 ಕೋಟಿ 85 ಲಕ್ಷ ರೂ. ಪರಿಹಾರ ನೀಡಲಾಗಿದೆ. ಹೆಚ್ಚುವರಿ ಪರಿಹಾರದ ಅಗತ್ಯವಿದ್ದರೆ ಪ್ರಸ್ತಾವನೆ ಸಲ್ಲಿಸುವಂತೆ ಸಚಿವರಾದ ನಾರಾಯಣಗೌಡ ಅವರು ತಿಳಿಸಿದರು.

ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಕೋರ್ಟ್ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ರಸ್ತೆ ಬದಿಯ ನಿವಾಸಿಗಳಿಗೆ ಸೂಕ್ತ ಪರಿಹಾರ ಒದಗಿಸಿ ಕಾಮಗಾರಿಯನ್ನು ಅದಷ್ಟು ಬೇಗ ಪೂರ್ಣಗೊಳಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದರೂ ಸಹ ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ. ರಸ್ತೆ ಬದಿಯಲ್ಲಿ ಸರ್ಕಾರಿ ಜಾಗವಿದ್ದರೇ ಅದನ್ನು ತೆರವುಗೊಳಿಸಲು ನೋಟಿಸ್ ನೀಡುವ ಅಗತ್ಯವಿಲ್ಲ ಎಂದರು.

ಶಾಸಕರಾದ ಎನ್. ಮಹೇಶ್ ಅವರು ಮಾತನಾಡಿ ಕೊಳ್ಳೇಗಾಲದಲ್ಲಿ ಬಸ್‍ನಿಲ್ದಾಣ ಕಾಮಗಾರಿ ನಡೆಯುತ್ತಿದೆ. ಉಳಿದ ಕಾಮಗಾರಿಗಳಿಗಾಗಿ 10 ಕೋಟಿ ರೂ. ಹೆಚ್ಚುವರಿ ಅನುದಾನ ಅವಶ್ಯವಾಗಿದೆ. ಮಾದರಿ ಬಸ್ ನಿಲ್ದಾಣ ನಿರ್ಮಾಣಕ್ಕಾಗಿ ಅಗತ್ಯ ಅನುದಾನ ಬಿಡುಗಡೆ ಮಾಡಿಸುವಂತೆ ಸಚಿವರಲ್ಲಿ ಮನವಿ ಮಾಡಿದರು. ಅಲ್ಲದೆ ಕೊಳ್ಳೇಗಾಲ ನಗರಕ್ಕೆ 24*7 ಅವಧಿಯಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಒವರ್‍ಹೆಟ್ ಟ್ಯಾಂಕ್‍ಗೆ ಜಾಗದ ಸಮಸ್ಯೆ ಉದ್ಭವಿಸಿದೆ. ಅದನ್ನು ಪರಿಹರಿಸುವ ನಿಟ್ಟಿನಲ್ಲಿ ನಗರಸಭೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.

ಮುಂದುವರಿದು ಸಚಿವರಾದ ನಾರಾಯಣಗೌಡ ಅವರು ಮಾತನಾಡಿ ಪ್ರತಿ ತಾಲೂಕುಗಳಲ್ಲಿ ಸ್ಮಶಾನಗಳನ್ನು ಅಭಿವೃದ್ಧಿಪಡಿಸಬೇಕು. ಇದಕ್ಕಾಗಿ ಎಲ್ಲಾ ನಗರ, ಸ್ಥಳೀಯ ಸಂಸ್ಥೆಗಳು ಜಾಗ ಗುರುತಿಸಬೇಕು. ಆಧುನಿಕ ಮಾದರಿಯಲ್ಲಿ ವಿದ್ಯುತ್ ಚಿತಾಗಾರಗಳನ್ನು ನಿರ್ಮಿಸಬೇಕು. ಸ್ಮಶಾನದಲ್ಲಿಯೇ ನಾಗರಿಕರಿಗೆ ಸ್ನಾನಕ್ಕೆ ವ್ಯವಸ್ಥೆಯಾಗಬೇಕು. ಕುಡಿಯುವ ನೀರು, ಶೌಚಾಲಯ ಸೇರಿದಂತೆ ಎಲ್ಲಾ ಮೂಲಸೌಕರ್ಯಗಳಿಗೆ ಅಗತ್ಯ ಅಂದಾಜುಪಟ್ಟಿ ತಯಾರಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.necessary-proposals-additional-grant-pending-works-minister-narayana-gowda

ಗುಂಡ್ಲುಪೇಟೆ ಭಾಗದಲ್ಲಿ ಕೇರಳದ ವಾಹನಗಳು ಅನುಪಯುಕ್ತ ಕಸ, ತ್ಯಾಜ್ಯವನ್ನು ಸುರಿಯುತ್ತಿರುವ ಬಗ್ಗೆ ಪ್ರಸ್ತಾಪಿಸಿದ ಸಚಿವರು ಅಂತಹ ವಾಹನಗಳ ವಿರುದ್ಧ ಎಫ್.ಐ.ಆರ್ ದಾಖಲಿಸಬೇಕು. ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು. ತ್ಯಾಜ್ಯ ಸುರಿಯುತ್ತಿರುವ ವಾಹನಗಳ ನಿಯಂತ್ರಣಕ್ಕಾಗಿ ಚೆಕ್‍ಪೋಸ್ಟ್ ಅಧಿಕಾರಿಗಳು ಮುಂದಾಗುವಂತೆ ಸಚಿವರು ಕಟ್ಟುನಿಟ್ಟಾಗಿ ಸೂಚನೆ ನೀಡಿದರು.

ರೇಷ್ಮೆ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 779 ರೇಷ್ಮೆ ನೇಕಾರರಿದ್ದು, ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ 228 ಕಾಮಗಾರಿಗಳನ್ನು ಅನುಷ್ಟಾನಗೊಳಿಸಲಾಗಿದೆ. ಇದಕ್ಕಾಗಿ 67 ಲಕ್ಷ ರೂ. ವೆಚ್ಚ ಮಾಡಲಾಗಿದೆ. ಯಾವುದೇ ಕಾಮಗಾರಿ ಅನುಷ್ಟಾನ ಸಂದರ್ಭದಲ್ಲಿ ಸಂಬಂಧಪಟ್ಟ ಆಯಾ ಭಾಗದ ಶಾಸಕರ ಗಮನಕ್ಕೂ ತರಬೇಕು ಎಂದು ಸಚಿವರು ತಿಳಿಸಿದರು.

ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿಯಲ್ಲಿ ರೈತರ ಸಮಸ್ಯೆಗಳನ್ನು ಅರಿಯಲು ಅಧಿಕಾರಿಗಳು ಕ್ಷೇತ್ರಪ್ರವಾಸ ಮಾಡಬೇಕು. ಈ ಬಾರಿ ತೋಟಗಾರಿಕೆ ಬೆಳೆಹಾನಿಗೆÉ 70 ಲಕ್ಷ 85 ಸಾವಿರ ರೂ. ಪರಿಹಾರ ನೀಡಲಾಗಿದೆ. ಹೂ ಬೆಳೆಗಾರರಿಗೂ ಪರಿಹಾರ ಒದಗಿಸÀಲಾಗಿದೆ. ಹಣ್ಣು ಬೆಳೆಗಾರರಿಗೆ 58 ಲಕ್ಷ ರೂ, ಬಿಡುಗಡೆಯಾಗಿದ್ದು, ಈಗಾಗಲೇ 607 ಜನರಿಗೆ ಪರಿಹಾರ ನೀಡಲಾಗಿದೆ. ಹನಿ ನೀರಾವರಿಗಾಗಿ ಜನರು ಮದ್ಯವರ್ತಿಗಳನ್ನು ಅವಲಂಬಿಸದಂತೆ ಆದ್ಯತೆ ಮೇರೆಗೆ ಸಹಾಯಧನ ನೀಡಬೇಕು ಎಂದು ಸಚಿವರಾದ ನಾರಾಯಣಗೌಡ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಚಾಮರಾಜನಗರ ನಗರಸಭೆ ಪೌರಾಯುಕ್ತರಾದ ರಾಜಣ್ಣ, ಕೊಳ್ಳೇಗಾಲ ನಗರಸಭೆ ಆಯುಕ್ತರಾದ ನಾಗಶೆಟ್ಟಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕೆ. ಸುರೇಶ್, ಎಂಜಿನಿಯರ್ ರವಿಕುಮಾರ್, ರೇಷ್ಮೆ ಉಪನಿರ್ದೇಶಕರಾದ ವೃಷಭೇಂದ್ರಪ್ಪ, ತೋಟಗಾರಿಕಾ ಉಪನಿರ್ದೇಶಕರಾದ ಶಿವಪ್ರಸಾದ್ ಸೇರಿದಂತೆ ಪುರಸಭೆ, ಪಟ್ಟಣ ಪಂಚಾಯಿತಿ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಇದೇ ಸಂದರ್ಭದಲ್ಲಿ ಸಚಿವರಾದ ನಾರಾಯಣಗೌಡ ಅವರು ತೋಟಗಾರಿಕಾ ಇಲಾಖೆಯ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಿದರು.

key words: necessary proposals – additional -grant – pending works-Minister -Narayana Gowda.