ಮೊದಲ ಬಾರಿಗೆ ಬಿಜೆಪಿಗೆ ಮೈಸೂರು ಮೇಯರ್ ಪಟ್ಟ: ಸಚಿವ ಎಸ್.ಟಿ ಸೋಮಶೇಖರ್ ಗೆ ಸಿಎಂ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಿಂದ ಅಭಿನಂದನೆ.

ಮೈಸೂರು,ಆಗಸ್ಟ್,25,2021(www.justkannada.in): ಮೈಸೂರಿನ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಭಾರತೀಯ ಜನತಾ ಪಕ್ಷ ಮೇಯರ್ ಹುದ್ದೆಯನ್ನು ಪಡೆದಿದೆ. ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಟಿ. ಸೋಮಶೇಖರ್ ಅವರ ತಂತ್ರಗಾರಿಕೆ ಕೊನೆಗೂ ಫಲಿಸಿದೆ.

ಕಳೆದ ಒಂದು ತಿಂಗಳಿಂದ ನಡೆಯುತ್ತಿದ್ದ ರಾಜಕೀಯ ಹಗ್ಗಜಗ್ಗಾಟದಲ್ಲಿ ಕೊನೆಗೂ ಮೇಯರ್ ಹುದ್ದೆ ಪಡೆದುಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಈ ಮೂಲಕ ಬಿಜೆಪಿಯ ಸುನಂದಾ ಪಾಲನೇತ್ರ ಅವರು ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಬಿಜೆಪಿಗೆ ಮೇಯರ್ ಪಟ್ಟ ಒಲಿಯಲಿದೆ ಎಂದು ಹೇಳುತ್ತಲೇ ಬಂದಿದ್ದ ಉಸ್ತುವಾರಿ ಸಚಿವರಾದ ಸೋಮಶೇಖರ್ ಅವರ ಕಾರ್ಯತಂತ್ರ ಕೊನೆಗೂ ಯಶಸ್ವಿಯಾಗಿದೆ.

ಕೊನೇ ಘಳಿಗೆವರೆಗೂ ರಹಸ್ಯ ಕಾಪಾಡಿಕೊಂಡ ಎಸ್ ಟಿ  ಸೋಮಶೇಖರ್.

ಬಿಜೆಪಿಗೆ ಮೇಯರ್ ಪಟ್ಟ ಸಿಗಲೇಬೇಕೆಂಬ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿರುವ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು, ಕೊನೇ ಘಳಿಗೆವರೆಗೂ ರಹಸ್ಯವನ್ನು ಕಾಪಾಡಿಕೊಂಡು ಬಂದಿದ್ದಾರೆ. ತಮ್ಮ ಕಾರ್ಯತಂತ್ರವೇನು..? ಎಂಬಿತ್ಯಾದಿ ಎಲ್ಲ ಮಾಹಿತಿಗಳನ್ನು ಬಿಟ್ಟುಕೊಡದೆ ಕೌತುಕ ಸೃಷ್ಟಿಸಿದ್ದರು.

ಯಶಸ್ವಿಯಾದ ಸಚಿವ ಸೋಮಶೇಖರ್

ಕಳೆದ ವಾರ ಹಿಂದಷ್ಟೆ ಜೆಡಿಎಸ್ ಮುಖಂಡರಾದ ಹಾಗೂ ಶಾಸಕರಾದ ಸಾ.ರಾ. ಮಹೇಶ್ ಅವರ ಜತೆ ಉಸ್ತುವಾರಿ ಸಚಿವರಾದ ಸೋಮಶೇಖರ್ ಅವರು ಸಂಸದರು, ಶಾಸಕರು, ಬಿಜೆಪಿ ನಗರಾಧ್ಯಕ್ಷರು, ಮುಡಾ ಅಧ್ಯಕ್ಷರ ಜೊತೆಗೂಡಿ ಭೇಟಿಯಾಗಿ ಮೇಯರ್ ಚುನಾವಣೆ ಬಗ್ಗೆ ಮಾತುಕತೆ ನಡೆಸಿದ್ದನ್ನು ಸ್ಮರಿಸಬಹುದು. ಕೊನೆಗೂ ಮೈಸೂರಿನಲ್ಲಿ ಬಿಜೆಪಿಗೆ ಮೇಯರ್ ಹುದ್ದೆ ಲಭಿಸುವಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಸೋಮಶೇಖರ್ ಅವರು ಯಶಸ್ವಿಯಾಗಿದ್ದಾರೆ.

ಮೈಸೂರು ಪಾಲಿಕೆಯ 38 ವರ್ಷದ ಇತಿಹಾದಲ್ಲೇ ಪ್ರಥಮ.

160ಕ್ಕೂ ಹೆಚ್ಚು ವರ್ಷದ ಇತಿಹಾಸ ಹೊಂದಿರುವ ಮೈಸೂರು ಪೌರ ಸಂಸ್ಥೆಯು 1983ರಲ್ಲಿ ಮಹಾನಗರ ಪಾಲಿಕೆಯಾಗಿ ಹೊರಹೊಮ್ಮಿತು. ಅಲ್ಲಿಂದ ಇಲ್ಲಿಯವರೆಗಿನ 38 ವರ್ಷದ ಅವಧಿಯಲ್ಲಿ ಬಿಜೆಪಿ ಒಂದು ಬಾರಿಯೂ ಮೇಯರ್ ಪಟ್ಟವನ್ನು ಅಲಂಕರಿಸಿರಲಿಲ್ಲ. ಇದೀಗ ಸಚಿವರಾದ ಸೋಮಶೇಖರ್ ಅವರ ಕಾರ್ಯತಂತ್ರದ ಫಲವಾಗಿ ಬಿಜೆಪಿ ಸಾಧನೆ ತೋರಿದೆ.

ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ ಮಾಜಿ ಮುಖ್ಯಮಂತ್ರಿಗಳು

ಕಳೆದ 1 ವರ್ಷದಿಂದ ಅತ್ಯಂತ ಚುರುಕಿನಿಂದ 24×7 ಪಕ್ಷದ ನಿರ್ದೇಶನಗಳನ್ನು ಮತ್ತು ಸರ್ಕಾರದ ಜನಪ್ರಿಯ ಯೋಜನೆಗಳನ್ನು ತಲುಪಿಸುವಲ್ಲಿ ಯಶಸ್ಸನ್ನು ಈಗಾಗಲೇ ಸಾಧಿಸಿದ್ದೀರಿ. ಇದೀಗ ಮೈಸೂರಿನ ಮಹಾಪೌರರು ಹಾಗೂ ಉಪ ಮಹಾಪೌರರನ್ನು ಆಯ್ಕೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಕ್ಕೆ ಅಭಿನಂದನೆಗಳು ಎಂದು ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಸಚಿವ ಎಸ್.ಟಿ ಸೋಮಶೇಖರ್ ಶ್ಲಾಘಿಸಿದ ಸಿಎಂ ಬಸವರಾಜ ಬೊಮ್ಮಾಯಿ.

ಮೈಸೂರು ಮಹಾನಗರ ಪಾಲಿಕೆಯ 38 ವರ್ಷಗಳ ಇತಿಹಾಸದಲ್ಲಿ ಬಿಜೆಪಿ ಪ್ರಥಮ ಬಾರಿಗೆ ಮೇಯರ್ ಪಟ್ಟವನ್ನು ಹೊಂದಿದೆ. ಇದಕ್ಕೆ ಸಹಕಾರ ಸಚಿವರಾಗಿರುವ ಎಸ್.ಟಿ.ಸೋಮಶೇಖರ್ ಅವರ ಪಾತ್ರ ಬಹಳ ದೊಡ್ಡದಿದೆ. ಪಕ್ಷಕ್ಕಾಗಿ ಅವರ ದುಡಿಮೆ, ಶ್ರಮ ನಿಜಕ್ಕೂ ಸಾರ್ಥಕವಾಗಿದೆ. ಈ ಅವಕಾಶವನ್ನು ಪಕ್ಷ ಸದುಪಯೋಗಪಡಿಸಿಕೊಂಡು ಮೈಸೂರಿನಲ್ಲಿ ಮತ್ತಷ್ಟು ಅಭಿವೃದ್ಧಿಯನ್ನು ಮಾಡಿ ತೋರಿಸಲಿ ಎಂದು ಹಾರೈಸುವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರಿಂದ ಅಭಿನಂದನೆ

ಮೇಯರ್ –  ಪಟ್ಟ ಬಿಜೆಪಿಗೆ ಒಲಿಯುತ್ತಿದ್ದಂತೆ ದೂರವಾಣಿ ಕರೆ ಮಾಡಿ ಅಭಿನಂದನೆ ತಿಳಿಸಿದ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು, ಮೈಸೂರಿನಲ್ಲಿ ಬಿಜೆಪಿ ಪಾಲಿಗೆ ಹೊಸ ಇತಿಹಾಸ ಸೃಷ್ಟಿ ಮಾಡಿದ್ದಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಲ್ಲದೆ, ಪಕ್ಷಕ್ಕಾಗಿ ಸೇವೆ ಹೀಗೆಯೇ ಮುಂದುವರಿಯಲಿ ಎಂದು ತಿಳಿಸಿದ್ದಾರೆ.

ಸಂಸದ ಪ್ರತಾಪ್ ಸಿಂಹ ಮಾತನಾಡಿ, ಇದೇ ಪ್ರಥಮ ಬಾರಿಗೆ ಬಿಜೆಪಿಗೆ ಮೇಯರ್ ಪಟ್ಟ ಒಲಿದಿರುವುದು ಸಂತಸ ತಂದಿದೆ. ಕೊನೆಗೂ ಬಹುವರ್ಷಗಳ ಕನಸು ಈಡೇರಿದಂತಾಗಿದೆ. ಇದಕ್ಕೆ ನಮ್ಮ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ಕಾರ್ಯತಂತ್ರ ಅಡಗಿದೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಬಿಜೆಪಿ ನಗರಾಧ್ಯಕ್ಷ ಶ್ರೀವತ್ಸ ಮಾತನಾಡಿ,  ಮೈಸೂರು ಜಿಲ್ಲೆಯ ಇತಿಹಾಸದಲ್ಲಿಯೇ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅತಿ ಹೆಚ್ಚಿನ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವನ್ನು ಸಾಧಿಸಿದ್ದಾರೆ. ಪ್ರಸ್ತುತ ಪಾಲಿಕೆಯಲ್ಲಿ ಮೇಯರ್ ಸ್ಥಾನ ಬಿಜೆಪಿಗೆ ಒಲಿದಿರುವುದರ ಹಿಂದೆ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ಪಾತ್ರ ಮಹತ್ತರವಾಗಿದೆ. ಮೈಸೂರು ಜನತೆಯ ಹಾಗೂ ಪಕ್ಷದ ಪರವಾಗಿ ಅವರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.

ಶಾಸಕ ಎಲ್.ನಾಗೇಂದ್ರ, ಅವರು ಮಾತನಾಡಿ, ಮೈಸೂರಿನ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿರುವ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು 1600ಕ್ಕೂ ಹೆಚ್ಚು ಪ್ರಾಣಿ ಸಂಕುಲಗಳನ್ನು ಹೊಂದಿರುವ ಜಯಚಾಮರಾಜೇಂದ್ರ ಮೃಗಾಲಯಕ್ಕೆ ಕೊರೋನಾ ಸಂಕಷ್ಟದ ಸಂದರ್ಭದಲ್ಲಿ 135 ವರ್ಷಗಳ ಇತಿಹಾಸದಲ್ಲಿ ಅತಿ ಹೆಚ್ಚಿನ ದೇಣಿಗೆ ಸಂಗ್ರಹಿಸಿ ದಾಖಲೆ ನಿರ್ಮಿಸಿದ್ದರು. ಇದೀಗ ಇದೇ ಪ್ರಥಮ ಬಾರಿಗೆ ಅಂಥದ್ದೇ ಒಂದು ದಾಖಲೆಯನ್ನು ಮೈಸೂರು ಪಾಲಿಕೆ ಇತಿಹಾಸದಲ್ಲಿ ಮೇಯರ್‌ ಹುದ್ದೆ ಬಿಜೆಪಿಗೆ ಒಲಿಯುವಂತೆ ಮಾಡಿದ್ದಾರೆ ಎಂದು ಶ್ಲಾಘಿಸಿದರು.

Key words: Mysore mayor – first time- BJP-CM bommai- BJP President –congratulate- Minister- ST Somashekhar.