ತಮಿಳುನಾಡಿಗೆ ಯಾವ ಸಂಕಷ್ಟವೂ ಇಲ್ಲ: ಯಾವ ಕಾರಣಕ್ಕೂ ರಾಜ್ಯ ಸರ್ಕಾರ ನೀರು ಹರಿಸಬಾರದು- ಮಾಜಿ ಸಿಎಂ ಹೆಚ್.ಡಿಕೆ

ಬೆಂಗಳೂರು,ಸೆಪ್ಟಂಬರ್,13,2023(www.justkannada.in):  ಪ್ರತಿ ದಿನ 5 ಸಾವಿರ ಕ್ಯೂಸೆಕ್ ನಂತೆ ಮತ್ತೆ 15 ದಿನಗಳ ಕಾಲ ತಮಿಳುನಾಡಿಗೆ ನೀರು ಹರಿಸುವಂತೆ  ಕರ್ನಾಟಕಕ್ಕೆ ಕಾವೇರಿ ಜಲ ನಿಯಂತ್ರಣ ಸಮಿತಿ ಸೂಚಿಸಿದ್ದು ಈ ಆದೇಶದ ವಿರುದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ನಿತ್ಯವೂ ನೆರೆರಾಜ್ಯಕ್ಕೆ 5,000 ಕ್ಯೂಸೆಕ್‌ ಕಾವೇರಿ ನೀರು ಹರಿಸಬೇಕೆಂದು ಕರ್ನಾಟಕಕ್ಕೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಕೊಟ್ಟಿರುವ ನಿರ್ದೇಶನ ಆಘಾತಕಾರಿ. ಯಾವ ಕಾರಣಕ್ಕೂ ರಾಜ್ಯ ಸರಕಾರ ನೀರು ಹರಿಸಬಾರದು.

ಸಂಕಷ್ಟಸೂತ್ರವೇ ಇಲ್ಲ, ಕರ್ನಾಟಕಕ್ಕಷ್ಟೇ ಸಂಕಷ್ಟವೇ? ತಮಿಳುನಾಡಿಗೆ ಯಾವ ಸಂಕಷ್ಟವೂ ಇಲ್ಲ. ಆದೇಶ ಪಾಲನೆಗಷ್ಟೇ ಕರ್ನಾಟಕ, ಅನುಭವಿಸಲಿಕ್ಕೆ ತಮಿಳುನಾಡು!! ಹೀಗಿದೆ ನಮ್ಮ ಸ್ಥಿತಿ. ಆ ರಾಜ್ಯವು ಎಷ್ಟು ವಿಸ್ತೀರ್ಣದಲ್ಲಿ ಬೆಳೆ ಬೆಳೆಯುತ್ತಿದೆ ಎಂಬ ಅಂಕಿ-ಅಂಶದ ಬಗ್ಗೆ ಸಮಿತಿಯಲ್ಲಿ ಚರ್ಚಿಸಿಲ್ಲ ಎನ್ನುವುದಕ್ಕೆ ಆ ಸಮಿತಿಯ ಆದೇಶವೇ ಸಾಕ್ಷಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಿತಿ & ಪ್ರಾಧಿಕಾರದ ಸಭೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಿಲ್ಲ. ಆ ಸಭೆಗಳಿಗೆ ಅಧಿಕಾರಿಗಳು ಆನ್‌ʼಲೈನ್‌ʼನಲ್ಲಿ ಹಾಜರಾದರೆ, ನೆರೆರಾಜ್ಯದವರು ಖುದ್ದು ಹಾಜರಿದ್ದು ಅಂಕಿ-ಅಂಶ ಸಮೇತ ವಾದ ಮಂಡಿಸುತ್ತಾರೆ. ಹೀಗಾದರೆ, ರಾಜ್ಯದ ಹಿತರಕ್ಷಣೆ ಹೇಗೆ ಸಾಧ್ಯ? ನೆಲ,ಜಲ,ಭಾಷೆ ಬಗ್ಗೆ ತಮಿಳುನಾಡಿನವರಿಗೆ ಇರುವ ಬದ್ಧತೆ ನಮ್ಮವರಿಗಿಲ್ಲ.ಇದು ದುರಂತ ಎಂದು ಹೆಚ್.ಡಿಕೆ ಬೇಸರ ಹೊರಹಾಕಿದ್ದಾರೆ.

ಟ್ರಿಬ್ಯುನಲ್‌ ಆದೇಶ ಉಲ್ಲಂಘಿಸಿರುವ ತಮಿಳುನಾಡು ವಿರುದ್ಧ ಸಮರ್ಥ ವಾದ ಮಂಡಿಸಲು ಏಕೆ ಸಾಧ್ಯವಾಗಿಲ್ಲ?

ನಮ್ಮವರಲ್ಲಿ ಉಪೇಕ್ಷೆ, ಉಡಾಫೆ ಹೆಚ್ಚು. ಟ್ರಿಬ್ಯುನಲ್‌ ಆದೇಶ ಉಲ್ಲಂಘಿಸಿರುವ ತಮಿಳುನಾಡು ವಿರುದ್ಧ ಸಮರ್ಥ ವಾದ ಮಂಡಿಸಲು ಏಕೆ ಸಾಧ್ಯವಾಗಿಲ್ಲ? ನೀರಾವರಿ ಪ್ರದೇಶವನ್ನು ನೆರೆರಾಜ್ಯ ಅಕ್ರಮವಾಗಿ ವಿಸ್ತರಣೆ ಮಾಡಿಕೊಂಡಿರುವುದನ್ನು ಹೇಳಲೇಬೇಕಿತ್ತು. ಮೊದಲು ಸಂಕಷ್ಟಸೂತ್ರ ರೂಪಿಸಿ ಎಂದು ಪಟ್ಟು ಹಿಡಿಯಬೇಕಿತ್ತು.

ಜಲ ನಿರ್ವಹಣೆ ಪ್ರಾಧಿಕಾರ, ಜಲ ನಿಯಂತ್ರಣ ಸಮಿತಿ ಏನು ಮಾಡುತ್ತಿವೆ? ಟ್ರಿಬ್ಯುನಲ್ ಆದೇಶ ಉಲ್ಲಂಘಿಸಿ, ನೀರಾವರಿ ಪ್ರದೇಶ ಹೆಚ್ಚಿಸಿಕೊಂಡಿರುವ ತಮಿಳುನಾಡು ಬಗ್ಗೆ ಇವುಗಳಿಗೆ ಮಾಹಿತಿ ಇಲ್ಲವೇ? ರಾಜ್ಯಗಳ ನೈಜಸ್ಥಿತಿ ಅರಿಯುವ ಕರ್ತವ್ಯ ಅವುಗಳಿಗೆ ಇಲ್ಲವೇ? ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಎನ್ನುವ ನೀತಿ ಯಾಕೆ? ಎಂದು ಕಾವೇರಿ ಜಲ ನಿಯಂತ್ರಣ ಸಮಿತಿ ವಿರುದ್ಧ ಹೆಚ್.ಡಿಕೆ ಹರಿಹಾಯ್ದಿದ್ದಾರೆ.

ನಮ್ಮ ರೈತರಿಗೇ ನೀರಿಲ್ಲದಿದ್ದರೂ, ಅವರು ಬೆಳೆಯನ್ನೇ ಬೆಳೆಯದಿದ್ದರೂ ನೀರು ಬಿಡಲು ಸರಕಾರ ಒಪ್ಪಿದೆ. ಈ ವಿಷಯದಲ್ಲಿ ರಾಜ್ಯ ಸರಕಾರ ಪೂರ್ಣ ವಿಫಲವಾಗಿದೆ. ರೈತರ ತಾಳ್ಮೆಯನ್ನೂ ದುರುಪಯೋಗ ಮಾಡಿಕೊಂಡಿದೆ. ಸುಪ್ರೀಂ ಕೋರ್ಟ್ ಏನು ಹೇಳುತ್ತದೋ ಅಲ್ಲಿಯವರೆಗೆ ಕಾಯಬೇಕಿತ್ತು. ಪ್ರಾಧಿಕಾರ, ಸಮಿತಿ ಹೇಳಿದವೆಂದು ನೀರು ಬಿಟ್ಟಿದ್ದು ತಪ್ಪು

ರೈತರ ಬಗ್ಗೆ ಕಾಳಜಿ, ಬೆಂಗಳೂರಿನ ಜನರ ಕುಡಿಯುವ ನೀರಿನ ಬಗ್ಗೆ ಆತಂಕ ಇದ್ದಿದ್ದರೆ ಸರಕಾರ ನೀರು ಹರಿಸುತ್ತಿರಲಿಲ್ಲ. ಬೆಂಗಳೂರಿಗರ ಮೌನ ನನಗೆ ಅಚ್ಚರಿ ತಂದಿದೆ. ನೆರೆ ರಾಜ್ಯಗಳಿಂದ ವಲಸೆ ಬಂದು ನಮ್ಮ ನೆಲ, ಜಲ, ಆರ್ಥಿಕತೆಯ ಆಸರೆಯಲ್ಲಿ ನೆಮ್ಮದಿಯಾಗಿರುವವರು ಕೂಡ ಕಾವೇರಿ ಬಗ್ಗೆ ದನಿ ಎತ್ತಬೇಕು. ಇವರಾರಿಗೂ ಕಾವೇರಿ ನೀರಿನ ಚಿಂತೆಯೇ ಇಲ್ಲ ಎಂದು ಹೆಚ್.ಡಿಕೆ ಬೇಸರ ಹೊರ ಹಾಕಿದ್ದಾರೆ.

ಸರಕಾರ ಹೆಜ್ಜೆಹೆಜ್ಜೆಗೂ ಎಡವಿದೆ. ತಮಿಳುನಾಡು ಸುಪ್ರೀಂ ಕೋರ್ಟಿಗೆ ಅರ್ಜಿ ಹಾಕಿದಾಕ್ಷಣ ರಾಜ್ಯ ಸರಕಾರವೂ ತಕ್ಷಣವೇ ಆಕ್ಷೇಪ ಸಲ್ಲಿಸಬೇಕಿತ್ತು. ವಾಸ್ತವ ಸ್ಥಿತಿಯ ಬಗ್ಗೆ ದಾಖಲೆಗಳನ್ನು ಒದಗಿಸಿ, ಸಮರ್ಥವಾಗಿ ಎದುರಿಸಬೇಕಿತ್ತು. ಕಾಲಹರಣ ಮಾಡಿದ್ದಲ್ಲದೆ, ಈಗ ಕಾವೇರಿ ಬಗ್ಗೆ ಮೊಸಳೆ ಕಣ್ಣೀರು ಹಾಕಿದರೆ ಕನ್ನಡಿಗರು ನಂಬಬೇಕಾ? ಎಂದು ಸರ್ಕಾರದ ವಿರುದ್ದ ಹೆಚ್.ಡಿಕೆ ವಾಗ್ದಾಳಿ ನಡೆಸಿದ್ದಾರೆ.

Key words:  no problem – Tamilnadu- not release –caveri-water – Former CM- H.D Kumaraswamy