ಸರ್ವಪಕ್ಷ ನಿಯೋಗ ಭೇಟಿಗೆ ಪ್ರಧಾನಿ ಕಚೇರಿಯಿಂದ ಯಾವುದೇ ಉತ್ತರವಿಲ್ಲ-ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು,ಸೆಪ್ಟಂಬರ್,12,2023(www.justkannada.in):  ಕಾವೇರಿ ನೀರಿನ ವಿಚಾರವಾಗಿ ಪ್ರಧಾನಮಂತ್ರಿಗಳ ಕಚೇರಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ಪತ್ರ ಬರೆಯುತ್ತಲೇ ಇದ್ದೇವೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಂದಿನ ವಾರ ಅವಕಾಶ ಸಿಗಬಹುದೆಂದು ನಂಬಿದ್ದೇವೆ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಇಂದು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, “ನಮ್ಮ ಬಳಿ ಕೇವಲ ಕುಡಿಯಲು ಮತ್ತು ನಮ್ಮ ರೈತರ ಬೆಳೆಗಳಿಗೆ ಸಾಕಾಗುವಷ್ಟು ಮಾತ್ರ ನೀರಿದೆ. ಕಾವೇರಿ ಅಚ್ಚುಕಟ್ಟು ಪ್ರದೇಶದ ಅಣೆಕಟ್ಟುಗಳಲ್ಲಿ ನೀರಿಲ್ಲ ಎಂದು ಸ್ಪಷ್ಟವಾಗಿ ಕಾವೇರಿ ಪ್ರಾಧಿಕಾರಕ್ಕೆ ಮಾಹಿತಿ ನೀಡಿದ್ದೇವೆ” ಎಂದು ಹೇಳಿದರು.

ಬಿಜೆಪಿ ನಿಮ್ಮ ಮೇಲೆ ಪದೇ, ಪದೇ ಆರೋಪ ಮಾಡಲು ಕಾರಣವೇನು ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ‘’ಅಧಿಕಾರ ಕೈ ಬಿಟ್ಟು ಹೋಗಿರುವುದು ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಬಿಜೆಪಿ ಮತ್ತು ಜೆಡಿಎಸ್ ಇಬ್ಬರೂ ಅನವಶ್ಯಕ ರಾಜಕಾರಣ ಮಾಡುತ್ತಿದ್ದಾರೆ. ನಾವು ಇವರ ಮಾತಿಗೆಲ್ಲ ತಲೆ ಕೆಡಿಸಿಕೊಳ್ಳುವುದಿಲ್ಲ. ನಮಗೆ ರಾಜ್ಯದ ಹಿತ ಹಾಗೂ ಅಭಿವೃದ್ಧಿ ಮುಖ್ಯ” ಎಂದು ತಿಳಿಸಿದರು.

Key words: No reply –PM- office – all-party –delegation- visit-DCM -DK Shivakumar