ಬೆಂಗಳೂರು,ಮೇ,9,2025 (www.justkannada.in): ಭಾರತ ಮತ್ತು ಪಾಕ್ ನಡುವೆ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಈ ನಡುವೆ ಭಯೋತ್ಪಾದನೆಗೆ ಸಂಬಂಧಪಟ್ಟಂತೆ ಸ್ಲೀಪರ್ ಸೆಲ್ ಗಳ ಮೇಲೆ ನಿಗಾ ವಹಿಸುವಂತೆ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಗೃಹ ಇಲಾಖೆಯು ಆರಂಭದಿಂದಲೂ ರಾಜ್ಯದಲ್ಲಿ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳಿಗೆ ಎಚ್ಚರಿಕೆಯಿಂದಿರಲು ತಾಕೀತು ಮಾಡಿದೆ. ಗುಪ್ತದಳದ ಮಾಹಿತಿಯನ್ನು ನಿಖರವಾಗಿ ಕಲೆ ಹಾಕಬೇಕು. ಬೆಂಗಳೂರಿನಲ್ಲಿ ಸ್ಲೀಪರ್ ಸೆಲ್ಗಳಿದ್ದರೆ ಅದನ್ನು ಪತ್ತೆ ಹಚ್ಚಿ ಕೇಂದ್ರ ತನಿಖಾ ಸಂಸ್ಥೆಗಳ ಜೊತೆ ಮಾಹಿತಿ ಹಂಚಿಕೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು.
ಭಯೋತ್ಪಾದಕರು ಗುರಿ ಮಾಡಿದ್ದಾರೋ, ಇಲ್ಲವೋ ಗೊತ್ತಿಲ್ಲ. ಆದರೆ ನಾವಂತೂ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದೇವೆ. ಆಯಾ ಪರಿಷ್ಕರಣೆಯ ಅಧಿಕಾರಿಗಳಿಗೆ ತೀವ್ರ ನಿಗಾ ವಹಿಸಲು ಸೂಚನೆ ನೀಡಲಾಗಿದೆ. ಈಗಾಗಲೇ ಅಣೆಕಟ್ಟು, ಬೃಹತ್ ಕೈಗಾರಿಕೆಗಳು, ಪ್ರತಿಷ್ಠಿತ ಸಂಸ್ಥೆಗಳು, ವಿದ್ಯುತ್ ಉತ್ಪಾದನಾ ಕೇಂದ್ರಗಳಿಗೆ ಭದ್ರತೆ ಒದಗಿಸಲಾಗಿದೆ. ಹೆಚ್ಚುವರಿ ರಕ್ಷಣೆಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ಪರಮೇಶ್ವರ್ ತಿಳಿಸಿದರು.
Key words: Home Minister, Parameshwar, sleeper cells