ವಾಲ್ಮೀಕಿ ಪ್ರತಿಮೆ ಸ್ಥಾಪನೆಗೆ ಒತ್ತಾಯಿಸಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಕೆ.

ಮೈಸೂರು,ನವೆಂಬರ್,2,2023(www.justkannada.in):  ಮಹರ್ಷಿ ವಾಲ್ಮೀಕಿ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ನೀಡುವಂತೆ ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ಮನವಿ ಸಲ್ಲಿಕೆ ಮಾಡಿದರು.

ಮನವಿ ಸಲ್ಲಿಕೆ ಬಳಿಕ ಮಾತನಾಡಿದ ಲೋಕೇಶ್ ಪಿಯಾ, ಮೈಸೂರು ತಾಲ್ಲೂಕು ಕಚೇರಿ ಮುಂಭಾಗದ ಪಾರ್ಕ್ ನಲ್ಲಿ ವಾಲ್ಮೀಕಿ ಪ್ರತಿಮೆ ನಿರ್ಮಾಣ ಮಾಡಲಾಗಿತ್ತು. ಆದರೆ ಪಾಲಿಕೆ ಅಧಿಕಾರಿಗಳು ವಾಲ್ಮೀಕಿ ಜಯಂತಿ ದಿನದಂದೇ  ಪ್ರತಿಮೆ ತೆರವು ಮಾಡಿದ್ದಾರೆ. ಪ್ರತಿಮೆ ನಿರ್ಮಾಣ ಮಾಡದಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ ಎಂದು ಅಧಿಕಾರಿಗಳು ಹೇಳಿಕೆ ಕೊಟ್ಟಿದ್ದಾರೆ. ಆದರೆ ವಿವೇಕಾನಂದ ಸರ್ಕಲ್ ನಲ್ಲಿ ಕೋಟ್ಯಂತರ ರೂ ಖರ್ಚು ಮಾಡಿ ಇವರೇ ಪ್ರತಿಮೆ ನಿರ್ಮಾಣ ಮಾಡುತ್ತಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಇವರಿಗೆ ಅನ್ವಯವಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

ವಾಲ್ಮೀಕಿ ಪ್ರತಿಮೆ ನಿರ್ಮಾಣಕ್ಕೆ ನಮಗೆ ಅವಕಾಶ ನೀಡಬೇಕು. ನಮಗೆ ಅವಕಾಶ ಕೊಡದೆ ಇನ್ನೊಂದು ಪ್ರತಿಮೆ ಅನಾವರಣಕ್ಕೆ ನೀವು ಅನುಮತಿ ಕೊಟ್ಟರೆ ಪಾಲಿಕೆ ಮುಂಭಾಗ ಬೃಹತ್ ಪ್ರತಿಭಟನೆ ನಡೆಸುತ್ತೇವೆ. ಅನಾಹುತಗಳು ಸಂಭವಿಸಿದರೆ ಅದಕ್ಕೆ ಮೇಯರ್,ಕಮಿಷನರ್ ಮತ್ತು ಪಾಲಿಕೆ ಅಧಿಕಾರಿಗಳೇ ನೇರ ಹೊಣೆ ಎಂದು ಪಾಲಿಕೆ ಸದಸ್ಯ ಲೋಕೇಶ್ ಪಿಯಾ ಹೇಳಿದ್ದಾರೆ.

Key words: Petition –mysore- Corporation Commissioner – construction – Valmiki -statue.