ಬೆಂಗಳೂರು, ಸೆಪ್ಟಂಬರ್,12,2026 (www.justkannada.in): ಖಾಸಗಿ ಶಾಲೆಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಪರಿಗಣಿಸುವಂತೆ ಬೇಡಿಕೆ ಇದ್ದು, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ. ಮುಂದೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಆನೇಕಲ್ ತಾಲ್ಲೂಕಿನ ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಅತ್ತಿಬೆಲೆಯ ಸೆಂಟ್ ಫಿಲೋಮಿನಾಸ್ ಸಂಸ್ಥೆ ಆವರಣದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, 6ನೇ ವಾರ್ಷಿಕೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಸಚಿವ ಮಧು ಬಂಗಾರಪ್ಪ ಅವರು ಮಾತನಾಡಿದರು.
ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿರುವ ವಿವಿಧ ಬೇಡಿಕೆಗಳು ಸರ್ಕಾರದ ಗಮನದಲ್ಲಿವೆ. ಬೆಂಗಳೂರಿನ ಸಂಚಾರ ದಟ್ಟಣೆ ಹಿನ್ನೆಲೆಯಲ್ಲಿ ಶಾಲಾ ಸಮಯ ಬದಲಾವಣೆ ಮಾಡುವಂತೆ ಮನವಿ ಮಾಡಲಾಗಿದೆ. ಈ ಕುರಿತು ವಿವಿಧ ಇಲಾಖೆಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಖಾಸಗಿ ಶಾಲೆಗಳ ಆರ್ ಆರ್ ನವೀಕರಣ ಹಾಗೂ ಬೆಂಗಳೂರು ನಗರದಲ್ಲಿ ಸರ್ಕಾರಿ ನೌಕರರಿಗೆ ನೀಡಲಾಗುತ್ತಿರುವ ಮನೆ ಬಾಡಿಗೆ ಭತ್ಯೆ (ಎಚ್ಆರ್ಎ)ಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರಿಗೂ ನೀಡುವಂತೆ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ನೇತೃತ್ವದ ಸಮಿತಿ ಶಿಫಾರಸುಗಳನ್ನು ಮಾಡಿದೆ. ಈ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಖಾಸಗಿ ಶಾಲೆಗಳು ಸರ್ಕಾರಕ್ಕೆ ಹಣ ಪಾವತಿಸಲು ಸಿದ್ಧವಿದ್ದು, ಸರ್ಕಾರಿ ಪಠ್ಯಪುಸ್ತಕಗಳನ್ನು ನೀಡುವಂತೆ ಮನವಿ ಮಾಡಿರುವ ವಿಚಾರವೂ ಗಮನದಲ್ಲಿದೆ. ಈ ಬೇಡಿಕೆಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಸರ್ಕಾರಿ ಶಾಲೆಗಳ ಬಲವರ್ಧನೆಗೆ ‘ಅಕ್ಷಯ’ ಕಾರ್ಯಕ್ರಮ
ತಮ್ಮ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳ ಬಲವರ್ಧನೆ ಹಾಗೂ ಮಕ್ಕಳ ಹಾಜರಾತಿ ಹೆಚ್ಚಿಸುವ ಉದ್ದೇಶದಿಂದ ‘ಅಕ್ಷಯ’ ಕಾರ್ಯಕ್ರಮ ಜಾರಿಗೆ ತಂದಿದ್ದರು ಎಂದು ಮಧು ಬಂಗಾರಪ್ಪ ಸ್ಮರಿಸಿದರು. ಸರ್ಕಾರಿ ಶಾಲೆಗೆ ಪ್ರತಿನಿತ್ಯ ಹಾಜರಾಗುವ ಪ್ರತಿ ಮಗುವಿಗೂ ಒಂದು ರೂಪಾಯಿ ಪ್ರೋತ್ಸಾಹ ಧನ ನೀಡುವ ಮೂಲಕ ಮಕ್ಕಳನ್ನು ಶಾಲೆಯತ್ತ ಆಕರ್ಷಿಸುವ ಪ್ರಯತ್ನ ಮಾಡಲಾಗಿತ್ತು ಎಂದರು.
ಶಿಕ್ಷಣ ಸಚಿವನಾಗಿ ಮೂರು ವರ್ಷಗಳ ಅವಧಿಯಲ್ಲಿ ಶಿಕ್ಷಣ ಕ್ಷೇತ್ರದ ಹಲವು ವಿಚಾರಗಳನ್ನು ತಿಳಿದುಕೊಂಡಿದ್ದೇನೆ. ಎರಡನೇ ಬಾರಿಯೂ ಸಚಿವನಾಗಿ ಸೇವೆ ಸಲ್ಲಿಸುವ ಅವಕಾಶ ದೊರೆತಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೇರೆ ಇಲಾಖೆ ಬೇಕೇ ಎಂದು ದೂರವಾಣಿ ಮೂಲಕ ಕೇಳಿದರೂ, ಯಾವುದೇ ಮರು ಯೋಚನೆ ಮಾಡದೆ ಶಿಕ್ಷಣ ಇಲಾಖೆಯನ್ನೇ ಆಯ್ಕೆ ಮಾಡಿಕೊಂಡಿದ್ದೇನೆ ಎಂದು ಹೇಳಿದರು.
ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಒಂದು ಕೋಟಿಗೂ ಹೆಚ್ಚು ಮಕ್ಕಳು ಇದ್ದಾರೆ. ಮಕ್ಕಳಿಗಾಗಿ ಕೆಲಸ ಮಾಡುವುದು ದೇವರ ಕೆಲಸ ಮಾಡಿದಂತೆ. ಶಿಕ್ಷಣ ಸಚಿವನಾಗಿ ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಶಿಕ್ಷಣ ಸಚಿವರ ಕಾರ್ಯಕ್ಕೆ ಪುಟ್ಟಣ್ಣ ಮೆಚ್ಚುಗೆ
ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಮಾತನಾಡಿ, ಮಧು ಬಂಗಾರಪ್ಪ ಅವರು ಶಿಕ್ಷಣ ಸಚಿವರಾಗಿ ಹಲವು ಮಹತ್ವದ ಬದಲಾವಣೆಗಳನ್ನು ಜಾರಿಗೆ ತಂದಿದ್ದಾರೆ. ರಾಜ್ಯದ ವಿದ್ಯಾರ್ಥಿಗಳ ಫಲಿತಾಂಶದಲ್ಲೂ ಗಣನೀಯ ಸುಧಾರಣೆ ಕಂಡುಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಹಿಂದೆ ಇದ್ದ ಪ್ರಮಾಣಕ್ಕೆ ಹೋಲಿಸಿದರೆ ಅನುತ್ತೀರ್ಣರಾಗುವ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಪಿಯುಸಿ ಫಲಿತಾಂಶದಲ್ಲೂ ಉತ್ತಮ ಪ್ರಗತಿ ಕಂಡುಬಂದಿದೆ. ಶಿಕ್ಷಣ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ಅವರು ಕ್ರಾಂತಿಕಾರಿ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.
ಖಾಸಗಿ ಶಾಲೆಗಳ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದ ನಿಯಮಗಳನ್ನು ಸಡಿಲಿಸುವ ಕುರಿತು ವಿಶೇಷ ಸದನ ಸಮಿತಿ ನೀಡಿರುವ ಮಧ್ಯಂತರ ವರದಿಯ ಶಿಫಾರಸುಗಳನ್ನು ಸರ್ಕಾರದ ಆದೇಶವಾಗಿ ಜಾರಿಗೆ ತರಬೇಕು ಎಂದು ಸಚಿವರಿಗೆ ಪುಟ್ಟಣ್ಣ ಮನವಿ ಮಾಡಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಮಧು ಬಂಗಾರಪ್ಪ, ಸಮಿತಿಯ ಶಿಫಾರಸುಗಳನ್ನು ಇಲಾಖೆಗೆ ಕಳುಹಿಸಿಕೊಡಲಾಗಿದೆ. ಈ ಕುರಿತು ಪರಿಶೀಲಿಸಿ ಆದ್ಯತೆ ಮೇರೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಆನೇಕಲ್ ತಾಲ್ಲೂಕು ಶಾಸಕ ಶಿವಣ್ಣ, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ರಾಮೋಜಿಗೌಡ, ಕಾಮ್ಸ್ ಕಾರ್ಯದರ್ಶಿ ಶಶಿಕುಮಾರ್, ಬೆಂಗಳೂರು ದಕ್ಷಿಣ ಡಿಡಿಪಿಐ ಜಯಪ್ರಕಾಶ್ ಸೇರಿದಂತೆ ಖಾಸಗಿ ಶಾಲೆಗಳ ಒಕ್ಕೂಟದ ಪದಾಧಿಕಾರಿಗಳು, ಶಿಕ್ಷಕರು ಹಾಗೂ ಇತರರು ಉಪಸ್ಥಿತರಿದ್ದರು.







