ನವದೆಹಲಿ, ಜುಲೈ, 22,2026 (www.justkannada.in): ದೇಶದಲ್ಲಿ ಕಳೆದ 10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಆದರೆ ಈವರೆಗೆ ಯಾರೊಬ್ಬರಿಗೂ ಶಿಕ್ಷೆಯಾಗಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ದ ಗುಡುಗಿದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮೂರು ಷರತ್ತುಗಳನ್ನ ವಿಧಿಸಿದ್ದಾರೆ.
ಇಂದು ಮಹತ್ವದ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಯಾರೋ ಒಬ್ಬರು ಅಥವಾ ಜನರ ಗುಂಪು ಭಾರತದ ಅತ್ಯಂತ ಮೌಲ್ಯಯುತ ಆಸ್ತಿಯಾಗಿರುವ ಶಿಕ್ಷಣ ವ್ಯವಸ್ಥೆಯನ್ನು ನಾಶಪಡಿಸುತ್ತಿದೆ. ನಮ್ಮ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳುಮಾಡುತ್ತಿದೆ. ಆದರೆ ಸರ್ಕಾರ ಏನು ಮಾಡುತ್ತಿದೆ? ಯಾರೊಬ್ಬರಿಗೂ ಶಿಕ್ಷೆ ವಿಧಿಸಿಲ್ಲ. ಆದ್ದರಿಂದಲೇ ನಮ್ಮ ಯುವಕರು ಪ್ರತಿಭಟನೆ ನಡೆಸುತ್ತಿದ್ದಾರೆ, ಇದು ಸಂಪೂರ್ಣವಾಗಿ ನ್ಯಾಯಸಮ್ಮತ ಕಾರಣವಾಗಿದೆ ಎಂದಿದ್ದಾರೆ.
ಪ್ರಶ್ನೆಪತ್ರಿಕೆ ಸೋರಿಕೆಯಿಂದ 7.5 ಕೋಟಿ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ. ಅವರೆಲ್ಲರೂ ಮಧ್ಯಮ ವರ್ಗ ಬಡಕುಟುಂಬಗಳಿಂದ ಬಂದವರು. ಮಕ್ಕಳ ವಿದ್ಯಾಭ್ಯಾಸಕ್ಕೆ ಕಷ್ಟಪಟ್ಟು ಸಂಪಾದಿಸಿದ ಹಣ ಖರ್ಚು ಮಾಡುತ್ತಾರೆ. ಮಕ್ಕಳ ಪರಿಶ್ರಮಕ್ಕೆ ಯಾವುದೇ ಬೆಲೆ ಇಲ್ಲ ಎಂಬಂತೆ ನಡೆದುಕೊಳ್ಳುತ್ತಿದೆ ಕೇಂದ್ರ ಶಿಕ್ಷಣ ಸಚಿವರಾಗಿ ಧರ್ಮೇಂದ್ರ ಪ್ರಧಾನ್ ವಿಫಲರಾಗಿದ್ದಾರೆ ಎಂದು ಕಿಡಿಕಾರಿದರು.
ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದವರಿಗೆ ಶಿಕ್ಷೆಯಾಗಬೇಕು. ಪ್ರಧಾನಿ ಮೋದಿ ವಿದ್ಯಾರ್ಥಿಗಳ ಕ್ಷಮೆಯಾಚಿಸಬೇಕು ಎಂದು ರಾಹುಲ್ ಗಾಂಧಿ ಮೂರು ಷರತ್ತುಗಳನ್ನ ಕೇಂದ್ರದ ಮುಂದಿಟ್ಟಿದ್ದಾರೆ.
Key words: 152 question paper, leaks ,10 years, Rahul Gandhi







