ಬೆಂಗಳೂರು,ಜೂನ್,6,2025 (www.justkannada.in): ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಿಂದ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಸದ್ಯಕ್ಕೆ ರಿಲೀಫ್ ಇಲ್ಲದಂತಾಗಿದೆ.
ಚಿನ್ನಸ್ವಾಮಿ ಸ್ಟೇಡಿಯಂ ಆವರಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಆರ್ಸಿಬಿಯ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಬಂಧನ ಪ್ರಶ್ನಿಸಿ ಅವರ ಪತ್ನಿ ಮಾಳವಿಕಾ ನಾಯ್ಕ್ ಸರ್ಕಾರದ ವಿರುದ್ಧವೇ ಹೈಕೋರ್ಟ್ ಮೆಟ್ಟಿಲೇರಿದ್ದರು.
ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಆಧಾರವಾಗಿಸಿ ಮಾಳವಿಕಾ ನಾಯ್ಕ್ ರಿಟ್ ಅರ್ಜಿ ಸಲ್ಲಿಸಿ ಸರ್ಕಾರದ ವೈಫಲ್ಯದಿಂದ ಕಾಲ್ತುಳಿತ ಸಂಭವಿಸಿದೆ. ನನ್ನ ಪತಿ ಯಾವುದೇ ತಪ್ಪು ಮಾಡಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.
ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರು ರಾಜ್ಯದ ವಾದವನ್ನು ಆಲಿಸದೆ ನ್ಯಾಯಾಲಯವು ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಹಾಗೆಯೇ ಅರ್ಜಿ ವಿಚಾರಣೆಯನ್ನ ಜೂನ್ 9ಕ್ಕೆ ಮುಂದೂಡಿದರು.
ಇಂದು ಮುಂಜಾನೆ, ಸೋಸಲೆ ಅವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿ ಪೊಲೀಸರು ವಶಕ್ಕೆ ಪಡೆದಿದ್ದರು.
Key words: No relief, RCB, Nikhil Sosale, High court, hearing, postponed