ಬೆಂಗಳೂರು, ಜೂ.೧೧,೨೦೨೫: ‘ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಯಾಗಿದ್ದ ಗೋವಿಂದರಾಜು ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ. ಗುಪ್ತಚರ ಇಲಾಖೆ ಮುಖ್ಯಸ್ಥ ಹೇಮಂತ್ ನಿಂಬಾಳ್ವರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಆದರೆ, ಇವರ ಪೈಕಿ ಯಾರನ್ನು ಈತನಕ ಏಕೆ ಬಂಧಿಸಿಲ್ಲ’ ಎಂದು ಡಿಎನ್ಎ ಪರ ವಕೀಲರು ನ್ಯಾಯಪೀಠಕ್ಕೆ ಪ್ರಶ್ನಿಸಿದರು.
ಆರ್ಸಿಬಿ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ನಿಖಿಲ್ ಸೋಸಲೆ ಪರ ಅವರ ಪತ್ನಿ ಮಾಳವಿಕಾ ನಾಯಕ್ ಹಾಗೂ ಮೆಸರ್ಸ್ ಡಿಎನ್ಎ ಎಂಟರ್ಟೈಸ್ಕೆಂಟ್ ನೆಟ್ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ನಿರ್ದೇಶಕ ಆರ್.ಸುನಿಲ್ ಮ್ಯಾಥ್ಯ ಪರವಾಗಿ ಅವರ ಪತ್ನಿ ರೋಶನಿ ಸುನಿಲ್, ಎಸ್.ಕಿರಣ್ ಕುಮಾರ್ ಪರವಾಗಿ ಅವರ ಪತ್ನಿ ಕೆ.ನಂದಿನಿ ಮತ್ತು ಎನ್.ಪಿ.ಶಮಂತ್ ಅವರ ತಾಯಿ ನಿರ್ಮಲಾ ಅವರು ಸಲ್ಲಿಸಿರುವ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರ ನಿಖಿಲ್ ಸೋಸಲೆ ಪರ ವಾದ ಮಂಡಿಸಿದ ಪದಾಂಕಿತ ಹಿರಿಯ ವಕೀಲರಾದ ಸಂದೇಶ್ ಜೆ.ಚೌಟ ಮತ್ತು ಸಂಪತ್ ಕುಮಾರ್, ‘ಬಂಧನಕ್ಕೆ ನಿರ್ದೇಶನ ನೀಡುವ ಅಧಿಕಾರ ನ್ಯಾಯಾಲಯಕ್ಕೇ ಇಲ್ಲ. ಹಾಗಿರುವಾಗ, ಬಂಧಿಸಿ ಎಂದು ಆದೇಶ ನೀಡುವ ಅಧಿಕಾರ ಮುಖ್ಯಮಂತ್ರಿಗೆಲ್ಲಿದೆ? ಬಂಧನದ ಅಧಿಕಾರ ಏನಿದ್ದರೂ ತನಿಖಾಧಿಕಾರಿಯ ವಿವೇಚನೆಗೆ ಬಿಟ್ಟಿದ್ದು. ಆದರೆ, ಇಲ್ಲಿ ರಾಜಕೀಯ ಪ್ರಭಾವ ಕೆಲಸ ಮಾಡಿದೆ’ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ‘ಅರ್ಜಿದಾರರ ಆರೋಪಗಳಿಗೆ ವಿಶದವಾಗಿ ಉತ್ತರಿಸಬೇಕಿದೆ. ಇದೇ ಕಾರಣಕ್ಕೆ ಹಂಗಾಮಿ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಇವತ್ತು ನಿಗದಿಯಾಗಿದ್ದ ಸ್ವಯಂಪ್ರೇರಿತ ಪಿಐಎಲ್ ವಿಚಾರಣೆಯನ್ನು ಗುರುವಾರಕ್ಕೆ (ಜೂನ್ 12) ಮುಂದೂಡಲು ಮನವಿ ಮಾಡಲಾಗಿದೆ. ನಮ್ಮ ಅಧಿಕಾರಿಗಳು ಬೆಳಗಿನ ಜಾವದವರೆಗೆ ಕೆಲಸ ಮಾಡಿದ್ದಾರೆ. ಎಲ್ಲವನ್ನೂ ಪೀಠದ ಮುಂದೆ ಮಂಡಿಸಲಾಗುವುದು. ಹೀಗಾಗಿ, ವಿಚಾರಣೆಯನ್ನು ನಾಳೆಗೆ ಮುಂದೂಡಬೇಕು’ ಎಂದು ಕೋರಿದರು.
ಇದನ್ನು ಬಲವಾಗಿ ವಿರೋಧಿಸಿದ ಸಂದೇಶ್ ಜೆ.ಚೌಟ, ‘ಇಲ್ಲಿ ಒಬ್ಬರಿಗೊಬ್ಬರು ಪರಸ್ಪರ ಸಂಘರ್ಷ ನಡೆಸುವ ಅಗತ್ಯವೇನಿದೆ? ಕಾಲ್ತುಳಿತ ಸಂಭವಿಸಬೇಕು ಅಥವಾ ಸಂಭವಿಸಬಹುದು ಎಂದು ಯಾರೂ ನಿರೀಕ್ಷಿಸಿರಲಿಲ್ಲ. ಅಷ್ಟಕ್ಕೂ ವಿಜಯೋತ್ಸವಕ್ಕೆ ಬನ್ನಿ ಎಂದು ಆರ್ಸಿಬಿಯೇ ಸಾರ್ವಜನಿಕರಿಗೆ ಕರೆ ನೀಡಿತ್ತು. ಇಂತಹುದೇ ಕರೆಯನ್ನು ಸರ್ಕಾರವೂ ನೀಡಿತ್ತು. ಆರ್ಸಿಬಿ, ಡಿಎನ್ಎ, ಕೆಎಸ್ಸಿಎ, ಸರ್ಕಾರ ಎಲ್ಲರೂ ಒಂದೇ ನೆಲೆಯಲ್ಲಿ ಇದ್ದಾರೆ’ ಎಂದರು.
ಕೆಲಕಾಲ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಅಂತಿಮವಾಗಿ ರಾಜ್ಯ ಸರ್ಕಾರದ ವಿನಮ್ರ ವಾದವನ್ನು ಪರಿಗಣಿಸಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು.
( ಕೃಪೆ: ಪ್ರಜಾವಾಣಿ)
key words: RCB stamped Case, Govindaraj, Nimbalkar, not arrested, DNA, RCB,
SUMMARY:
“Govindaraju, who was serving as the Political Secretary to the Chief Minister, has been removed from his post. Hemant Nimbalkar, the head of the Intelligence Department, has been transferred. However, the DNA’s counsel questioned the bench, ‘Why has none of them been arrested so far?'”