ಬೆಂಗಳೂರು, ಸೆಪ್ಟೆಂಬರ್ 17 ,2026 (www.justkannada.in): ಪತ್ರಿಕಾರಂಗದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರಿಗೆ ಸಮಾನ ಅವಕಾಶಗಳು ದೊರೆಯಬೇಕು. ಈ ಸಮುದಾಯಗಳಿಗೆ ಬುದ್ಧಿ, ಪ್ರಾವೀಣ್ಯತೆ ಅಥವಾ ವ್ಯಕ್ತಿತ್ವದ ಕೊರತೆಯಿಲ್ಲ. ಐತಿಹಾಸಿಕವಾಗಿ ಅಕ್ಷರ ಸಂಸ್ಕೃತಿ ಮತ್ತು ಶಿಕ್ಷಣದ ಅವಕಾಶಗಳಿಂದ ವಂಚಿತರಾಗಿದ್ದ ಕಾರಣದಿಂದಾಗಿ ಪತ್ರಿಕಾರಂಗದಲ್ಲಿ ಅವರ ಸಂಖ್ಯೆ ಕಡಿಮೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ಇಂದು ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಹೊಂಡು ವಿವಿಧ ಪತ್ರಿಕೆಗಳ ಸಂಪಾದಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಪ್ರತಿವರ್ಷದಂತೆ ಈ ಬಾರಿಯೂ ಬಾಬಾಸಾಹೇಬ್ ಅಂಬೇಡ್ಕರ್, ಬಿ.ರಾಚಯ್ಯ, ಬಸವಲಿಂಗಪ್ಪ ಹಾಗೂ ಕೃಷ್ಣಪ್ಪ ಅವರ ಹೆಸರಿನಲ್ಲಿ ಪ್ರಶಸ್ತಿಗಳನ್ನು ನೀಡಿರುವುದು ಸಂತೋಷದ ವಿಚಾರ. ಪ್ರಶಸ್ತಿ ಪುರಸ್ಕೃತರೆಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಎಸ್ಸಿ, ಎಸ್ಟಿ ಸಮುದಾಯಗಳಿಗೆ ಶಿಕ್ಷಣ, ಉದ್ಯೋಗ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಮೀಸಲಾತಿ ನೀಡಿದ್ದಾರೆ. ಆದರೆ ಪತ್ರಿಕಾರಂಗದಲ್ಲಿ ಮೀಸಲಾತಿ ಇಲ್ಲ. ಹೀಗಾಗಿ ಎಸ್ಸಿ, ಎಸ್ಟಿ, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರು ಪತ್ರಿಕಾರಂಗದಲ್ಲಿ ಕಡಿಮೆ ಸಂಖ್ಯೆಯಲ್ಲಿದ್ದಾರೆ. ಇವರಿಗೆ ಸಮಾನ ಅವಕಾಶಗಳು ದೊರೆತಿದ್ದರೆ ಹೆಚ್ಚಿನ ಸಂಖ್ಯೆಯಲ್ಲಿ ಪತ್ರಕರ್ತರು ರೂಪುಗೊಳ್ಳುತ್ತಿದ್ದರು. ನಾವ್ಯಾರೂ ಯಾರಿಗಿಂತಲೂ ಕಡಿಮೆಯಿಲ್ಲ; ಅವಕಾಶಗಳಿಂದ ವಂಚಿತರಾಗಿದ್ದೇವೆ ಅಷ್ಟೇ ಎಂದರು.
ನಾನು ಪತ್ರಿಕಾರಂಗಕ್ಕೆ ಹೋಗಬೇಕಾಗಿತ್ತು ಎಂಬ ಭಾವನೆ ಈಗ ಮೂಡುತ್ತಿದೆ. ಆದರೆ, ಕಾಲ ಮಿಂಚಿಹೋಗಿದೆ. ಶಿವಕುಮಾರ್ ಅವರು ಇಂಡಿಯನ್ ಎಕ್ಸ್ಪ್ರೆಸ್ನಲ್ಲಿ ಮುಖ್ಯ ವರದಿಗಾರರಾಗಿದ್ದರು. ಇಲ್ಲಿರುವ ಅನೇಕ ಸಂಪಾದಕರು ಹಾಗೂ ಪತ್ರಕರ್ತರು ಯಾರಿಗೂ ಕಡಿಮೆಯಿಲ್ಲ. ಅವರಲ್ಲಿ ಯೋಗ್ಯತೆ ಮತ್ತು ಪ್ರಾಮಾಣಿಕತೆ ಇದೆ. ಸತ್ಯವಾದ ಸುದ್ದಿಗಳನ್ನು ಜನರ ಮುಂದಿಡುವ ಪ್ರಯತ್ನವನ್ನು ಪತ್ರಕರ್ತರು ಮಾಡಬೇಕು ಎಂದು ಹೇಳಿದರು.
ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಎಲ್ಲ ಶಾಲಾ-ಕಾಲೇಜುಗಳಲ್ಲಿ ಓದುವಂತೆ ಕ್ರಮ ಕೈಗೊಂಡಿದ್ದಾಗಿ ತಿಳಿಸಿದ ಅವರು, ಸಂವಿಧಾನದ ವಿರೋಧಿಗಳು ಹಾಗೂ ಪ್ರಜಾಪ್ರಭುತ್ವದ ವಿರೋಧಿಗಳು ಅಧಿಕಾರದಲ್ಲಿದ್ದರೆ ಸಂವಿಧಾನದ ಆಶಯಗಳು ಹೇಗೆ ಈಡೇರುತ್ತವೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದರು. ಸ್ವಾತಂತ್ರ್ಯ ಬಂದು ಸುಮಾರು 80 ವರ್ಷ ಹಾಗೂ ಸಂವಿಧಾನ ಜಾರಿಗೆ ಬಂದು 76 ವರ್ಷಗಳಾಗುತ್ತಿದ್ದರೂ ಸಂವಿಧಾನದ ಎಲ್ಲ ಆಶಯಗಳು ಈಡೇರಿಲ್ಲ ಎಂದು ಹೇಳಿದರು.
ಅಂಬೇಡ್ಕರ್ ಅವರ ಪುಸ್ತಕಗಳನ್ನು ಓದಿ, ಅವರ ಜೀವನ ಮತ್ತು ಹೋರಾಟಗಳನ್ನು ತಿಳಿದುಕೊಂಡಿರುವವರು ಅವರ ಹಾದಿಯಲ್ಲಿ ನಡೆಯುವ ಪ್ರಯತ್ನ ಮಾಡಬೇಕು. 1949ರ ನವೆಂಬರ್ 25ರಂದು ಸಂವಿಧಾನ ಅಂಗೀಕಾರಕ್ಕೂ ಮುನ್ನ ಸಂವಿಧಾನ ಸಭೆಯಲ್ಲಿ ಮಾಡಿದ ಕೊನೆಯ ಭಾಷಣದಲ್ಲಿ ಅಂಬೇಡ್ಕರ್ ಅವರು ಅಸಮಾನತೆ ಮುಂದುವರಿದರೆ, ಅದರ ನೋವನ್ನು ಅನುಭವಿಸುವ ಜನರು ಪ್ರಜಾಪ್ರಭುತ್ವದ ವ್ಯವಸ್ಥೆಯ ವಿರುದ್ಧ ತಿರುಗಿಬೀಳುವ ಸಾಧ್ಯತೆಯ ಬಗ್ಗೆ ಎಚ್ಚರಿಸಿದ್ದರು ಎಂದು ಹೇಳಿದರು.
ಸಂವಿಧಾನವನ್ನು ವಿರೋಧಿಸಿದವರು ಹಾಗೂ ಅಸ್ಪೃಶ್ಯತೆಯನ್ನು ಪ್ರತಿಪಾದಿಸಿದವರೊಂದಿಗೆ ಕೇವಲ ಸ್ವಾರ್ಥಕ್ಕಾಗಿ ಕೈಜೋಡಿಸುವುದು ಸರಿಯಲ್ಲ. ಮನುಸ್ಮೃತಿ ಹಾಗೂ ಮನುವಾದದ ಪರವಾಗಿರುವವರೊಂದಿಗೆ ಸೇರಿಕೊಂಡು ಸಾಮಾಜಿಕ ಬದಲಾವಣೆ ತರಲು ಸಾಧ್ಯವಿಲ್ಲ. ಒಬ್ಬರಿಗೆ ಸ್ಥಾನಮಾನ ಸಿಗಬಹುದು, ಶಾಸಕರಾಗಬಹುದು, ರಾಜ್ಯಸಭಾ ಸದಸ್ಯರಾಗಬಹುದು ಅಥವಾ ಲೋಕಸಭಾ ಸದಸ್ಯರಾಗಬಹುದು. ಆದರೆ ಇದರಿಂದ ಸಮಾಜದಲ್ಲಿ ಮೂಲಭೂತ ಬದಲಾವಣೆ ತರಲು ಸಾಧ್ಯವಾಗುವುದಿಲ್ಲ. ಈ ಕಾರಣದಿಂದಲೇ ಇಷ್ಟು ವರ್ಷಗಳಾದರೂ ಜಾತಿ ವ್ಯವಸ್ಥೆ ಜೀವಂತವಾಗಿದೆ ಎಂದರು.
ತಾವು 2013ರಿಂದ 2018ರವರೆಗೆ ಹಾಗೂ 2023ರಿಂದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಕಾಲ ಸಾಮಾಜಿಕ ಸಮಾನತೆಯ ದಿಕ್ಕಿನಲ್ಲಿ ಪ್ರಯತ್ನಗಳನ್ನು ಮಾಡಿರುವುದಾಗಿ ತಿಳಿಸಿದರು. ಇದರಿಂದ ಸಂಪೂರ್ಣ ಬದಲಾವಣೆ ಆಗಿದೆ ಎಂದು ಹೇಳಲಾಗದು. ಆದರೆ ಆ ದಿಕ್ಕಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಎಸ್ಸಿ, ಎಸ್ಟಿ ಸಮುದಾಯಗಳ ಅಭಿವೃದ್ಧಿಗಾಗಿ ಎಸ್ಸಿಎಸ್ಪಿ/ಟಿಎಸ್ಪಿ ಕಾಯ್ದೆಯನ್ನು ಕೇಂದ್ರ ಸರ್ಕಾರದಲ್ಲೂ ಜಾರಿಗೆ ತರಬೇಕಾಗಿದೆ. ಜನರು ಮತ ನೀಡಿ ಪ್ರತಿನಿಧಿಗಳನ್ನು ಆಯ್ಕೆ ಮಾಡಿದ್ದಾರೆ. ಕೇಂದ್ರದಲ್ಲಿ ಎಸ್ಸಿಎಸ್ಪಿ/ಟಿಎಸ್ಪಿ ಕಾಯ್ದೆ ಏಕೆ ಜಾರಿಯಾಗಿಲ್ಲ ಎಂಬುದನ್ನು ಪ್ರಶ್ನಿಸಬೇಕು. ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಮಾತ್ರ ಇಂತಹ ಕಾಯ್ದೆ ಜಾರಿಯಲ್ಲಿದೆ ಎಂದು ಹೇಳಿದರು.
ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಆಂಜನೇಯ ಅವರು ಸಮಾಜ ಕಲ್ಯಾಣ ಸಚಿವರಾಗಿದ್ದರು. ಎಸ್ಸಿಎಸ್ಪಿ/ಟಿಎಸ್ಪಿ ಕಾಯ್ದೆ ರೂಪಿಸುವಂತೆ ಅವರಿಗೆ ಸೂಚಿಸಿ, ಬೆಳಗಾವಿ ಅಧಿವೇಶನದಲ್ಲಿ ಕಾಯ್ದೆಯನ್ನು ಅಂಗೀಕರಿಸಲಾಯಿತು. ಪ್ರಸ್ತುತ ಕರ್ನಾಟಕದಲ್ಲಿ ಎಸ್ಸಿಎಸ್ಪಿ/ಟಿಎಸ್ಪಿ ಅಡಿಯಲ್ಲಿ ಸುಮಾರು 44 ಸಾವಿರ ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗುತ್ತಿದೆ. ರಾಜ್ಯದ ಬಜೆಟ್ನಲ್ಲಿ ಶೇ.24.1ರಷ್ಟು ಅನುದಾನ ಇರಬೇಕೆಂಬ ನಿಯಮದಂತೆ ಈ ಅನುದಾನ ಮೀಸಲಿಡಲಾಗುತ್ತಿದೆ ಎಂದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮುಂಬಡ್ತಿ ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ ಸಂದರ್ಭದಲ್ಲಿ ರತ್ನಪ್ರಭಾ ಸಮಿತಿಯ ವರದಿ ತರಿಸಿ, ದೇಶದಲ್ಲೇ ಮೊದಲ ಬಾರಿಗೆ ಕಾನೂನು ರೂಪಿಸುವ ಮೂಲಕ ಮುಂಬಡ್ತಿ ಮೀಸಲಾತಿಯನ್ನು ರಕ್ಷಿಸಿದ ರಾಜ್ಯ ಕರ್ನಾಟಕವಾಗಿದೆ ಎಂದು ಹೇಳಿದರು.
ಮಾಜಿ ಸಚಿವ ವೆಂಕಟೇಶ, ಶಾಸಕ ಎ.ಆರ್. ಕೃಷ್ಣಮೂರ್ತಿ, ವಿಧಾನ ಪರಿಷತ್ ಸದಸ್ಯ ಶಿವಕುಮಾರ್, ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೇಷಾ ಖಾನಂ, ಮಾಹಿತಿ ಹಕ್ಕು ಆಯೋಗದ ಆಯುಕ್ತ ಬದ್ರುದ್ದೀನ್, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಉಪಾಧ್ಯಕ್ಷ ಮದನಗೌಡ, ಪ್ರೆಸ್ ಕ್ಲಬ್ ಪ್ರದಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ, ಎಸ್ ಸಿ/ಎಸ್ ಟಿ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷ ಚಲುವರಾಜು ಉಪಸ್ಥಿತರಿದ್ದರು.
Key words: SC, ST, backward classes, and minorities, journalism, Former CM, Siddaramaiah.






