ಸಿದ್ದರಾಮಯ್ಯ ಡ್ಯೂಪ್ಲಿಕೇಟ್ ಸಿಎಂ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು, ನವೆಂಬರ್ 12, 2023 (www.justkannada.in): ಸಿದ್ದರಾಮಯ್ಯ ಡ್ಯೂಪ್ಲಿಕೇಟ್ ಸಿಎಂ. ತೆಲಂಗಾಣದಲ್ಲಿ ಚುನಾವಣೆ ಪ್ರಚಾರ ಹೋಗಿ ನಗೆಪಾಟಲಿಗೀಡಾಗಿದ್ದಾರೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ  ರಾಜ್ಯದ ಜನರಿಗೆ ಗ್ಯಾರಂಟಿ ಹೆಸರಿನಲ್ಲಿ ಕಿವಿಗೆ ಹೂವು ಮುಡಿಸಿದ್ದಾರೆ. ರಾಜ್ಯದಲ್ಲಿ ಡುಪ್ಲಿಕೇಟ್ ಮುಖ್ಯಮಂತ್ರಿ ಇದ್ದಾರೆ ಎಂದು ಕಿಡಿಕಾರಿದ್ದಾರೆ.

ಶಕ್ತಿ ಯೋಜನೆಯಿಂದ ಸಾಕಷ್ಟು ಅವಾಂತರವಾಗಿದೆ. ಸಿಬ್ಬಂದಿ ಕೊರತೆಯಿಂದ ಸರ್ಕಾರದಲ್ಲಿ ಹಲವು ಸಮಸ್ಯೆಗಳು ಉಂಟಾಗಿವೆ. ಆದರೆ ತೆಲಂಗಾಣದಲ್ಲಿ ಹೋಗಿ ಮತದಾರರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.

ತೆಲಂಗಾಣದಲ್ಲಿ 2 ಲಕ್ಷ ಸರ್ಕಾರಿ ಹುದ್ದೆ ಭರ್ತಿ ಮಾಡುವುದಾಗಿ ಹೇಳಿದ್ದಾರೆ. ಆದರೆ ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇವೆ. ಮೊದಲು ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿ ಎಂದು ವಾಗ್ದಾಳಿ ನಡೆಸಿದರು.