ಬೆಂಗಳೂರು,ಜೂನ್,10,2025 (www.justkannada.in): ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್ 4ರಂದು ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ ದುರಂತದ ಪರಿಣಾಮ ಇದೀಗ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕೆಲ ಪಂದ್ಯಗಳನ್ನ ಬಿಸಿಸಿಐ ಬೇರೆಡೆಗೆ ಶಿಫ್ಟ್ ಮಾಡಿದೆ.
ಬೆಂಗಳೂರಿನಲ್ಲಿ ನಡೆಯಬೇಕಿದ್ದ ಭಾರತ ‘ಎ’ ಮತ್ತು ಸೌತ್ ಆಫ್ರಿಕಾ ‘ಎ’ ನಡುವಿನ ಸರಣಿಯನ್ನು ಸ್ಥಳಾಂತರಿಸಲಾಗಿದೆ. ನವೆಂಬರ್ 13 ರಿಂದ 19 ರವರೆಗೆ ಇಲ್ಲಿ ನಡೆಯಲಿರುವ ಭಾರತ ‘ಎ’ ಮತ್ತು ಸೌತ್ ಆಫ್ರಿಕಾ ‘ಎ’ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಬೆಂಗಳೂರಿನ ಬದಲು ರಾಜ್ ಕೋಟ್ನಲ್ಲಿ ಆಯೋಜಿಸಲಾಗುತ್ತಿದೆ.
ಈ ಕುರಿತು ಬಿಸಿಸಿಐ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು, ಬೆಂಗಳೂರಿನಲ್ಲಿ ನಡೆಯಬೇಕಿದ್ದ ಪಂದ್ಯಗಳನ್ನು ರಾಜ್ಕೋಟ್ ಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದೆ. ಇದಕ್ಕೆ ಯಾವುದೇ ಕಾರಣಗಳನ್ನು ಪ್ರಸ್ತಾಪಿಸದೇ ಇದ್ದರೂ, ಇತ್ತೀಚೆಗೆ ನಡೆದ ಕಾಲ್ತುಳಿತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಈ ಕ್ರಮ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ.
ಹಾಗೆಯೇ ಬೆಂಗಳೂರಿನಲ್ಲಿ ನಡೆಯಬೇಕಿರುವ ಮಹಿಳಾ ಏಕದಿನ ವಿಶ್ವಕಪ್ ಪಂದ್ಯಗಳು ಕೂಡ ಸಹ ಬೇರೆಡೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಸೆಪ್ಟೆಂಬರ್ 30 ರಿಂದ ಆರಂಭವಾಗಲಿರುವ ಮಹಿಳಾ ಒಡಿಐ ವಿಶ್ವಕಪ್ ನ ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಇದೀಗ ಕಾಲ್ತುಳಿತದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ, ಮಹಿಳಾ ಏಕದಿನ ವಿಶ್ವಕಪ್ನ ಉದ್ಘಾಟನಾ ಪಂದ್ಯವನ್ನು ಬೇರೆಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
Key words: stampede case, Matches, scheduled, Bengaluru, shifted