ಜನರ ನಡುವೆ ಗಟ್ಟಿಯಾಗಿ ನಿಂತು ಸಮರ್ಥವಾಗಿ ಚುನಾವಣೆ ಎದುರಿಸಿ ಗೆದ್ದು ಬನ್ನಿ- ಅಭ್ಯರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕರೆ

ಬೆಂಗಳೂರು,ಮಾರ್ಚ್,22,2024(www.justkannada.in): ಲೋಕಸಭೆ ಚುನಾವಣೆಯಲ್ಲಿ ನಾವು ರಾಜ್ಯದಲ್ಲಿ 20 ಸ್ಥಾನಗಳನ್ನು ಗೆಲ್ಲುತ್ತೇವೆ. ಜನರ ನಡುವೆ ಗಟ್ಟಿಯಾಗಿ ನಿಂತು ಸಮರ್ಥವಾಗಿ ಚುನಾವಣೆ ಎದುರಿಸಿ ಗೆದ್ದು ಬನ್ನಿಎಂದು  ಅಭ್ಯರ್ಥಿಗಳಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್  ನೇತೃತ್ವದಲ್ಲಿ  ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಯಿತು.  ಲೋಕಸಭಾ ಚುನಾವಣೆ ಸಂಬಂಧದ ಸಿದ್ದತೆಗಳನ್ನು ತೀವ್ರಗೊಳಿಸುವ ಸಂಬಂಧ ಸಚಿವರು, ಹಿರಿಯ ಶಾಸಕರು ಮತ್ತು ಸಂಭಾವ್ಯ ಅಭ್ಯರ್ಥಿಗಳ ಜೊತೆ ಸಭೆ ನಡೆಸಿ ಚರ್ಚಿಸಿದರು.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿಧಾನಸಭೆ ಚುನಾವಣೆಯಲ್ಲಿ 136 ಸ್ಥಾನ ಗೆಲ್ಲುತ್ತೀವಿ ಎಂದು ಯಾರೂ ಹೇಳಿರಲಿಲ್ಲ. ಲೋಕಸಭೆಯಲ್ಲೂ ನಮಗೆ 20 ಸ್ಥಾನದವರೆಗೂ ಖಚಿತವಾಗಿ ಗೆಲ್ಲುವ ಅವಕಾಶಗಳಿವೆ. ನಮ್ಮ ಗ್ಯಾರಂಟಿಗಳ ಬಗ್ಗೆ ನಾಡಿನ ಜನತೆಗೆ, ನಮ್ಮ ಹೆಣ್ಣು ಮಕ್ಕಳಿಗೆ, ತಾಯಂದರಿಗೆ ಧನ್ಯತೆ ಇದೆ. ಇವರ್ಯಾರೂ ನಮ್ಮ ಕೈ ಬಿಡಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಮಾತ್ರವಲ್ಲ, ದೇಶದ ನಾನಾ ಕಡೆಗಳಲ್ಲಿ ಬಿಜೆಪಿ ವಿರುದ್ಧವಾದ ಅಲೆ ತೀವ್ರವಾಗಿದೆ. ದೇಶದ ಭವಿಷ್ಯಕ್ಕೆ ಈ ಸರ್ಕಾರ ಬದಲಾಗಲೇಬೇಕಿದೆ ಎನ್ನುವ ಅಭಿಪ್ರಾಯ ವಿದ್ಯಾವಂತ ಸಮುದಾಯದಲ್ಲಿದೆ.  ಹೀಗಾಗಿ ನಾವು 20 ಸ್ಥಾನ ಗೆಲ್ಲಬಹುದು.  ಅಂಡರ್ ಕರೆಂಟ್ ಏನಿದೆ ಎನ್ನುವುದು ನಮಗೆ ಗೊತ್ತಾಗಿದೆ. ನಮ್ಮ ಗ್ಯಾರಂಟಿಗಳ ಬಗ್ಗೆ ನಾಡಿನ ಜನತೆಗೆ, ನಮ್ಮ ಹೆಣ್ಣು ಮಕ್ಕಳಿಗೆ, ತಾಯಂದರಿಗೆ ಧನ್ಯತೆ ಇದೆ. ಇವರ್ಯಾರೂ ನಮ್ಮ ಕೈ ಬಿಡಲ್ಲ. ಪ್ರತೀ ದಿನ ಪ್ರತೀ ತಿಂಗಳು ನಾಡಿನ ಮನೆ ಮನೆಗೆ ಸರ್ಕಾರದ ಗ್ಯಾರಂಟಿಗಳ ಫಲ ಹೆಣ್ಣು ಮಕ್ಕಳ ಮಡಿಲು ಸೇರುತ್ತಿದೆ. ಈ ಧನ್ಯತೆ ನಮ್ಮ ನಾಡಿನ ತಾಯಂದಿರು ಮತ್ತು ಹೆಣ್ಣು ಮಕ್ಕಳ ಹೃದಯದಲ್ಲಿದೆ.  ಇವರಿಗೆ ಕೈ ಮುಗಿದು ಮತ ಕೇಳಿ ಎಂದು ಸಂಭಾವ್ಯ ಅಭ್ಯರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದರು

ರಾಜ್ಯದ ತೆರಿಗೆ ದುಡ್ಡು ಪಡೆದು ರಾಜ್ಯಕ್ಕೆ ಯಾವ ಪ್ರಮಾಣದಲ್ಲಿ ಕೇಂದ್ರ ವಂಚಿಸಿದೆ ಎನ್ನುವ ನೋವು ನಮ್ಮ ನಾಡಿನ ಜನರಿಗೆ ಇದೆ.  ಕೇಂದ್ರದ ಭೀಕರ ಅನ್ಯಾಯದ ನಡುವೆಯೂ ರಾಜ್ಯ ಆರ್ಥಿಕವಾಗಿ ಪ್ರಗತಿ ಮಾಡಿರುವುದು, ಸಾಧನೆ ಆಗಿರುವುದರ ಬಗ್ಗೆ ನೇರ ಮತ್ತು ಪರೋಕ್ಷ ತೆರಿಗೆದಾರರೆಲ್ಲರನ್ನೂ ಮಾತಾಡಿಸಿ ಮನವರಿಕೆ ಮಾಡಿ ಎಂದು  ಅಭ್ಯರ್ಥಿಗಳಿಗೆ  ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಪ್ರತಿ ಮತದಾರರ ಮನೆ ಮತ್ತು ಮನಸ್ಸು ತಲುಪಲು ಪ್ಲಾನ್ ಮಾಡಿ. ಕೇಂದ್ರ ಸರ್ಕಾರದ ಸುಳ್ಳು, ಜನರನ್ನು ಭಾವನಾತ್ಮಕವಾಗಿ ಕೆರಳಿಸಿ ಅವರ ಬದುಕಿಗೆ ವಂಚಿಸುವ ಬಿಜೆಪಿ ಷಡ್ಯಂತ್ರವನ್ನು ಜನರಿಗೆ ಸಮಾಧಾನದಿಂದ ಮನವರಿಕೆ ಮಾಡಿಸಿ ದೇಶದ ಪ್ರಜಾತಂತ್ರ ಉಳಿವಿಗೆ-ಭವಿಷ್ಯದ ಭಾರತಕ್ಕಾಗಿ ಜನ ಮೋದಿ ಸರ್ಕಾರವನ್ನು ಬದಲಾಯಿಸುತ್ತಾರೆ. ನಾವು-ನೀವು ಗಟ್ಟಿಯಾಗಿ ಜನರ ನಡುವೆ ನಿಲ್ಲೋಣ. ಕಾರ್ಯಕರ್ತರನ್ನು, ಸ್ಥಳೀಯ ಮುಖಂಡರನ್ನು ಮಾತಾಡಿಸಿ, ಪ್ರತಿಯೊಬ್ಬರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ. ಪ್ರತಿಷ್ಠೆ ಬೇಡ . ಎಲ್ಲಾ ರೀತಿಯ ಅಧಿಕಾರ ದುರುಪಯೋಗ ಮಾಡಿ ನಮಗೆ ತೊಂದರೆ ಕೊಡುತ್ತಾರೆ. ನಾವು ಎದೆಗಾರಿಕೆಯಿಂದ ಎದುರಿಸಿ ಜನರಿಂದ ಶಕ್ತಿ ಪಡೆದುಕೊಳ್ಳಬೇಕು  ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ವೈಜ್ಞಾನಿಕವಾಗಿ ಪ್ರಚಾರ ಮಾಡಿ ಅರ್ಥಪೂರ್ಣ ವಾಗಿ ಚುನಾವಣೆ ನಡೆಸೋಣ ಎಂದು ಸಿಎಂ ಸಿದ್ದರಾಮಯ್ಯ ಕಿವಿಮಾತು ಹೇಳಿದರು.

ಸಭೆಯಲ್ಲಿ, ಸಂಭಾವ್ಯ ಅಭ್ಯರ್ಥಿಗಳಾದ ಬಾಗಲಕೋಟೆ ಸಂಯುಕ್ತ ಪಾಟೀಲ್, ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಮನ್ಸೂರ್ ಅಲಿ ಖಾನ್, ಧಾರವಾಡ ಕ್ಷೇತ್ರದ  ಅಭ್ಯರ್ಥಿ ವಿನೋದ್ ಹಸೂಟಿ, ಚಿತ್ರದುರ್ಗದ ಚಂದ್ರಪ್ಪ, ಉಡುಪಿ ಜಯಪ್ರಕಾಶ್ ಹೆಗ್ಡೆ, ತುಮಕೂರು ಮುದ್ದಹನುಮೇಗೌಡ, ದಕ್ಷಿಣ ಕನ್ನಡ ಪದ್ಮರಾಜ್, ಬಳ್ಳಾರಿಯ ಹಿರಿಯ ಶಾಸಕರಾದ ಈ.ತುಕಾರಾಂ, ರಾಯಚೂರು ಕುಮಾರನಾಯ್ಕ್, ಬೆಂಗಳೂರು ದಕ್ಷಿಣದ ಸೌಮ್ಯ ರೆಡ್ಡಿ, ಉತ್ತರ ಕನ್ನಡ ಅಂಜಲಿ ನಿಂಬಾಳ್ಕರ್,  ಮಂಡ್ಯ ವೆಂಕಟರಮಣೇಗೌಡ, ಮೈಸೂರು ಲಕ್ಷ್ಮಣ್ ,ಬೆಂಗಳೂರು ಉತ್ತರದ ರಾಜೀವ್ ಗೌಡ, ಬೀದರ್ ಸಾಗರ್ ಖಂಡ್ರೆ, ಮೃಣಾಳ್ ಹೆಬ್ಬಾಳ್ಕರ್ ಸೇರಿ ಹಲವರು ಉಪಸ್ಥಿತರಿದ್ದರು.

ಹಾಗೆಯೇ ಸಚಿವರಾದ ಹೆಚ್.ಸಿ.ಮಹದೇವಪ್ಪ, ಸಂತೋಷ್ ಎಸ್ ಲಾಡ್,  ತಿಮ್ಮಾಪುರ, ಜಮೀರ್ ಅಹಮದ್ ಖಾನ್, ಎಂ.ಸಿ.ಸುಧಾಕರ್, ಶರಣಪ್ರಕಾಶ್ ಪಾಟೀಲ್, ಹೆಚ್.ಕೆ.ಪಾಟೀಲ್, ಕೆ.ಎನ್.ರಾಜಣ್ಣ, ಕೆ.ವೆಂಕಟೇಶ್,  ರಾಮಲಿಂಗಾರೆಡ್ಡಿ, ಬೈರತಿ ಸುರೇಶ್, ಪ್ರಿಯಾಂಕ್ ಖರ್ಗೆ, ಮಧು ಬಂಗಾರಪ್ಪ, ಲಕ್ಷ್ಮೀ ಹೆಬ್ಬಾಳ್ಕರ್, ಈಶ್ವರ್ ಖಂಡ್ರೆ, ಶಿವಾನಂದ ಪಾಟೀಲ್, ಡಿ.ಸುಧಾಕರ್, ರಹೀಂ ಖಾನ್, ಮಂಕಾಳ ವೈದ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ರಾಯರೆಡ್ಡಿ, ಪಕ್ಷದ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಶಾಸಕರಾದ ಶಿವಲಿಂಗೇಗೌಡರು, ಚನ್ನರಾಜು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Key words: Stand -strong – people – fight – election effectively -win – CM- Siddaramaiah-candidates