ಅನರ್ಹ ಶಾಸಕರಿಗೆ ತಾತ್ಕಾಲಿಕ ರಿಲೀಫ್: 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂಕೋರ್ಟ್ ನಿಂದ ತಡೆಯಾಜ್ಞೆ….

ನವದೆಹಲಿ,ಸೆ,26,2019(www.justkannada.in):  ರಾಜ್ಯದ 15 ಅನರ್ಹ ಶಾಸಕರ ಕ್ಷೇತ್ರಗಳಿಗೆ ಅಕ್ಟೋಬರ್ 21 ರಂದು ನಡೆಯಬೇಕಿದ್ದ ಉಪಚುನಾವಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಸ್ಪೀಕರ್ ನೀಡಿದ್ದ ಆದೇಶವನ್ನ ಪ್ರಶ್ನಿಸಿ 17 ಮಂದಿ ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿ ಎನ್.ವಿ ರಮಣ ಅವರ ನೇತೃತ್ವದ ತ್ರಿಸದಸ್ಯಪೀಠದಲ್ಲಿ ನಡೆಯಿತು.  ಕಳೆದ ಮೂರ್ನಾಲ್ಕು ದಿನಗಳಿಂದ ವಾದ ಪ್ರತಿವಾದ ನಡೆಯಿತು.

ಅನರ್ಹ ಶಾಸಕರ ಪರ ವಾದ ಮಂಡಿಸಿದ್ದ ವಕೀಲ ಮುಕುಲ್ ರೋಹ್ಟಗಿ,  ಉಪಚುನಾವಣೆಗೆ ತಡೆ ನೀಡಿ ಇಲ್ಲದಿದ್ದರೇ ಅನರ್ಹ ಶಾಸಕರಿಗೆ ಸ್ಪರ್ಧಿಸಲು ಅವಕಾಶ ನೀಡಿ ಎಂದು ಸುಪ್ರೀಂಕೋರ್ಟ್ ಗೆ ಮನವಿ ಮಾಡಿದ್ದರು. ಹಾಗೆಯೇ ಇಂದು ಕಾಂಗ್ರೆಸ್ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, ಸ್ಪೀಕರ್ ಆದೇಶ ಎತ್ತಿ ಹಿಡಿಯಿರಿ. ಯಾವುದೇ ಮಧ್ಯಂತರ ಆದೇಶ ಬೇಡ ಎಂದು ವಾದ ಮಂಡಿಸಿದರು.

ವಾದ ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ನ ತ್ರಿಸದಸ್ಯ ಪೀಠ 15 ಕ್ಷೇತ್ರಗಳ ಉಪಚುನಾವಣೆಗೆ ತಡೆಯಾಜ್ಞೆ ನೀಡಿ ವಿಚಾರಣೆಯನ್ನ ಅಕ್ಟೋಬರ್ 22ಕ್ಕೆ ಮುಂದೂಡಿದೆ. ಹಾಗೆಯೇ ಅನುಮತಿ ನೀಡುವವರೆಗೆ ಚುನಾವಣೆ ನಡೆಸುವಂತಿಲ್ಲ ಎಂದು ತಿಳಿಸಿದೆ. 17 ಮಂದಿ ಅನರ್ಹ ಶಾಸಕರ ಅನರ್ಹತೆ ಮುಂದುವರೆಯಲಿದೆ.

Key words: Supreme Court –stay- 15 assembly constituencies-by-election