Friday, August 14, 2026

BDA Apartments

Home Front Page ತಿಹಾರ್ ಜೈಲಿಗೆ ಹೋಗಿ ಬಂದಿರುವವರ ಪ್ರಶ್ನೆಗೆ ಉತ್ತರಿಸುವ ಅಗತ್ಯವಿಲ್ಲ- ಡಿಕೆ ಶಿವಕುಮಾರ್ ಗೆ ಕೆ.ಎಸ್ ಈಶ್ವರಪ್ಪ...

ತಿಹಾರ್ ಜೈಲಿಗೆ ಹೋಗಿ ಬಂದಿರುವವರ ಪ್ರಶ್ನೆಗೆ ಉತ್ತರಿಸುವ ಅಗತ್ಯವಿಲ್ಲ- ಡಿಕೆ ಶಿವಕುಮಾರ್ ಗೆ ಕೆ.ಎಸ್ ಈಶ್ವರಪ್ಪ ಟಾಂಗ್.

ಮೈಸೂರು,ಮಾರ್ಚ್,3,2023(www.justkannada.in): ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದ ವೇಳೆ ಕೋಟ್ಯಾಂತರ ರೂಪಾಯಿ ಪತ್ತೆಯಾಗಿರುವ ವಿಚಾರ‌ಕ್ಕೆ ಸಂಬಂಧಿಸಿದಂತೆ  ನೈತಿಕ ಹೊಣೆ ಹೊತ್ತು ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗೆ ಶಾಸಕ  ಕೆ ಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಡಿ ಕೆ ಶಿವಕುಮಾರ್ ತಿಹಾರ್ ಜೈಲಿಗೆ ಹೋಗಿ ಬಂದಿದ್ದಾರೆ. ತಿಹಾರ್ ಜೈಲಿಗೆ ಹೋಗಿ ಬಂದಿರುವವರ ಪ್ರಶ್ನೆಗೆ ಉತ್ತರಿಸುವ ಅಗತ್ಯವಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ  ಟಾಂಗ್ ನೀಡಿದರು.

ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಹಿರಿಯ ನಾಯಕರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಡಿ ವಿ ಸದಾಂನಂದಗೌಡ, ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಶಾಸಕ ಕೆ.ಎಸ್ ಈಶ್ವರಪ್ಪ, ಬಿಜೆಪಿ ಸರ್ಕಾರ ನುಡಿದಂತೆ ನಡೆದಿದೆ. ಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದೇವೆ. ಹಲವು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಎಸ್ ಸಿ, ಎಸ್ ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಿದ್ದೇವೆ. ಹಿಂದುಳಿದ ವರ್ಗ ಹಾಗು ದಲಿತ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದೇವೆ. ಪರಿಣಾಮ ಬಿಜೆಪಿ ನಡೆಸುತ್ತಿರುವ ವಿಜಯ ಸಂಕಲ್ಪ ಯಾತ್ರೆಗೆ ನಿರೀಕ್ಷೆಗೂ ಮೀರಿದ ಜನ ಬೆಂಬಲ ವ್ಯಕ್ತವಾಗುತ್ತಿದೆ. ರಾಜ್ಯದ ಜನರು ನಮ್ಮ ಜೊತೆ ಇರುವುದು ಸ್ಪಷ್ಟವಾಗುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದರು.

ಕಾಂಗ್ರೆಸ್ ನವರು ಹಣ ಕೊಟ್ಟು ಜನರನ್ನು ಕರೆಸುವುದು ಅಭ್ಯಾಸವಾಗಿದೆ. ಹಾಗಾಗಿ ಬಿಜೆಪಿಯವರು ಹಣ ಕೊಟ್ಟು ಜನರನ್ನು ಕರೆಸುತ್ತಿದ್ದಾರೆಂದು ಹೇಳುತ್ತಿದ್ದಾರೆ. ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಸಿಗುತ್ತಿರುವ ಅಪಾರ ಬೆಂಬಲದಿಂದ ವಿಚಲಿತರಾಗಿರುವ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ‌. 500 ರೂಪಾಯಿ ಕೊಟ್ಟು ಜನರನ್ನು ಸಭೆಗೆ ಕರೆ ತರುವಂತೆ ಸಿದ್ದರಾಮಯ್ಯ ಹೇಳಿರುವುದನ್ನು ಇಡೀ ದೇಶದ ಜನರು ನೋಡಿದ್ದಾರೆ. ಅವರ ಮೇಲೆ ಬಂದಿರುವ ತಪ್ಪನ್ನು ಮರೆಮಾಚಲು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಕಿಡಿಕಾರಿದರು.

ನರೇಂದ್ರ ಮೋದಿ, ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ನೇತೃತ್ವ, ಸಂಘಟನೆ ಹಾಗೂ ನಾವು ಮಾಡಿರುವ ಅಭಿವೃದ್ಧಿ, ಸಂಸ್ಕೃತಿ ಆಧಾರದ ಮೇಲೆ ಮತ ಕೇಳುತ್ತಿದ್ದೇವೆ. ನಾಲ್ಕು ಅಂಶದ ಮೇಲೆ ಮತ ಕೇಳುತ್ತಿದ್ದೇವೆ ಎಂದು ಹೇಳಿದರು.

Key words:  Tihar Jail – KS Eshwarappa -Tong -DK Shivakumar.