ವಿಶಾಖಪಟ್ಟಣ (ಆಂಧ್ರಪ್ರದೇಶ) 9 ಜೂನ್ 2026 (www.justkannada.in): ಇಲ್ಲಿನ ವಿಶಾಖ ಉಕ್ಕು ಕಾರ್ಖಾನೆಯಲ್ಲಿ ಸಂಭವಿಸಿದ ಅವಘಡದಲ್ಲಿ ಹಲವು ಕಾರ್ಮಿಕರು ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿ ಬಂದ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ವಿಸ್ತೃತವಾಗಿ ಪರಿಶೀಲನೆ ನಡೆಸಿದರು.
ಸೋಮವಾರ ಸಂಜೆ ಘಟನೆಯ ಮಾಹಿತಿ ಸಿಗುತ್ತಿದ್ದಂತೆಯೇ ಇಲ್ಲಿಗೆ ಬಂದ ಕೇಂದ್ರ ಸಚಿವ ಹೆಚ್.ಡಿಕೆ, ಇಡೀ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ಬರುವಂತೆ ಮಾಡಿ ಇಂದು ಬೆಳಗಿನ ಜಾವ ಬೆಂಗಳೂರಿಗೆ ವಾಪಸ್ ಬಂದರು. ಬೆಂಗಳೂರಿನಿಂದ ವಿಶಾಖಪಟ್ಟಣಕ್ಕೆ ಧಾವಿಸಿದ ಸಚಿವರು, ವಿಮಾನ ನಿಲ್ದಾಣದಿಂದ ನೇರವಾಗಿ ದುರ್ಘಟನೆ ಸಂಭವಿಸಿದ ಸ್ಥಳಕ್ಕೆ ತೆರಳಿದರು.
ಉಕ್ಕು ಕರಗಿಸುವ ಘಟಕದಲ್ಲಿನ ಉಷ್ಣ ನಿರೋಧಕ ದ್ರವರೂಪದ ಕೊಳಗದಿಂದ ದ್ರವರೂಪದ ಲೋಹ ಸೋರಿಕೆಯಾದ ಹಿನ್ನೆಲೆಯಲ್ಲಿ ಸ್ಪೋಟ ಸಂಭವಿಸಿ ದುರಂತ ಘಟಿಸಿರಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದು, ಈ ಬಗ್ಗೆ ಸಚಿವ ಕುಮಾರಸ್ವಾಮಿ ಅವರಿಗೆ ವಿವರಣೆ ನೀಡಿದರು. ದುರಂತ ನಡೆದ ಸ್ಥಳವನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಿದ ಕೇಂದ್ರದ ಉಕ್ಕು ಸಚಿವರು; ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದರು.
ಅಲ್ಲದೆ, ದುರಂತದಲ್ಲಿ ಸಾವನ್ನಪ್ಪಿದ ಕಾರ್ಮಿಕರ ಬಗ್ಗೆ ಹಾಗೂ ದುರಂತಕ್ಕೆ ಕಾರಣವಾದ ಅಂಶಗಳ ಬಗ್ಗೆ ತಕ್ಷಣವೇ ವರದಿ ನೀಡುವಂತೆ ಕಾರ್ಖಾನೆಯ ಆಡಳಿತ ಮಂಡಳಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಸೂಚನೆ ನೀಡಿದರು.
ತಲಾ ₹25 ಲಕ್ಷ ಪರಿಹಾರ ಪ್ಯಾಕೇಜ್ ಘೋಷಿಸಿದ ಹೆಚ್ಡಿಕೆ:
ದುರಂತದಲ್ಲಿ ಮೃತಪಟ್ಟ ಕುಟುಂಬ ಸದಸ್ಯರಲ್ಲಿ ಒಬ್ಬರಿಗೆ ಉದ್ಯೋಗ ಮತ್ತು ಅವರಿಗೆ ದೊರೆಯುವ ಪ್ರಯೋಜನಗಳ ಜತೆಗೆ 25 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು. ತೀವ್ರವಾಗಿ ಗಾಯಗೊಂಡ ಕಾರ್ಮಿಕರಿಗೆ 10 ಲಕ್ಷ ರೂ. ಪರಿಹಾರ ನೀಡಲಾಗುವುದು. ಅಲ್ಲದೆ ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ಸಂಪೂರ್ಣವಾಗಿ ಕಾರ್ಖಾನೆಗೆ ಭರಿಸಲಿದೆ ಎಂದು ಸಚಿವರು ಘೋಷಿಸಿದರು.
ಜತೆಗೆ, ಮೃತರ ಕುಟುಂಬ ಸದಸ್ಯರು ಮೃತರ ನಿವೃತ್ತಿಯ ದಿನಾಂಕದವರೆಗೆ ಸ್ಟೀಲ್ ಪ್ಲಾಂಟ್ ಟೌನ್ ಶಿಪ್ನಲ್ಲಿ ತಮ್ಮ ವಸತಿ ಗೃಹಗಳಲ್ಲಿ ವಾಸಿಸಲು ಅನುಮತಿಸಲಾಗಿದೆ. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲಾಗಿದೆ. ಹಾಗೆಯೇ, ಮೃತ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸದ ವೆಚ್ಚವನ್ನು ಕಾರ್ಖಾನೆ ಭರಿಸಲಿದೆ ಎಂದು ಸಚಿವರು ಹೇಳಿದರು.
ಮೃತ ಕಾಯಂ ಕಾರ್ಮಿಕರಿಗೆ ಯಾವ ರೀತಿಯ ಪರಿಹಾರ ದೊರೆಯುತ್ತದೆಯೋ ಗುತ್ತಿಗೆ ಕಾರ್ಮಿಕರಿಗೂ ಅಷ್ಟೇ ಪ್ರಮಾಣದ ಪರಿಹಾರ ಮೊತ್ತ ನೀಡಲಾಗುವುದು ಎಂದು ಸಚಿವರು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು.
ರಾತ್ರಿ ಆಸ್ಪತ್ರೆಯಲ್ಲೇ ಇದ್ದ ಕೇಂದ್ರ ಸಚಿವರು
ದುರ್ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಬೆಂಗಳೂರಿನಿಂದ ವಿಶಾಖ ಕಾರ್ಖಾನೆಗೆ ಧಾವಿಸಿಬಂದ ಸಚಿವರು, ದುರ್ಘಟನಾ ಸ್ಥಳ ಪರಿಶೀಲಿಸಿದ ನಂತರ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.ನಂತರ ಮೃತ ಕಾರ್ಮಿಕರ ಕುಟುಂಬಗಳ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿಕೆ, ಸುರಕ್ಷಣೆ ಬಗ್ಗೆ ಸಂಸ್ಥೆಯು ಕಠಿಣ ವ್ಯವಸ್ಥೆಯನ್ನು ಹೊಂದಿದೆ. ಆದರೂ ಆದರೂ ಈ ದುರ್ಘಟನೆ ಸಂಭವಿಸಿದೆ. ಭವಿಷ್ಯದಲ್ಲಿ ಇಂತಹ ದುರಂತಗಳು ಮರುಕಳಿಸಿದಂತೆ ಕಠಿಣ ಕ್ರಮ ವಹಿಸಲಾಗುವುದು. ಎಲ್ಲಾ ರೀತಿಯಲ್ಲೂ ಆ ಅಮೂಲಾಗ್ರವಾಗಿ ದುರಂತದ ಬಗ್ಗೆ ತನಿಖೆ ನಡೆಸಿನ ಕ್ರಮ ವಹಿಸಲಾಗುವುದು. ದುರಂತದ ಸ್ವತಂತ್ರ ತನಿಖೆಗೆ ಆದೇಶ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ₹25 ಲಕ್ಷ ಹಾಗೂ ಗಾಯಾಳುಗಳಿಗೆ ₹10 ಲಕ್ಷ ಪರಿಹಾರ ಘೋಷಿಸಲಾಗಿದೆ. ಅಲ್ಲದೆ, ಮೃತ ಕಾರ್ಮಿಕರ ಪ್ರತಿ ಕುಟುಂಬ ಅರ್ಹ ಸದಸ್ಯರಿಗೆ ಕಾರ್ಖಾನೆಯಲ್ಲಿ ಉದ್ಯೋಗವನ್ನೂ ಸಹ ನೀಡಲಾಗುವುದು. ಗಾಯಗೊಂಡವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಕಾರ್ಖಾನೆ ಭರಿಸುತ್ತದೆ. ಮೃತ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಸರ್ವ ನೆರವನ್ನು ನೀಡಲಾಗುವುದು. ಈ ದುರ್ಘಟನೆ ಬಗ್ಗೆ ನನಗೆ ತೀವ್ರ ಆಘಾತ ಉಂಟಾಗಿದೆ. ದುರಂತದ ಕಾರಣವನ್ನು ಪತ್ತೆ ಹಚ್ಚಲು ಸ್ವತಂತ್ರ ತನಿಖೆಗೆ ಆದೇಶಿಸಲಾಗಿದೆ ಎಂದರು.
ಆಂಧ್ರ ಪ್ರದೇಶದ ಗೃಹ ಸಚಿವೆ ವಂಗಲಪುಡಿ ಅನಿತಾ, ಕೇಂದ್ರ ಸಚಿವ ರಾಮಮೋಹನ್ ನಾಯ್ಡು, ವಿಶಾಖಪಟ್ಟಣದ ಸಂಸದ ಶ್ರೀಭರತ್, ಸ್ಥಳೀಯ ಜನಪ್ರತಿನಿಧಿಗಳು, ಕಂಪನಿಯ ಉನ್ನತ ಅಧಿಕಾರಿಗಳು ನನ್ನ ಜೊತೆಯಲ್ಲಿ ಇದ್ದರು.
Key words: Visakhapatnam, steel factory, Tragedy, Union Minister, HDK






