Friday, July 31, 2026

BDA Apartments

Home Front Page ನಾಳೆ ನಾಗಮಂಗಲಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿ

ನಾಳೆ ನಾಗಮಂಗಲಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿ

ನವದೆಹಲಿ,ಸೆಪ್ಟಂಬರ್,12,2024 (www.justkannada.in):  ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಗಲಭೆ ಸಂಬಂಧ ನಾಳೆ ನಾಗಮಂಗಲಕ್ಕೆ ಭೇಟಿ ನೀಡಿ ಮಾಹಿತಿ ಪಡೆಯುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ನಾನು ಸಿಎಂ ಆಗಿದ್ದಾಗ ಕೋಮು ಸಂಘರ್ಷಕ್ಕೆ ಎಡೆಮಾಡಿಕೊಟ್ಟಿಲ್ಲ. ಈ ಹಿಂದೆ ನಾನು ಹೇಗೆ ಆಡಳಿತ ನಡೆಸಿದ್ದೇನೆಂಬುದು ಕಡತದಲ್ಲೇ ಇದೆ. ಪ್ರಮುಖ ಆರೋಪಿ ಈಗಾಗಲೇ ಪರಾರಿಯಾಗಿರುತ್ತಾನೆ. ಜೀವನಕ್ಕೆ ಆಧಾರವಾಗಿದ್ದವರನ್ನು ಬಂಧಿಸಿ ಜೈಲಿನಲ್ಲಿ ಇಟ್ಟಿದ್ದಾರೆ. ನಾಳೆ ನಾಗಮಂಗಲಕ್ಕೆ ಭೇಟಿ ನೀಡಿ ಜನರಿಂದಲೇ ಮಾಹಿತಿ ಪಡೆಯುತ್ತೇನೆ ಎಂದು  ಹೇಳಿದರು.

ಕೋಮು ಗಲಭೆ ವಿಚಾರವಾಗಿ ರಾಜಕಾರಣ ಮಾಡಬಾರದು ಎಂಬ ಸಚಿವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ, ನಾನು ಬೆಂಕಿ ಹಚ್ಚಿಲ್ಲ, ಆರಿಸಿದ್ದೇನೆ.  ಬೆಂಕಿ ಹಚ್ಚುವ ಕೆಲಸವನ್ನು ನಾನು ಯಾವತ್ತೂ ಮಾಡಿಲ್ಲ. ನಾಗಮಂಗಲ ಪಟ್ಟಣದಲ್ಲಿ ಪೊಲೀಸ್ ವ್ಯವಸ್ಥೆಯ ವೈಫಲ್ಯ ಎದ್ದು ಕಾಣುತ್ತಿದೆ. ಮೊದಲೇ ಕ್ರಮ ಕೈಗೊಂಡಿದ್ದರೆ ಈ ರೀತಿಯ ಘಟನೆ ಆಗುತ್ತಿತ್ತಾ? ಎಂದು ಪ್ರಶ್ನಿಸಿದರು.

ಸರ್ವ ಜನಾಂಗದ ಶಾಂತಿಯ ತೋಟದ ಹೆಸರಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಮೆರವಣಿಗೆ ವೇಳೆ ಪೆಟ್ರೋಲ್ ಬಾಂಬ್​ ಎಸೆಯುವ ಕೆಲಸ ಆಗಿದೆ. ಪೊಲೀಸರ ಮೇಲೂ ಕಲ್ಲು ತೂರಾಟ ಮಾಡಿದವರು ಯಾರು? ನಾನು ಯಾವುದೇ 1 ಸಮುದಾಯ ಓಲೈಸುವ ಕೆಲಸ ಮಾಡುತ್ತಿಲ್ಲ. ತಲ್ವಾರ್​ ಹಿಡಿದು ಓಡಾಡ್ತಿದ್ದಾರೆ, ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಇದರಲ್ಲೇ ಗೊತ್ತಾಗುತ್ತದೆ ನೀವು ಹೇಗೆ ಆಡಳಿತ ನಡೆಸುತ್ತಿದ್ದೀರಿ  ಎಂದು ಕಿಡಿಕಾರಿದರು.

Key words: Union Minister, HDK, visit, Nagamangala, tomorrow