Monday, August 10, 2026

BDA Apartments

Home Front Page ಮಿಮ್ಸ್ ಮೇಲ್ದರ್ಜೆಗೆ, ಸುಸಜ್ಜಿತ ಕಟ್ಟಡಗಳ ನಿರ್ಮಾಣ: ಶಾಸಕ ಪಿ. ರವಿಕುಮಾರ್ ಗಣಿಗ ಸ್ಥಳ ಪರಿಶೀಲನೆ

ಮಿಮ್ಸ್ ಮೇಲ್ದರ್ಜೆಗೆ, ಸುಸಜ್ಜಿತ ಕಟ್ಟಡಗಳ ನಿರ್ಮಾಣ: ಶಾಸಕ ಪಿ. ರವಿಕುಮಾರ್ ಗಣಿಗ ಸ್ಥಳ ಪರಿಶೀಲನೆ

ಮಂಡ್ಯ,ಆಗಸ್ಟ್,10,2026 (www.justkannada.in):  ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್) ಹಾಗೂ ಬೋಧಕ ಆಸ್ಪತ್ರೆಯನ್ನು ಮತ್ತಷ್ಟು ಮೇಲ್ದರ್ಜೆಗೇರಿಸಿ, ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಸುಮಾರು ₹50 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ಗೌಡ ಗಣಿಗ ಅವರು ಜಿಲ್ಲಾಧಿಕಾರಿ ಡಾ. ಕುಮಾರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.

ಮಿಮ್ಸ್‌ ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಭ್ಯವಿರುವ ಮೂಲಸೌಕರ್ಯಗಳನ್ನು ಮತ್ತಷ್ಟು ವಿಸ್ತರಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಆಧುನಿಕ ವೈದ್ಯಕೀಯ ಶಿಕ್ಷಣ ನೀಡಲು ಅಗತ್ಯವಿರುವ ಅತ್ಯಾಧುನಿಕ ಹಾಗೂ ಸುಸಜ್ಜಿತ ಬೋಧನಾ ಕೊಠಡಿಗಳು, ಶೈಕ್ಷಣಿಕ ಸೌಲಭ್ಯಗಳು ಹಾಗೂ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ವಿದ್ಯಾರ್ಥಿ ವಸತಿ ನಿಲಯ ನಿರ್ಮಿಸುವ ಕುರಿತು ಶಾಸಕರು ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳೊಂದಿಗೆ ಸ್ಥಳದಲ್ಲಿಯೇ ಚರ್ಚಿಸಿದರು.

₹50 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಕಾಮಗಾರಿಗಳ ವಿನ್ಯಾಸ, ಕಟ್ಟಡಗಳ ಸ್ಥಳಾವಕಾಶ, ವಿದ್ಯಾರ್ಥಿಗಳಿಗೆ ಅಗತ್ಯವಿರುವ ಸೌಲಭ್ಯಗಳು ಹಾಗೂ ಭವಿಷ್ಯದಲ್ಲಿ ಮಿಮ್ಸ್‌ನ ವಿಸ್ತರಣೆಗೆ ಬೇಕಾಗುವ ಮೂಲಸೌಕರ್ಯಗಳ ಕುರಿತು ಸಮಗ್ರವಾಗಿ ಪರಿಶೀಲಿಸಿದರು.

ತುರ್ತಾಗಿ ನೀಲನಕ್ಷೆ ಸಿದ್ಧಪಡಿಸಲು ಸೂಚನೆ

ಮಿಮ್ಸ್ ಕೇವಲ ಮಂಡ್ಯ ಜಿಲ್ಲೆಗೆ ಸೀಮಿತವಾದ ವೈದ್ಯಕೀಯ ಸಂಸ್ಥೆಯಾಗದೆ ಸುತ್ತಮುತ್ತಲ ಜಿಲ್ಲೆಗಳ ಸಾವಿರಾರು ಜನರಿಗೆ ಆರೋಗ್ಯ ಸೇವೆ ಒದಗಿಸುವ ಪ್ರಮುಖ ಸಂಸ್ಥೆಯಾಗಿದೆ. ಹೀಗಾಗಿ ಹೊಸ ಕಟ್ಟಡಗಳ ನಿರ್ಮಾಣದಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಾಸಕ ಪಿ. ರವಿಕುಮಾರ್ ಗೌಡ ಗಣಿಗ ಸೂಚಿಸಿದರು.

ಯೋಜನೆಯ ಕಾಮಗಾರಿಯನ್ನು ಅನಗತ್ಯವಾಗಿ ವಿಳಂಬ ಮಾಡಬಾರದು. ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಕಟ್ಟಡಗಳ ವಿನ್ಯಾಸ ರೂಪಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಎಂಜಿನಿಯರ್‌ ಗಳು ತುರ್ತಾಗಿ ಸಮಗ್ರ ನೀಲನಕ್ಷೆ ಸಿದ್ಧಪಡಿಸಿ, ಚರ್ಚೆಗೆ ಮಂಡಿಸಬೇಕು. ಯೋಜನೆ ಅನುಷ್ಠಾನಗೊಂಡ ಬಳಿಕ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಶೈಕ್ಷಣಿಕ ವಾತಾವರಣ ದೊರೆಯುವಂತೆ ಯೋಜನೆ ರೂಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮಂಡ್ಯಕ್ಕೆ ಸುಸಜ್ಜಿತ ಟ್ರಾಮಾ ಕೇರ್ ಸೆಂಟರ್

ಇದೇ ಸಂದರ್ಭದಲ್ಲಿ ಡಿಎಚ್‌ ಒ ಕಚೇರಿ ಆವರಣದಲ್ಲಿರುವ ಜಾಗವನ್ನು ಶಾಸಕರು ಪರಿಶೀಲಿಸಿದರು. ಮಂಡ್ಯ ನಗರ ಹಾಗೂ ಜಿಲ್ಲೆಯ ಜನರಿಗೆ ತುರ್ತು ಸಂದರ್ಭಗಳಲ್ಲಿ ಅತ್ಯಾಧುನಿಕ ವೈದ್ಯಕೀಯ ಸೇವೆಗಳನ್ನು ತ್ವರಿತವಾಗಿ ಒದಗಿಸಲು ಸುಸಜ್ಜಿತ ಟ್ರಾಮಾ ಕೇರ್ ಸೆಂಟರ್ ನಿರ್ಮಾಣದ ಅಗತ್ಯವನ್ನು ಅವರು ಪ್ರತಿಪಾದಿಸಿದರು.

ಬೆಂಗಳೂರು–ಮೈಸೂರು ಹೆದ್ದಾರಿ ಸೇರಿದಂತೆ ಜಿಲ್ಲೆಯ ಪ್ರಮುಖ ರಸ್ತೆಗಳಲ್ಲಿ ಸಂಭವಿಸುವ ಅಪಘಾತಗಳು ಹಾಗೂ ಇತರ ತುರ್ತು ವೈದ್ಯಕೀಯ ಸಂದರ್ಭಗಳಲ್ಲಿ ರೋಗಿಗಳಿಗೆ ತಕ್ಷಣವೇ ಅಗತ್ಯ ಚಿಕಿತ್ಸೆ ದೊರೆಯುವ ವ್ಯವಸ್ಥೆ ಕಲ್ಪಿಸುವುದು ಅತ್ಯಂತ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಟ್ರಾಮಾ ಕೇರ್ ಸೆಂಟರ್ ನಿರ್ಮಾಣಕ್ಕೆ ಅಗತ್ಯವಿರುವ ಐದು ಎಕರೆ ಸೂಕ್ತ ಜಮೀನನ್ನು ಅತಿ ಶೀಘ್ರವಾಗಿ ಗುರುತಿಸುವಂತೆ ಜಿಲ್ಲಾಧಿಕಾರಿ ಡಾ. ಕುಮಾರ್ ಅವರ ಸಮ್ಮುಖದಲ್ಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.

ರೋಗಿಗಳ ಅಹವಾಲು ಆಲಿಸಿದ ಶಾಸಕ

ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸಿದ್ದ ಸಾರ್ವಜನಿಕರು ಹಾಗೂ ರೋಗಿಗಳ ಕುಂದುಕೊರತೆಗಳನ್ನೂ ಶಾಸಕ ಪಿ. ರವಿಕುಮಾರ್ ಗೌಡ ಗಣಿಗ ಆಲಿಸಿದರು. ಆಸ್ಪತ್ರೆಯಲ್ಲಿ ದೊರೆಯುತ್ತಿರುವ ಚಿಕಿತ್ಸೆ, ವೈದ್ಯರು ಮತ್ತು ಸಿಬ್ಬಂದಿಯ ಸ್ಪಂದನೆ ಹಾಗೂ ಮೂಲಭೂತ ಸೌಲಭ್ಯಗಳ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆದುಕೊಂಡರು.

ಬಳಿಕ ಮಿಮ್ಸ್ ನಿರ್ದೇಶಕ ಡಾ. ನರಸಿಂಹಮೂರ್ತಿ ಅವರಿಗೆ ಹಲವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ ಶಾಸಕರು, ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುವ ಪ್ರತಿಯೊಬ್ಬ ರೋಗಿಗೂ ಗುಣಮಟ್ಟದ ವೈದ್ಯಕೀಯ ಸೇವೆ ದೊರೆಯಬೇಕು. ಸಾರ್ವಜನಿಕರಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಬೇಕು. ಆಸ್ಪತ್ರೆಯಲ್ಲಿ ರೋಗಿಗಳು ಅನಗತ್ಯ ತೊಂದರೆ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ತಿಳಿಸಿದರು.

ವೈದ್ಯರು, ಸಿಬ್ಬಂದಿ ಸಮಯಪಾಲನೆ ಕಡ್ಡಾಯ

ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಕರ್ತವ್ಯಕ್ಕೆ ಸಮಯಕ್ಕೆ ಸರಿಯಾಗಿ ಹಾಜರಾಗುವುದನ್ನು ಕಡ್ಡಾಯಗೊಳಿಸಬೇಕು. ಕರ್ತವ್ಯಲೋಪ ಅಥವಾ ಸಮಯಪಾಲನೆ ಮಾಡದಿರುವ ಪ್ರಕರಣಗಳು ಕಂಡುಬಂದರೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಚಿಕಿತ್ಸೆಗೆ ಬರುವ ರೋಗಿಗಳ ನಡುವೆ ಯಾವುದೇ ರೀತಿಯ ತಾರತಮ್ಯ ಮಾಡಬಾರದು. ಬಡವರು, ಗ್ರಾಮೀಣ ಪ್ರದೇಶದವರು ಸೇರಿದಂತೆ ಆಸ್ಪತ್ರೆಗೆ ಬರುವ ಪ್ರತಿಯೊಬ್ಬರಿಗೂ ಸಮಾನವಾಗಿ ಚಿಕಿತ್ಸೆ ಮತ್ತು ಗೌರವ ದೊರೆಯಬೇಕು. ವೈದ್ಯರು ಹಾಗೂ ಸಿಬ್ಬಂದಿ ರೋಗಿಗಳು ಮತ್ತು ಅವರ ಕುಟುಂಬದವರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು ಎಂದು ಹೇಳಿದರು.

ಆಸ್ಪತ್ರೆಗೆ ಬರುವ ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ. ವೈದ್ಯರಾಗಲಿ, ಸಿಬ್ಬಂದಿಯಾಗಲಿ ಕರ್ತವ್ಯಲೋಪ ಅಥವಾ ಅನುಚಿತ ವರ್ತನೆ ತೋರಿದರೆ ಅವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಿ. ಇಂತಹ ಕ್ರಮದ ಸಂದರ್ಭದಲ್ಲಿ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯಬೇಡಿ. ನಮಗೆ ಸಾರ್ವಜನಿಕರ ಆರೋಗ್ಯ ಮತ್ತು ಉತ್ತಮ ವೈದ್ಯಕೀಯ ಸೇವೆಯೇ ಮುಖ್ಯ. ಅದಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಮಿಮ್ಸ್ ನಿರ್ದೇಶಕ ಡಾ. ನರಸಿಂಹಮೂರ್ತಿ ಅವರಿಗೆ ಶಾಸಕ ಪಿ. ರವಿಕುಮಾರ್ ಗೌಡ ಗಣಿಗ ಖಡಕ್ ಸೂಚನೆ ನೀಡಿದರು.

ವೈದ್ಯಕೀಯ ಶಿಕ್ಷಣ–ಆರೋಗ್ಯ ಸೇವೆ ಎರಡಕ್ಕೂ ಒತ್ತು

ಮಿಮ್ಸ್‌ನಲ್ಲಿ ₹50 ಕೋಟಿ ವೆಚ್ಚದಲ್ಲಿ ಹೊಸ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಉದ್ದೇಶವು ವೈದ್ಯಕೀಯ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವುದರ ಜೊತೆಗೆ ಬೋಧಕ ಆಸ್ಪತ್ರೆಯ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವ ಪಡೆದಿದೆ. ಇದರೊಂದಿಗೆ ಪ್ರತ್ಯೇಕ ಟ್ರಾಮಾ ಕೇರ್ ಸೆಂಟರ್ ಸ್ಥಾಪನೆಗೆ ಐದು ಎಕರೆ ಜಾಗ ಗುರುತಿಸುವಂತೆ ನೀಡಿರುವ ಸೂಚನೆಯು ಮಂಡ್ಯ ಜಿಲ್ಲೆಯ ತುರ್ತು ಆರೋಗ್ಯ ಸೇವಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶ ಹೊಂದಿದೆ.

ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್, ಮಿಮ್ಸ್ ನಿರ್ದೇಶಕ ಡಾ. ನರಸಿಂಹಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್‌ಒ) ಡಾ. ಬೆಟ್ಟಸ್ವಾಮಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು, ಎಂಜಿನಿಯರ್‌ಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Key words: upgrading. MIMS. MLA. P. Ravikumar Ganiga. inspects